Skip to main content

ಅಕ್ಕನ ವಚನಗಳು - 101 ರಿಂದ 110 ರವರೆಗೆ

೧೦೧.
ಕಂಗಳೊಳಗೆ ತೊಳಗಿ ಬೆಳಗುವ
ದಿವ್ಯರೂಪನ ಕಂಡು ಮೈಮರೆದೆನವ್ವ
ಮಣಿಮುಕುಟದ ಫಣಿ-ಕಂಕಣದ
ನಗೆಮೊಗದ ಸುಲಿಪಲ್ಲ ಸೊಬಗನ ಕಂಡು ಮನಸೋತೆನವ್ವ
ಇಂತಾಗಿ ಚೆನ್ನಮಲ್ಲಿಕಾರ್ಜುನನೆನ್ನ ಮದುವಣಿಗ
ಆನು ಮದುವಣಿಗಿ ಕೇಳಾ ತಾಯೆ

೧೦೨.
ಮನಮನ ತಾರ್ಕಣೆಯ ಕಂಡು ಅನುಭವಿಸಲು
ನೆನಹೇ ಘನವಹುದಲ್ಲದೆ
ಅದು ಹವಣದಲ್ಲಿ ನಿಲ್ಲುವುದೇ?
ಎಲೆ ಅವ್ವ, ನೀನು ಮರುಳವ್ವೆ!
ಎನ್ನ ದೇವ ಚೆನ್ನಮಲ್ಲಿಕಾರ್ಜುನಯ್ಯಗೊಲಿದು
ಸಲೆ ಮಾರುವೋದೇನು
ನಿನ್ನ ತಾಯಿತನವನೊಲ್ಲೆ ಹೋಗೇ!

೧೦೩.
ಲಿಂಗವನೂ ಪುರಾತನರನೂ
ಅನ್ಯರ ಮನೆಯೊಳಯಿಂಕೆ ಹೋಗಿ ಹೊಗಳುವರು
ತಮ್ಮದೊಂದು ಉದರ ಕಾರಣ
ಲಿಂಗವೂ ಪುರಾತನರೂ ಅಲ್ಲಿಗೆ ಬರಬಲ್ಲರೆ?
ಅನ್ಯವನೆ ಮರೆದು, ನಿಮ್ಮ ನೆನೆವರ ಎನಗೊಮ್ಮೆ ತೋರಾ
ಚೆನ್ನಮಲ್ಲಿಕಾರ್ಜುನಯ್ಯ!

೧೦೪.
ಗುಣ-ದೋಷ ಸಂಪಾದನೆಯ ಮಾಡುವನ್ನಕ್ಕ
ಕಾಮದ ಒಡಲು ಕ್ರೋಧದ ಗೊತ್ತು
ಲೋಭದ ಇಕ್ಕೆ ಮೋಹದ ಮಣ್ದಿರ
ಮದದಾವರಣ ಮತ್ಸರದ ಹೊದಿಕೆ
ಆ ಭಾವವರತಲ್ಲದೆ
ಚೆನ್ನಮಲ್ಲಿಕಾರ್ಜುನನ ಅರಿವುದಕ್ಕೆ ಇಂಬಿಲ್ಲ ಕಾಣಿರಣ್ಣ

೧೦೫.
ಕಡೆಗೆ ಮಾಡದ ಭಕ್ತಿ ಧೃಡವಿಲ್ಲದಾಳುತನ
ಮೃಡನೊಲಿಯ ಹೇಳಿದರೆ ಎಂತೊಲಿವನಯ್ಯ?
ಮಾಡಲಾಗದಳಿಮನವ ಮಾಡಿದರೆ ಮನದೊಡೆಯ ಬಲ್ಲನೈಸೆ
ವಿರಳವಿಲ್ಲದ ಮಣಿಯ ಪವಣಿಸಿಹೆನೆಂದೆಡೆ
ದುರುಳ ಚೆನ್ನಮಲ್ಲಿಕಾರ್ಜುನಯ್ಯನೆಂತೊಲಿವನಯ್ಯ






