ಬಸವಣ್ಣನ ವಚನಗಳು - 91 ರಿಂದ 100 ರವರೆಗೆ
೯೧.
ಪರಷ ಮುಟ್ಟಿದ ಬಳಿಕ ಕಬ್ಬುನವಾಗದು ನೋಡಾ!
ಲಿಂಗ(ವ) ಮುಟ್ಟಿದ ಬಳಿಕ
ಕುಚಿತ್ತಾಚಾರವಾಗದು ನೋಡಾ
ಕೂಡಲಸಂಗನ ಶರಣರು ಅನ್ಯವನರಿಯರಾಗಿ.
೯೨.
ದೇವಲೋಕ ಮರ್ತ್ಯಲೋಕವೆಂಬುದು
ಬೇರೆ ಮತ್ತುಂಟೆ ? ಇಹಲೋಕದೊಳಗೇ ಮತ್ತನಂತಲೋಕ!
ಶಿವಲೋಕ ಶಿವಾಚಾರವಯ್ಯ,
ಶಿವಭಕ್ತನಿದ್ದ ಠಾವೇ ದೇವಲೋಕ,
ಭಕ್ತನಂಗಳವೇ ವಾರಣಾಸಿ,
ಶಿವಭಕ್ತನ ಕಾಯವೇ ಕೈಲಾಸ, ಇದು ಸತ್ಯ ಕೂಡಲಸಂಗಮದೇವ.
೯೩.
ಕಟ್ಟಿದಿರಲ್ಲಿ ಶಿವಭಕ್ತನ ಕಂಡು,
ದೃಷ್ಟಿಯಾರೆ ಮನಮುಟ್ಟಿ ನೋಡಿ ಶರಣೆಂದರೆ
ಹುಟ್ಟೇಳು ಜನ್ಮದ ಪಾಪ ಬಿಟ್ಟು ಹೋಹವು ನೋಡಾ!
ಮುಟ್ಟಿ ಚರಣಕ್ಕೆರಗಿದರೆ,
ತನು ಒಪ್ಪಿದಂತಿಹುದು
ಪರುಷ ಮುಟ್ಟಿದಂತೆ.
ಕರ್ತೃ ಕೂಡಲಸಂಗನ ಶರಣರ ಸಂಗವು!
ಮತ್ತೆ ಭವಮಾಲೆಯ ಹೊದ್ದಲೀಯದು ನೋಡಾ!
೯೪.
ಆರಾರ ಸಂಗವೇನೇನ ಮಾಡದಯ್ಯ!
ಕೀಡೆ ಕುಂಡಲಿಗನಾಗದೇನಯ್ಯ ?
ಚಂದನದ ಸನ್ನಿಧಿಯಲ್ಲಿ, ಪರಿಮಳ ತಾಗಿ
ಬೇವು-ಬೊಬ್ಬುಲಿ-ತರಿಯ ಗಂಧಂಗಳಾಗವೆ ?
ನಮ್ಮ ಕೂಡಲಸಂಗನ ಶರಣರ ಸನ್ನಿಧಿಯಲ್ಲಿದ್ದು
ಕರ್ಮ ನಿರ್ಮಳವಾಗದಿಹುದೇ ?
೯೫.
ಹಾವಿನ ಡೊಂಕು ಹುತ್ತಕ್ಕೆ ಸಸಿನ.
ನದಿಯ ಡೊಂಕು ಸಮುದ್ರಕ್ಕೆ ಸಸಿನ.
ನಮ್ಮ ಕೂಡಲಸಂಗನ ಶರಣರ ಡೊಂಕು ಲಿಂಗಕ್ಕೆ ಸಸಿನ.
೯೬.
ಆಳಿಗೊಂಡಿಹರೆಂದು ಅಂಜಲದೇಕೆ ?
ನಾಸ್ತಿಕವಾಡಿಹರೆಂದು ನಾಚಲದೇಕೆ ?
ಆರಾದಡಾಗಲಿ ಶ್ರೀ ಮಹಾದೇವಂಗೆ ಶರಣೆನ್ನಿ.
ಏನೂ ಅರಿಯೆನೆಂದು ಮೋನಗೊಂಡಿರಬೇಡ
ಕೂಡಲಸಂಗಮದೇವರ ಮುಂದೆ ದಂ-ದಣ-ದತ್ತಣಯೆನ್ನಿ.
೯೭.
ಹಮ್ಮಿನ ಭಕ್ತಿ ಕರ್ಮಕ್ಕೆ ಮೊದಲು!
ಮರ್ಮವರಿಯದ ಮಾಟ ಸಯಿದಾನದ ಕೇಡು!
ಬಂದ ಸಮಯೋಚಿತವನರಿಯದಿದ್ದರೆ
ನಿಂದಿರಲೊಲ್ಲ ಕೂಡಲಸಂಗಮದೇವ.
೯೮.
ಬಲ್ಲಿದರೊಡನೆ ಬವರವಾದರೆ
ಗೆಲಲುಂಟು ಸೋಲಲುಂಟು-
ಕಳನೊಳಗೆ ಭಾಷೆ ಪೂರಾಯವಯ್ಯ!
ನಮ್ಮ ಕೂಡಲಸಂಗನ ಶರಣರಿಗೆ
ಮಾಡಿ ಮಾಡಿ, ಧನ ಸವೆದು ಬಡವಾದರೆ
ಆ ಭಕ್ತನು ಲಿಂಗಕ್ಕೆ ಪೂಜೆಯಹನು.
೯೯.
ಗೀತವ ಬಲ್ಲಾತ ಜಾಣನಲ್ಲ.
ಮಾತ ಬಲ್ಲಾತ ಜಾಣನಲ್ಲ.
ಜಾಣನು ಜಾಣನು, ಆತ ಜಾಣನು;
ಲಿಂಗವ ನೆರೆ ನಂಬಿದಾತ ಆತ ಜಾಣನು!
ಜಂಗಮಕ್ಕೆ ಸವೆಸುವಾತ ಆತ ಜಾಣನು!
ಜವನ ಬಾಯಲು ಬಾಲವ ಕೊಯ್ದು
ಹೋದಾತ ಆತ ಜಾಣನು
ನಮ್ಮ ಕೂಡಲಸಂಗನ ಶರಣನು!
೧೦೦.
ಹಾವು-ಹದ್ದು-ಕಾಗೆ-ಗೂಗೆ ಅನಂತ ಕಾಲ ಬದುಕವೆ ?
ಬೇಡವೋ ಮಾನವ,
ಲೇಸೆನಿಸಿಕೊಂಡು ಬದುಕುವೋ, ಮಾನವ, ಶಿವಭಕ್ತನಾಗಿ!
"ಜೀವಿತಂ ಶಿವಭಕ್ತಾನಾಂ ವರಂ ಪಂಚ ದಿನಾನಿ ಚ
ಅಜಕಲ್ಪ ಸಹಸ್ರಂ ತು ಭಕ್ತಿಹೀನಂ ನ ಶಾಂಕರಿ" ಎಂದುದಾಗಿ
ನಮ್ಮ ಕೂಡಲಸಂಗಮದೇವರ ಭಕ್ತಿವಿಡಿದು
ಐದು ದಿನವಾದರೂ ಬದುಕಿದರೆ ಸಾಲದೆ ?!
Comments
Post a Comment