Skip to main content

ಬಸವಣ್ಣನ ವಚನಗಳು - 181 ರಿಂದ 190 ರವರೆಗೆ

೧೮೧.
ಉದಯಾಸ್ತಮಾನವೆನ್ನ ಬೆಂದ ಬಸಿರಿಂಗೆ ಕುದಿಯಲಲ್ಲದೆ,
ನಿಮ್ಮ ನೆನೆಯಲು ತೆರಹಿಲ್ಲವಯ್ಯ.
ಎಂತೊ ಲಿಂಗ ತಂದೆ, ಎಂತಯ್ಯ ಎನ್ನ ಪೂರ್ವಲಿಖಿತ ?
ಬೆರಣಿಯನಾಯಲಲ್ಲದೆ
ಅಟ್ಟುಣ್ಣ ತೆರಹಿಲ್ಲೆನಗೆ!
ನೀ ಕರುಣಿಸು ಕೂಡಲಸಂಗಮದೇವ.
೧೮೨.
ಬೆಲ್ಲವ ತಿಂದ ಕೋಡಗದಂತೆ
ಸಿಹಿಯ ನೆನೆಯದಿರಾ ಮನವೆ!
ಕಬ್ಬ ತಿಂದ ನರಿಯಂತೆ
ಹಿಂದಕ್ಕೆಳಸದಿರಾ ಮನವೇ!
ಗಗನವನಡರಿದ ಕಾಗೆಯಂತೆ
ದೆಸೆದೆಸೆಗೆ ಹಂಬಲಿಸದಿರಾ ಮನವೇ!
ಕೂಡಲಸಂಗನ ಶರಣರ ಕಂಡು
ಲಿಂಗವೆಂದೇ ನಂಬು ಮನವೇ!
೧೮೩.
ಒಡೆಯನ ಕಂಡರೆ ಕಳ್ಳನಾಗದಿರಾ ಮನವೆ!
ಭವದ ಬಾಧೆಯ ತಪ್ಪಿಸಿಕೊಂಬಡೆ
ನೀನು ನಿಯತವಾಗಿ ಭಯಭರಿತನಾಗಿ,
ಅಹಂಕಾರಿಯಾಗದೆ ಶರಣೆನ್ನು ಮನವೇ!
ಕೂಡಲಸಂಗನ ಶರಣರಲ್ಲಿ
ಭಕ್ತಿಯ ನೋನುವಡೆ
ಕಿಂಕರನಾಗಿ ಬದುಕು ಮನವೇ.
೧೮೪.
ಕೋಟ್ಯನುಕೋಟಿ ಜಪವ ಮಾಡಿ
ಕೋಟಲೆಗೊಳ್ಳಲೆದೇಕೆ ಮನವೇ ?!
ಕಿಂಚಿತು ಗೀತ ಒಂದನಂತಕೋಟಿ ಜಪ!
ಜಪವೆಂಬುದೇಕೆ ಮನವೇ ?
ಕೂಡಲಸಂಗನ ಶರಣರ ಕಂಡು
ಆಡಿ, ಹಾಡಿ ಬದುಕು ಮನವೇ!
೧೮೫.
ಮನವೇ ನಿನ್ನ ಜನನದ ಪರಿಭವವ ಮರೆದೆಯಲ್ಲಾ!
ಮನವೇ, ಲಿಂಗವ ನಂಬು ಕಂಡಾ!
ಮನವೇ, ಜಂಗಮವ ನಂಬು ಕಂಡಾ!
ಮನವೇ, ಕೂಡಲಸಂಗಮದೇವರ
ಬಿಡದೆ ಬೆಂಬತ್ತು ಕಂಡಾ!