೧೦೬.
ಬೆಟ್ಟದ ಮೇಲೊಂದು ಮನೆಯ ಮಾಡಿ
ಮೃಗಂಗಳಿಗಂಜಿದೊಡೆಂತಯ್ಯ?
ಸಮುದ್ರದ ತಡಿಯಲೊಂದು ಮನೆಯ ಮಾಡಿ
ನೊರೆತೆರೆಗಳಿಗಂಜಿದೊಡೆಂತಯ್ಯ?
ಸಂತೆಯೊಳಗೊಂದು ಮನೆಯ ಮಾಡಿ
ಶಬ್ದಕ್ಕೆ ನಾಚಿದೊಡೆಂತಯ್ಯ?
ಚೆನ್ನಮಲ್ಲಿಕಾಜುನದೇವ ಕೇಳಯ್ಯ
ಲೋಕದೊಳಗೆ ಹುಟ್ಟಿದ ಬಳಿಕ
ಸ್ತುತಿ-ನಿಂದೆಗಳು ಬಂದರೆ
ಮನದಲ್ಲಿ ಕೋಪವ ತಾಳದೆ ಸಮಾಧಾನಿಯಾಗಿರಬೇಕು

೧೦೭.
ವೇದಶಾಸ್ತ್ರಾಗಮ ಪುರಾಣಗಳೆಂಬುವ
ಕೊಟ್ಟಣವ ಕುಟ್ಟುತ್ತ ನುಚ್ಚು ತೌಡು ಕಾಣಿ ಭೋ!
ಅವ ಕುಟ್ಟಲೇಕೆ?
ಅತ್ತಲಿತ್ತ ಹರಿವ ಮನದ ಶಿವನರಿಯಬಲ್ಲಡೆ
ಬಚ್ಚಬರಿಯ ಬಯಲು ಚೆನ್ನಮಲ್ಲಿಕಾರ್ಜುನ

೧೦೮.
ಅಮೇಧ್ಯದ ಮಡಕೆ ಮೂತ್ರದ ಕುಡಿಕೆ
ಎಲುವಿನ ತಡಿಕೆ ಕೀವಿನ ಹಡಿಕೆ
ಸುಡಲೀ ದೇಹವ
ಒಡಲುವಿಡಿದು ಕೆಡದಿರು
ಚೆನ್ನಮಲ್ಲಿಕಾರ್ಜುನನರಿ ಮರುಳೇ!

೧೦೯.
ಜಾಲಗಾರನೊಬ್ಬ ಜಲವ ಹೊಕ್ಕು ಶೋಧಿಸಿ
ಹಲವು ಪ್ರಾಣಿಗಳ ಕೊಂದು ನಲಿದಾಡುವ
ತನ್ನ ಮನೆಯಲೊಂದು ಶಿಶು ಸತ್ತರೆ
ಅದಕೆ ಮರುಗುವಂತೆ ಅವಕೇಕೆ ಮರುಗನು?
ಸ್ವಾತ್ಮಾನಮಿತರಾಂಶ್ಚೈವ
ದೃಷ್ಟ್ವಾ ಧೃಷ್ಟ್ವಾ ನ ಭಿದ್ಯತೇ
ಸರ್ವಂ ಚಿಜ್ಜ್ಯೋತಿರೇವೇತಿ
ಯಃ ಪಶ್ಯತಿ ಸ ಪಶ್ಯತಿ
ಎಂದುದಾಗಿ-ಜಾಲಗಾರನ ದುಃಖ ಜಗಕೆಲ್ಲ ನಗೆಗೆಡೆ
ಇದು ಕಾರಣ ಚೆನ್ನಮಲ್ಲಿಕಾರ್ಜುನಯ್ಯನ ಭಕ್ತನಾಗಿರ್ದು
ಜೀವ-ಹಿಂಸೆಯ ಮಾಡುವ ಮಾದಿಗರನೇನೆಂಬೆನಯ್ಯ

