Skip to main content

ಬಸವಣ್ಣನ ವಚನಗಳು - 91 ರಿಂದ 100 ರವರೆಗೆ

ಬಸವಣ್ಣನ ವಚನಗಳು - 91 ರಿಂದ 100 ರವರೆಗೆ

೯೧.
ಪರಷ ಮುಟ್ಟಿದ ಬಳಿಕ ಕಬ್ಬುನವಾಗದು ನೋಡಾ!
ಲಿಂಗ(ವ) ಮುಟ್ಟಿದ ಬಳಿಕ
ಕುಚಿತ್ತಾಚಾರವಾಗದು ನೋಡಾ
ಕೂಡಲಸಂಗನ ಶರಣರು ಅನ್ಯವನರಿಯರಾಗಿ.
೯೨.
ದೇವಲೋಕ ಮರ್ತ್ಯಲೋಕವೆಂಬುದು
ಬೇರೆ ಮತ್ತುಂಟೆ ? ಇಹಲೋಕದೊಳಗೇ ಮತ್ತನಂತಲೋಕ!
ಶಿವಲೋಕ ಶಿವಾಚಾರವಯ್ಯ,
ಶಿವಭಕ್ತನಿದ್ದ ಠಾವೇ ದೇವಲೋಕ,
ಭಕ್ತನಂಗಳವೇ ವಾರಣಾಸಿ,
ಶಿವಭಕ್ತನ ಕಾಯವೇ ಕೈಲಾಸ, ಇದು ಸತ್ಯ ಕೂಡಲಸಂಗಮದೇವ.
೯೩.
ಕಟ್ಟಿದಿರಲ್ಲಿ ಶಿವಭಕ್ತನ ಕಂಡು,
ದೃಷ್ಟಿಯಾರೆ ಮನಮುಟ್ಟಿ ನೋಡಿ ಶರಣೆಂದರೆ
ಹುಟ್ಟೇಳು ಜನ್ಮದ ಪಾಪ ಬಿಟ್ಟು ಹೋಹವು ನೋಡಾ!
ಮುಟ್ಟಿ ಚರಣಕ್ಕೆರಗಿದರೆ,
ತನು ಒಪ್ಪಿದಂತಿಹುದು
ಪರುಷ ಮುಟ್ಟಿದಂತೆ.
ಕರ್ತೃ ಕೂಡಲಸಂಗನ ಶರಣರ ಸಂಗವು!
ಮತ್ತೆ ಭವಮಾಲೆಯ ಹೊದ್ದಲೀಯದು ನೋಡಾ!
೯೪.
ಆರಾರ ಸಂಗವೇನೇನ ಮಾಡದಯ್ಯ!
ಕೀಡೆ ಕುಂಡಲಿಗನಾಗದೇನಯ್ಯ ?
ಚಂದನದ ಸನ್ನಿಧಿಯಲ್ಲಿ, ಪರಿಮಳ ತಾಗಿ
ಬೇವು-ಬೊಬ್ಬುಲಿ-ತರಿಯ ಗಂಧಂಗಳಾಗವೆ ?
ನಮ್ಮ ಕೂಡಲಸಂಗನ ಶರಣರ ಸನ್ನಿಧಿಯಲ್ಲಿದ್ದು
ಕರ್ಮ ನಿರ್ಮಳವಾಗದಿಹುದೇ ?
೯೫.
ಹಾವಿನ ಡೊಂಕು ಹುತ್ತಕ್ಕೆ ಸಸಿನ.
ನದಿಯ ಡೊಂಕು ಸಮುದ್ರಕ್ಕೆ ಸಸಿನ.
ನಮ್ಮ ಕೂಡಲಸಂಗನ ಶರಣರ ಡೊಂಕು ಲಿಂಗಕ್ಕೆ ಸಸಿನ.
೯೬.
ಆಳಿಗೊಂಡಿಹರೆಂದು ಅಂಜಲದೇಕೆ ?
ನಾಸ್ತಿಕವಾಡಿಹರೆಂದು ನಾಚಲದೇಕೆ ?
ಆರಾದಡಾಗಲಿ ಶ್ರೀ ಮಹಾದೇವಂಗೆ ಶರಣೆನ್ನಿ.
ಏನೂ ಅರಿಯೆನೆಂದು ಮೋನಗೊಂಡಿರಬೇಡ
ಕೂಡಲಸಂಗಮದೇವರ ಮುಂದೆ ದಂ-ದಣ-ದತ್ತಣಯೆನ್ನಿ.
೯೭.
ಹಮ್ಮಿನ ಭಕ್ತಿ ಕರ್ಮಕ್ಕೆ ಮೊದಲು!
ಮರ್ಮವರಿಯದ ಮಾಟ ಸಯಿದಾನದ ಕೇಡು!
ಬಂದ ಸಮಯೋಚಿತವನರಿಯದಿದ್ದರೆ
ನಿಂದಿರಲೊಲ್ಲ ಕೂಡಲಸಂಗಮದೇವ.
೯೮.
ಬಲ್ಲಿದರೊಡನೆ ಬವರವಾದರೆ
ಗೆಲಲುಂಟು ಸೋಲಲುಂಟು-
ಕಳನೊಳಗೆ ಭಾಷೆ ಪೂರಾಯವಯ್ಯ!
ನಮ್ಮ ಕೂಡಲಸಂಗನ ಶರಣರಿಗೆ
ಮಾಡಿ ಮಾಡಿ, ಧನ ಸವೆದು ಬಡವಾದರೆ
ಆ ಭಕ್ತನು ಲಿಂಗಕ್ಕೆ ಪೂಜೆಯಹನು.
೯೯.
ಗೀತವ ಬಲ್ಲಾತ ಜಾಣನಲ್ಲ.
ಮಾತ ಬಲ್ಲಾತ ಜಾಣನಲ್ಲ.
ಜಾಣನು ಜಾಣನು, ಆತ ಜಾಣನು;
ಲಿಂಗವ ನೆರೆ ನಂಬಿದಾತ ಆತ ಜಾಣನು!
ಜಂಗಮಕ್ಕೆ ಸವೆಸುವಾತ ಆತ ಜಾಣನು!
ಜವನ ಬಾಯಲು ಬಾಲವ ಕೊಯ್ದು
ಹೋದಾತ ಆತ ಜಾಣನು
ನಮ್ಮ ಕೂಡಲಸಂಗನ ಶರಣನು!
೧೦೦.
ಹಾವು-ಹದ್ದು-ಕಾಗೆ-ಗೂಗೆ ಅನಂತ ಕಾಲ ಬದುಕವೆ ?
ಬೇಡವೋ ಮಾನವ,
ಲೇಸೆನಿಸಿಕೊಂಡು ಬದುಕುವೋ, ಮಾನವ, ಶಿವಭಕ್ತನಾಗಿ!
"ಜೀವಿತಂ ಶಿವಭಕ್ತಾನಾಂ ವರಂ ಪಂಚ ದಿನಾನಿ ಚ
ಅಜಕಲ್ಪ ಸಹಸ್ರಂ ತು ಭಕ್ತಿಹೀನಂ ನ ಶಾಂಕರಿ" ಎಂದುದಾಗಿ
ನಮ್ಮ ಕೂಡಲಸಂಗಮದೇವರ ಭಕ್ತಿವಿಡಿದು
ಐದು ದಿನವಾದರೂ ಬದುಕಿದರೆ ಸಾಲದೆ ?!