೧೮೬.
ಕೊಡುವಾತ ಸಂಗ, ಕೊಂಬಾತ ಸಂಗ ಕಾಣಿರೆಲವೋ!
ನರಮಾನವರು ಕೊಡುವರೆಂಬವನ ಬಾಯಲ್ಲಿ
ಬಾಲಹುಳುಗಳು ಸುರಿಯವೆ ?
ಮೂರು ಲೋಕಕ್ಕೆ ನಮ್ಮ ಕೂಡಲಸಂಗಯ್ಯ ಕೊಡುವ ಕಾಣಿರೆಲವೊ!
೧೮೭.
ಸುರರ ಬೇಡಿದರಿಲ್ಲ! ನರರ ಬೇಡಿದರಿಲ್ಲ!
ಬರಿದೆ ಧೃತಿಗೆಡಬೇಡ ಮನವೇ
ಆರನಾದರೆಯೂ ಬೇಡಿ ಬೇಡಿ
ಬರಿದೆ ಧೃತಿಗೆಡಬೇಡ ಮನವೇ!
ಕೂಡಲಸಂಗಮದೇವರನಲ್ಲದೆ ಆರ ಬೇಡಿದರಿಲ್ಲ ಮನವೇ!
೧೮೮.
ಹೃದಯದಿ ಕತ್ತರಿ, ತುದಿನಾಲಿಗೆ ಬೆಲ್ಲಂ ಭೋ!
ಆಡಿ ಏವೆಂ ಭೊ, ಹಾಡಿ ಏವೆಂ ಭೋ!
ನಿಚ್ಚ ನಿಚ್ಚ ಶಿವರಾತ್ರಿಯ ಮಾಡಿ ಏವೆಂ ಭೋ!
ಆನು ಎನ್ನಂತೆ, ಮನವು ಮನದಂತೆ!
ಕೂಡಲಸಂಗಮದೇವ ತಾನು ತನ್ನಂತೆ!
೧೮೯.
ಕೆಲಕ್ಕೆ ಶುದ್ಧನಾದೆನಲ್ಲದೆ
ಎನ್ನ ಮನಕ್ಕೆ ಶುದ್ಧನಾಗೆನೇಕಯ್ಯ!
ಕೈ ಮುಟ್ಟಿ ಪೂಜಿಸುವಡೆನ್ನ ಕೈ ಶುದ್ಧವಲ್ಲಯ್ಯ!
ಮನ ಮುಟ್ಟಿ ಪೂಜಿಸುವಡೆನ್ನ ಮನ ಶುದ್ಧವಲ್ಲಯ್ಯ!
ಭಾವ ಶುದ್ಧವಾದರೆ
ಕೂಡಲಸಂಗಯ್ಯನಿತ್ತ ಬಾ ಎಂದೆತ್ತಿಕೊಳ್ಳನೇಕಯ್ಯ ?!
೧೯೦.
ಲಿಂಗದಲ್ಲಿ ಕಠಿಣವುಂಟೆ ?
ಜಂಗಮದಲ್ಲಿ ಕುಲವುಂಟೆ ?
ಪ್ರಸಾದದಲ್ಲಿ ಅರುಚಿಯುಂಟೆ ?
ಈ ತ್ರಿವಿಧದಲ್ಲಿ ಭಾವಭೇದವನರಸುವೆನು:
ಕೂಡಲಸಂಗಮದೇವಾ,
ಧಾರೆವಟ್ಟಲೆನ್ನ ಮನವು.

Comments

Popular posts from this blog

ಬಸವಣ್ಣನ ವಚನಗಳು - 331 ರಿಂದ 340 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೩೧. ವ್ಯಾಸ ಬೋಯಿತಿಯ ಮಗ. ಮಾರ್ಕಂಡೇಯ ಮಾತಂಗಿಯ ಮಗ. ಮಂಡೋದರಿ ಕಪ್ಪೆಯ ಮಗಳು. ಕುಲವನರಸದಿರಿ ಭೋ! ಕುಲದಿಂದ ಮುನ್ನೇನಾದಿರಿ ಭೋ! ಸಾಕ್ಷಾತ್ ಅಗಸ್ತ್ಯ ಕಬ್ಬಿಲ. ದೂರ್ವಾಸ ಮಚ್ಚಿಗ. ಕಶ್ಯಪ ಕಮ್ಮಾರ. ಕೌಂಡಿನ್ಯನೆಂಬ ಋಷಿ ಮೂರುಲೋಕವರಿಯೆ ನಾವಿದ ಕಾಣಿ ಭೋ! ನಮ್ಮ ಕೂಡಲಸಂಗನ ವಚನವಿಂತೆಂದುದು- "ಶ್ವಪಚೋಪಿಯಾದರೇನು ಶೀವಭಕ್ತನೇ ಕುಲಜಂ" ಭೋ! ೩೩೨. ಹೊಲೆಗಂಡಲ್ಲದೆ ಪಿಂಡದ ನೆಲೆಗಾಶ್ರಯವಿಲ್ಲ. ಜಲಬಿಂದುವಿನ ವ್ಯವಹಾರವೊಂದೇ. ಆಶೆಯಾಮಿಷ ಹರ್ಷರೋಷ ವಿಷಯಾದಿಗಳೆಲ್ಲವೊಂದೇ. ಏನನೋದಿ ಏನ ಕೇಳಿ ಏನು ಫಲ ?! ಕುಲಜನೆಂಬುದಕ್ಕೆ ಆವುದು ದೃಷ್ಟ ? "ಸಪ್ತಧಾತುಸಮಂ ಪಿಂಡಂ ಸಮಯೋನಿಸಮುದ್ಭವಂ | ಆತ್ಮಾಜೀವಸ್ಸಮಸ್ತಸ್ಮಾತ್ ವರ್ಣಾನಾಂ ಕಿಂ ಪ್ರಯೋಜನಂ ?" || ಕಾಸಿ ಕಮ್ಮಾರನಾದ, ಬೀಸಿ ಮಡಿವಾಳನಾದ, ಹಾಸನಿಕ್ಕಿ ಸಾಲಿಗನಾದ, ವೇದವನೋದಿ ಹಾರುವನಾದ. ಕರ್ಣದಲ್ಲಿ ಜನಿಸಿದವರುಂಟೆ ಜಗದೊಳಗೆ ? ಇದು ಕಾರಣ, ಕೂಡಲಸಂಗಮದೇವ, ಲಿಂಗಸ್ಥಲವನರಿದವನೇ ಕುಲಜನು! ೩೩೩. ಕೊಲುವವನೇ ಮಾದಿಗ! ಹೊಲಸ ತಿಂಬವನೇ ಹೊಲೆಯ! ಕುಲವೇನೋ ? ಆವದಿರ ಕುಲವೇನೋ ? ಸಕಲ ಜೀವಾ