೧೧೦.
ಶೀಲ! ಶೀಲ! ಎಂತೆಬಿರಯ್ಯ?
ಶೀಲದ ನೆಲೆಯ ಒಲ್ಲಡೆ ಹೇಳಿರೋ
ಅರಿಯದಿರ್ದೊಡೆ ಕೇಳಿರೋ
ಕಾಮ [ಒಂದನೇ] ಭವಿ, ಕ್ರೋಧ ಎರಡನೇ ಭವಿ
ಲೋಭ ಮೂರನೇ ಭವಿ, ಮೋಹ ನಾಲ್ಕನೇ ಭವಿ
ಮದ ಐದನೇ ಭವಿ, ಮತ್ಸರ ಆರನೇ ಭವಿ
ಆಮಿಷ ಏಳನೇ ಭವಿ
ಇಂತೀ ಏಳು ಭವಿಗಳ ತಮ್ಮೊಳಗಿಟ್ಟುಕೊಂಡು
ಲಿಂಗವಿಲ್ಲದವರ ಭವಿ ಭವಿ ಎಂಬರು
ತಮ್ಮಂತರಂಗದಲ್ಲಿದ್ದ ಲಿಂಗಾಂಗದ ಸುದ್ದಿಯನ್ನರಿಯದೆ
ಅಚ್ಚಪ್ರಸಾದಿ-ನಿಚ್ಚಪ್ರಸಾದಿ-ಸಮಯಪ್ರಸಾದಿಗಳೆಂದು
ಜಲಕ್ಕೆ ಕನ್ನವನಿಕ್ಕಿ ಉದಕವ ತಂದು
ಲಿಂಗಮಜ್ಜನಕ್ಕೆರೆವ ಹಗಲುಗಳ್ಳರಿಗೆ ಮೆಚ್ಚುವನೆ
ಚೆನ್ನಮಲ್ಲಿಕಾರ್ಜುನ?

Comments

Popular posts from this blog

ಬಸವಣ್ಣನ ವಚನಗಳು - 331 ರಿಂದ 340 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೩೧. ವ್ಯಾಸ ಬೋಯಿತಿಯ ಮಗ. ಮಾರ್ಕಂಡೇಯ ಮಾತಂಗಿಯ ಮಗ. ಮಂಡೋದರಿ ಕಪ್ಪೆಯ ಮಗಳು. ಕುಲವನರಸದಿರಿ ಭೋ! ಕುಲದಿಂದ ಮುನ್ನೇನಾದಿರಿ ಭೋ! ಸಾಕ್ಷಾತ್ ಅಗಸ್ತ್ಯ ಕಬ್ಬಿಲ. ದೂರ್ವಾಸ ಮಚ್ಚಿಗ. ಕಶ್ಯಪ ಕಮ್ಮಾರ. ಕೌಂಡಿನ್ಯನೆಂಬ ಋಷಿ ಮೂರುಲೋಕವರಿಯೆ ನಾವಿದ ಕಾಣಿ ಭೋ! ನಮ್ಮ ಕೂಡಲಸಂಗನ ವಚನವಿಂತೆಂದುದು- "ಶ್ವಪಚೋಪಿಯಾದರೇನು ಶೀವಭಕ್ತನೇ ಕುಲಜಂ" ಭೋ! ೩೩೨. ಹೊಲೆಗಂಡಲ್ಲದೆ ಪಿಂಡದ ನೆಲೆಗಾಶ್ರಯವಿಲ್ಲ. ಜಲಬಿಂದುವಿನ ವ್ಯವಹಾರವೊಂದೇ. ಆಶೆಯಾಮಿಷ ಹರ್ಷರೋಷ ವಿಷಯಾದಿಗಳೆಲ್ಲವೊಂದೇ. ಏನನೋದಿ ಏನ ಕೇಳಿ ಏನು ಫಲ ?! ಕುಲಜನೆಂಬುದಕ್ಕೆ ಆವುದು ದೃಷ್ಟ ? "ಸಪ್ತಧಾತುಸಮಂ ಪಿಂಡಂ ಸಮಯೋನಿಸಮುದ್ಭವಂ | ಆತ್ಮಾಜೀವಸ್ಸಮಸ್ತಸ್ಮಾತ್ ವರ್ಣಾನಾಂ ಕಿಂ ಪ್ರಯೋಜನಂ ?" || ಕಾಸಿ ಕಮ್ಮಾರನಾದ, ಬೀಸಿ ಮಡಿವಾಳನಾದ, ಹಾಸನಿಕ್ಕಿ ಸಾಲಿಗನಾದ, ವೇದವನೋದಿ ಹಾರುವನಾದ. ಕರ್ಣದಲ್ಲಿ ಜನಿಸಿದವರುಂಟೆ ಜಗದೊಳಗೆ ? ಇದು ಕಾರಣ, ಕೂಡಲಸಂಗಮದೇವ, ಲಿಂಗಸ್ಥಲವನರಿದವನೇ ಕುಲಜನು! ೩೩೩. ಕೊಲುವವನೇ ಮಾದಿಗ! ಹೊಲಸ ತಿಂಬವನೇ ಹೊಲೆಯ! ಕುಲವೇನೋ ? ಆವದಿರ ಕುಲವೇನೋ ? ಸಕಲ ಜೀವಾ