Comments

Popular posts from this blog

ಸರ್ವಜ್ಞನ ವಚನಗಳು - 91 ರಿಂದ 100

ಸರ್ವಜ್ಞನ ವಚನಗಳು -  91 ರಿಂದ 100 ೯೧. ಹುಟ್ಟಿಸುವನಜನೆಂಬ, ಕಷ್ಟದಾ ನುಡಿಬೇಡ ಹುಟ್ಟಿಪನು ತನ್ನ ಶಿರಹರಿಯೆ ಮತ್ತೊಂದು ಹುಟ್ಟಿಸನದೇಕೆ ಸರ್ವಜ್ಞ ೯೨. ಹತ್ತು ಭವವನು ಎತ್ತಿ, ಎತ್ತು ಎಮ್ಮೆಯ ಕಾದು ಮತ್ತೆ ಪಾಂಡವರಿಗಾಳಾದ ಹರಿಯು ತಾ ನೆತ್ತಣಾ ದೈವ ಸರ್ವಜ್ಞ ೯೩. ನರಸಿಂಹನವತಾರ ಹಿರಿದಾದ ಅದ್ಭುತವು ಶರಭನು ಗುರಿಂದ ಕೊಲುವಾಗ ನರಿಯಂದವಾದ ಸರ್ವಜ್ಞ ೯೪. ಪಾಲಿಸುವ ಹರಿಯು ತಾ, ಸೋಲನೆಂದೆನಬೇಡ ಶೂಲಿ ತ ಮಗನ ತಲೆ ಚಿಗುಟಿ ಹರಿ ಏಕೆ ಪಾಲಿಸದೆ ಹೋದ ಸರ್ವಜ್ಞ ೯೫. ಹರನವನ ಕೊಲುವಂದು, ಎರಳೆಯನು ಎಸೆವಂದು ಮರಳಿ ವರಗಳನು ಕೊಡುವಂದು ಪುರಹರಗೆ ಸರಿಯಾದ ಕಾಣೆ ಸರ್ವಜ್ಞ ೯೬. ಹರಿ ಬೊಮ್ಮನೆಂಬವರು, ಹರನಿಂದಲಾದವರು ಅರಸಿಗೆ ಆಳು ಸರಿಯಹನೆ ಶಿವನಿಂದ ಮೆರೆವರಿನ್ನಾರು ಸರ್ವಜ್ಞ ೯೭. ಹರಿದಲೆಯ ಬೊಮ್ಮಂಗೆ, ಕುರಿದಲೆಯ ದಕ್ಷಂಗೆ ನೆರೆಹತ್ತು ಜನನವಾಹರಿಗೆ ಇವರುಗಳು ಸರಿಯಹರೆ ಸರ್ವಜ್ಞ ೯೮. ಧರೆಯ ತೇರನು ಮಾಡಿ, ಅಜನ ಸಾರಥಿ ಮಾಡಿ ಹರಿಯ ಶರವಮಾಡಿ ತ್ರಿಪುರವನು ಆಳಿದಂತೆ ಸರಿಯಾರು ಹೇಳಿ ಸರ್ವಜ್ಞ ೯೯. ಇಂದ್ರನಾನೆಯನೇರಿ ಒಂದನೂ ಕೊಡಲರಿಯ ಚ್ಂದ್ರಶೇಖರನು ಮುದಿಯೆತ್ತನೇರಿ ಬೇಕೆಂದುದನು ಕೊಡುವ ಸರ್ವಜ್ಞ ೧೦೦. ಉಂಬಳಿಯ ಇದ್ದವರ, ಕಂಬಳಿಯ ಹೊದೆಯುವರೆ ಶಂಭುವಿದ್ದಂತೆ ಮತ್ತೊಂದು ದೈವವನು ನಂಬುವನೆ ಹೆಡ್ಡ ಸರ್ವಜ್ಞ