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ಜರಿದ

ಬಸವಣ್ಣನ ವಚನಗಳು - 371 ರಿಂದ 380 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೭೧. ಜಂಬೂದ್ವೀಪನವಖಂಡಪೃಥ್ವಿಯೊಳಗೆ ಕೇಳಿರಯ್ಯ ಎರಡಾಳಿನ ಭಾಷೆಯ! ಕೊಲುವೆನೆಂಬ ಭಾಷೆ ದೇವನದು, ಗೆಲುವೆನೆಂಬ ಭಾಷೆ ಭಕ್ತನದು. ಸತ್ಯವೆಂಬ ಕೂರಲಗನೆ ಕಳೆದುಕೊಂಡು ಸದ್ಭಕ್ತರು ಗೆದ್ದರು ಕಾಣಾ ಕೂಡಲಸಂಗಮದೇವ. ೩೭೨. ಶಿವಭಕ್ತನಾಗಿ ತನ್ನ ಹಿಡಿದಹೆನೆಂದು ಹೋದರೆ ನುಗ್ಗುಮಾಡುವ, ನುಸಿಯ ಮಾಡುವ! ಮಣ್ಣುಮಾಡುವ, ಮಸಿಯ ಮಾಡುವ! ಕೂಡಲಸಂಗಮದೇವರ ನೆರೆನಂಬಿದನಾದರೆ ಕಡೆಗೆ ತನ್ನಂತೆ ಮಾಡುವ. ೩೭೩. ಅರೆವನಯ್ಯ ಸಣ್ಣವಹನ್ನಕ ಒರೆವನಯ್ಯ ಬಣ್ಣಗಾಬನ್ನಕ ಅರೆದರೆ ಸುಣ್ಣವಾಗಿ, ಒರೆದರೆ ಬಣ್ಣವಾದರೆ ಕೂಡಲಸಂಗಮದೇವನೊಲಿದು ಸಲಹುವನು. ೩೭೪. ಎಡದ ಪಾದದಲೊದ್ದರೆ ಬಲದ ಪಾದವ ಹಿಡಿವೆ! ಬಲದ ಪಾದದಲೊದ್ದರೆ ಎಡದ ಪಾದವ ಹಿಡಿವೆ! ತ್ರಾಹಿ, ತ್ರಾಹಿ! ತಪ್ಪೆನ್ನದು, ಕ್ಷಮೆ ನಿನ್ನದು! ಕೂಡಲಸಂಗಮದೇವ ನಿಮ್ಮ ಕರುಣದ ಕಂದ ನಾನು! ೩೭೫. ಅಂಜಿದರಾಗದು, ಅಳುಕಿದರಾಗದು! ವಜ್ರಪಂಜರದೊಳಗಿದ್ದರಾಗದು! ತಪ್ಪದೆಲವೋ ಲಲಾಟಲಿಖಿತ! ಕಕ್ಕುಲತೆಬಟ್ಟರಾಗದು ನೋಡಾ! ಧೃತಿಗೆಟ್ಟು ಮನ ಧಾತುಗೆಟ್ಟರೆ ಅಪ್ಪುದು ತಪ್ಪದು ಕೂಡಲಸಂಗಮದೇವ. ೩೭೬. ಆಯುಷ್ಯ ತೀರಿದಲ್ಲದೆ ಮರಣವಿಲ್ಲ. ಭಾಷೆ ತೀರಿದಲ