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ಜರಿದ

ಬಸವಣ್ಣನ ವಚನಗಳು - 371 ರಿಂದ 380 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೭೧. ಜಂಬೂದ್ವೀಪನವಖಂಡಪೃಥ್ವಿಯೊಳಗೆ ಕೇಳಿರಯ್ಯ ಎರಡಾಳಿನ ಭಾಷೆಯ! ಕೊಲುವೆನೆಂಬ ಭಾಷೆ ದೇವನದು, ಗೆಲುವೆನೆಂಬ ಭಾಷೆ ಭಕ್ತನದು. ಸತ್ಯವೆಂಬ ಕೂರಲಗನೆ ಕಳೆದುಕೊಂಡು ಸದ್ಭಕ್ತರು ಗೆದ್ದರು ಕಾಣಾ ಕೂಡಲಸಂಗಮದೇವ. ೩೭೨. ಶಿವಭಕ್ತನಾಗಿ ತನ್ನ ಹಿಡಿದಹೆನೆಂದು ಹೋದರೆ ನುಗ್ಗುಮಾಡುವ, ನುಸಿಯ ಮಾಡುವ! ಮಣ್ಣುಮಾಡುವ, ಮಸಿಯ ಮಾಡುವ! ಕೂಡಲಸಂಗಮದೇವರ ನೆರೆನಂಬಿದನಾದರೆ ಕಡೆಗೆ ತನ್ನಂತೆ ಮಾಡುವ. ೩೭೩. ಅರೆವನಯ್ಯ ಸಣ್ಣವಹನ್ನಕ ಒರೆವನಯ್ಯ ಬಣ್ಣಗಾಬನ್ನಕ ಅರೆದರೆ ಸುಣ್ಣವಾಗಿ, ಒರೆದರೆ ಬಣ್ಣವಾದರೆ ಕೂಡಲಸಂಗಮದೇವನೊಲಿದು ಸಲಹುವನು. ೩೭೪. ಎಡದ ಪಾದದಲೊದ್ದರೆ ಬಲದ ಪಾದವ ಹಿಡಿವೆ! ಬಲದ ಪಾದದಲೊದ್ದರೆ ಎಡದ ಪಾದವ ಹಿಡಿವೆ! ತ್ರಾಹಿ, ತ್ರಾಹಿ! ತಪ್ಪೆನ್ನದು, ಕ್ಷಮೆ ನಿನ್ನದು! ಕೂಡಲಸಂಗಮದೇವ ನಿಮ್ಮ ಕರುಣದ ಕಂದ ನಾನು! ೩೭೫. ಅಂಜಿದರಾಗದು, ಅಳುಕಿದರಾಗದು! ವಜ್ರಪಂಜರದೊಳಗಿದ್ದರಾಗದು! ತಪ್ಪದೆಲವೋ ಲಲಾಟಲಿಖಿತ! ಕಕ್ಕುಲತೆಬಟ್ಟರಾಗದು ನೋಡಾ! ಧೃತಿಗೆಟ್ಟು ಮನ ಧಾತುಗೆಟ್ಟರೆ ಅಪ್ಪುದು ತಪ್ಪದು ಕೂಡಲಸಂಗಮದೇವ. ೩೭೬. ಆಯುಷ್ಯ ತೀರಿದಲ್ಲದೆ ಮರಣವಿಲ್ಲ. ಭಾಷೆ ತೀರಿದಲ