ಸರ್ವಜ್ಞನ ವಚನಗಳು - 1 ರಿಂದ 10

ಸರ್ವಜ್ಞನ ವಚನಗಳು -  1 ರಿಂದ 20 ೧. ನಂದಿಯನು ಏರಿದನ ಚಂದಿರನ ಮುಡಿದವನ ಕಂದನಂ ಬೇಡಿ ನೆನೆವುತ್ತ ಮುಂದೆ ಹೇಳುವೆನು ಸರ್ವಜ್ಞ ೨. ಮುನ್ನ ಕಾಲದಲಿ ಪನ್ನಗಧರನಾಳು ಎನ್ನೆಯ ಪೆಸರು, ಪುಷ್ಪದತ್ತನು ಎಂದು ಮನಿಪರು ದಯದಿ ಸರ್ವಜ್ಞ ೩. ಅಂದಿನ ಪುಷ್ಪದತ್ತ ಬಂದ ವರರುಚಿಯಾಗಿ ಮುದವ ಸಾರೆ, ಸರ್ವಜ್ಞನೆಂದೆನಿಸಿ ನಿಂದವನು ನಾನೆ ಸರ್ವಜ್ಞ ೪. ಸಣ್ಣನೆಯ ಮಳಲೊಳಗೆ ನುಣ್ಣನೆಯ ಶಿಲೆಯೊಳಗೆ ಬಣ್ಣೆಸಿಬರೆದ ಪಟದೊಳಗೆಯಿರುವಾತ ತಣ್ಣೊಳಗೆ ಇರನೇ ಸರ್ವಜ್ಞ ೫. ಹೊಲಸು ಮಾಂಸದ ಹುತ್ತ ಎಲುವಿನಾ ಹಂದರವು ಹೊಲೆಬಲಿದ ತನುವಿನೊಳಗಿರ್ದುಮದರೊಳಗೆ ಕುಲವನರಸುವರೆ ಸರ್ವಜ್ಞ ೬. ಎಲುವಿನೀ ಕಾಯಕ್ಕೆ ಸಲೆ ಚರ್ಮದ ಹೊದಿಕೆ ಮಲ ಮೂತ್ರ ಕ್ರಿಮಿಗಳೊಳಗಿರ್ದ ದೇಹಕ್ಕೆ ಕುಲವಾವುದಯ್ಯ ಸರ್ವಜ್ಞ ೭. ಸರ್ವಜ್ಞನೆಂಬುವನು ಗರ್ವದಿಂದಾದವನೆ ? ಸರ್ವರೊಳಗೊಂದು ನುಡಿಗಲಿತು ವಿದ್ಯೆಯ ಪರ್ವತವೇ ಆದ ಸರ್ವಜ್ಞ ೮. ಗುರುವಿನಾ ವಿಸ್ತರದ, ಪರಿಯನಾನೇನೆಂಬೆ ಮೆರೆವ ಬ್ರಹ್ಮಾಂಡದೊಳಹೊರಗೆ ಅವ ಬೆಳಗಿ ಪರಿಪೂರ್ಣನಿರ್ಪ ಸರ್ವಜ್ಞ ೯. ಊರಿಂಗೆ ದಾರಿಯನು ಆರು ತೋರಿದರೇನು? ಸಾರಾಯದಾ ನಿಜವ ತೋರುವ ಗುರುವು ತಾ ನಾರಾದರೇನು? ಸರ್ವಜ್ಞ ೧೦. ಪರತತ್ವ ತನ್ನೊಳಗೆ ಎರವಿಲ್ಲದಿರುತಿರ್ದು ಪರದೇಶಿಯಂತೆ ಇರುತಿರ್ಪಯೋಗಿಯನು ಪರಮಗುರುವೆಂಬೆ ಸರ್ವಜ್ಞ

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ...