Skip to main content

ಅಕ್ಕನ ವಚನಗಳು - 121 ರಿಂದ 130 ರವರೆಗೆ

೧೨೧.
ಹಸಿವೇ ನೀನು ನಿಲ್ಲು, ನಿಲ್ಲು, ತೃಷೆಯೇ ನೀನು ನಿಲ್ಲು ನಿಲ್ಲು
ನಿದ್ರೆಯೇ ನೀನು ನಿಲ್ಲು ನಿಲ್ಲು, ಕಾಮವೇ ನೀನು ನಿಲ್ಲು ನಿಲ್ಲು
ಕ್ರೋಧವೇ ನೀನು ನಿಲ್ಲು ನಿಲ್ಲು, ಮೋಹವೇ ನೀನು ನಿಲ್ಲು ನಿಲ್ಲು
ಲೋಭವೇ ನೀನು ನಿಲ್ಲು ನಿಲ್ಲು, ಮದವೇ ನೀನು ನಿಲ್ಲು ನಿಲ್ಲು
ಮಚ್ಚರವೇ ನೀನು ನಿಲ್ಲು ನಿಲ್ಲು, ಸಚರಾಚರವೇ ನೀನು ನಿಲ್ಲು ನಿಲ್ಲು
ನಾನು ಚೆನ್ನಮಲ್ಲಿಕಾರ್ಜುನದೇವರ ಅವಸರದ
ಓಲೆಯನೊಯ್ಯುತ್ತಲಿದ್ದೇನೆ ಶರಣಾರ್ಥಿ

೧೨೨.
ಹೆದರದಿರು ಮನವೇ, ಬೆದರದಿರು ಮನವೇ
ನಿಜವನರಿತು ನಿಶ್ಚಿಂತವಾಗಿರು
ಫಲವಾದ ಮರನ ಇಡುವುದೊಂದು ಕೋಟಿ
ಎಲವದ ಮರನ ಇಡುವರೊಬ್ಬರ ಕಾಣೆ
ಭಕ್ತಿಯುಳ್ಳವರ ಬೈವರೊಂದು ಕೋಟಿ,
ಭಕ್ತಿಯಿಲ್ಲದವ ಬೈವರೊಬ್ಬರ ಕಾಣೆ
ನಿಮ್ಮ ಶರಣರ ನುಡಿಯೆ ಎನಗೆ ಗತಿಸೋಪಾನ, ಚೆನ್ನಮಲ್ಲಿಕಾರ್ಜುನ

೧೨೩.
ತನ್ನವಸರಕ್ಕಾಗಿ ಹಗಲುಗನ್ನವನಿಕ್ಕಿದರೆ
ಕನ್ನ ಸವೆಯಲಿಲ್ಲ, ಕಳವು ದೊರೆಯಲಿಲ್ಲ!
ಬೊಬ್ಬುಲಿಯನೇರಿದ ಮರ್ಕಟನಂತೆ
ಹಣ್ಣ ಮೆಲಲಿಲ್ಲ, ಕುಳ್ಳಿರೆ ಠಾವಿಲ್ಲ!
ನಾನು ಸರ್ವಸಂಗಪರಿತ್ಯಾಗ ಮಾಡಿದವಳಲ್ಲ
ನಿಮ್ಮ ಕೂಡಿ ಕುಲವಳಿದವಳಲ್ಲ ಚೆನ್ನಮಲ್ಲಿಕಾರ್ಜುನ

೧೨೪.
ಕೈಸಿರಿಯ ದಂಡವ ಕೊಳಬಹುದಲ್ಲದೆ
ಮೈಸಿರಿಯ ದಂಡವ ಕೊಳಲುಂಟೆ?
ಉಟ್ಟಂತ ಉಡಿಗೆತೊಡಿಗೆಯನೆಲ್ಲ ಸೆಳೆದುಕೊಳಬಹುದಲ್ಲದೆ
ಮುಚ್ಚಿ ಮುಸುಕಿರ್ದ ನಿರ್ವಾಣವ ಸೆಳೆದುಲೊಳಬಹುದೇ?
ಚೆನ್ನಮಲ್ಲಿಕಾರ್ಜುನದೇವರ ಬೆಳಗನುಟ್ಟು ಲಜ್ಜೆಗೆಟ್ಟವಳಿಗೆ
ಉಡಿಗೆತೊಡಿಗೆಯ ಹಂಗೇಕೊ ಮರುಳೇ?

೧೨೫.
ಮರವಿದ್ದು ಫಲವೇನು? ನೆಳಲಿಲ್ಲದನ್ನಕ!
ಧನವಿದ್ದು ಫಲವೇನು ದಯವಿಲ್ಲದನ್ನಕ?
ಹಸುವಿದ್ದು ಫಲವೇನು ಹಯನಿಲ್ಲದನ್ನಕ?
ರೂಪಿದ್ದು ಫಲವೇನು ಗುಣವಿಲ್ಲದನ್ನಕ?
ಅಗಲಿದ್ದು ಫಲವೇನು ಬಾನವಿಲ್ಲದನ್ನಕ?
ನಾನಿದ್ದು ಫಲವೇನು ನಿಮ್ಮ ಜ್ಞಾನವಿಲ್ಲದನ್ನಕ?
ಚೆನ್ನಮಲ್ಲಿಕಾರ್ಜುನ






೧೨೬.
ಕಟ್ಟಿಹಾದ ಬಿದಿರಿನಲ್ಲಿ ಮರಳಿ ಕಳಲೆ ಮೂಡಬಲ್ಲುದೆ?
ಸುಟ್ಟ ಮಡಕೆ ಮುನ್ನಿನಂತೆ ಮರಳಿ ಧರೆಯನಪ್ಪಬಲ್ಲುದೆ?
ತೊಟ್ಟು ಬಿಟ್ಟು ಬಿದ್ದ ಹಣ್ಣು ಮರಳಿ ತೊಟ್ಟನಪ್ಪಬಲ್ಲುದೆ?
ಕಷ್ಟಕರ್ಮಿ ಮನುಜರು ಕಾಣದೆ ಒಂದ ನುಡಿದರೆ
ನಿಷ್ಠೆಯುಳ್ಳ ಶರಣರು ಮರಳಿ ಮರ್ತ್ಯಕ್ಕೆ ಬಪ್ಪರೆ?
ಚೆನ್ನಮಲ್ಲಿಕಾರ್ಜುನ

೧೨೭.
ಪಂಚೇಂದ್ರಿಯಂಗಳೊಳಗೆ
ಒಂದಕ್ಕೆ ಪ್ರಿಯನಾದರೆ ಸಾಲದೆ?
ಸಪ್ತವ್ಯಸನಂಗಳೊಳಗೆ ಒಂದಕ್ಕೆ ಪ್ರಿಯನಾದರೆ ಸಾಲದೆ?
ರತ್ನದ ಸಂಕೋಲೆಯಾದಡೇನು ಬಂಧನ ಬಿಡುವುದೆ?
ಚೆನ್ನಮಲ್ಲಿಕಾರ್ಜುನ

೧೨೮.
ಮರೆಯ ನೂಲು ಸರಿಯೆ
ನಾಚುವುದು ನೋಡಾ ಗಂಡು ಹೆಣ್ಣೆಂಬ ಜಾತಿ
ಪ್ರಾಣದೊಡೆಯ ನೀ ಜಗದಲ್ಲಿ
ತೆರಹಿಲ್ಲದೊಪ್ಪುಡೆ ನಾಚಲೆಡೆಯುಂಟೆ ಹೇಳಾ!
ಚೆನ್ನಮಲ್ಲಿಕಾರ್ಜುನಯ್ಯ ಜಗವೆಲ್ಲ ಕಣ್ಣಾಗಿ ನೋಡುತ್ತಿರೆ
ಮುಚ್ಚಿ ಮರೆಯಿಸುವೆನೆಂತು ಹೇಳಾ ಅಯ್ಯ

೧೨೯.
ತನುವಿಡಿದು ದಾಸೋಹವ ಮಾಡಿ, ಗುರುಪ್ರಸಾದಿಯಾದ ಬಸವಣ್ಣ
ಮನವಿಡಿದು ದಾಸೋಹವ ಮಾಡಿ ಲಿಂಗಪ್ರಸಾದಿಯಾದ ಬಸವಣ್ಣ
ಧನವಿಡಿದು ದಾಸೋಹವ ಮಾಡಿ, ಜಂಗಮಪ್ರಸಾದಿಯಾದ ಬಸವಣ್ಣ
ಇಂತೀ ತ್ರಿವಿಧವಿಡಿದು ದಾಸೋಹವ ಮಾಡಿ
ಸದ್ಗುರು ಚೆನ್ನಮಲ್ಲಿಕಾರ್ಜುನಯ್ಯಾ
ನಿಮ್ಮ ಶರಣ ಬಸವಣ್ಣ ಸ್ವಯಂಪ್ರಸಾದಿಯಾದನಯ್ಯ

೧೩೦.
ಆತುರದ ಧ್ಯಾನದಿಂದ ಧಾವತಿಗೊಂಡೆ
ಜ್ಯೋತಿರ್ಲಿಂಗವ ಕಾಣಿಸಬಾರದು, ಮಾತಿನ ಮಾತಿಗೆ ಸಿಲುಕುವನಲ್ಲ
ಧಾತುಗೆಡಿಸಿ ಮನವ ನೋಡಿ ಕಾಡುವನು
ಆತುಮನಂತರ-ಪರವನರಿದಡೆ ಆತನೆ ಶಿವಯೋಗಿ
ಆತನ ಪಾದಕೆ ಶರಣು ಎಂಬೆನಯ್ಯ ಚೆನ್ನಮಲ್ಲಿಕಾರ್ಜುನ

Comments

Popular posts from this blog

ಬಸವಣ್ಣನ ವಚನಗಳು - 331 ರಿಂದ 340 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೩೧. ವ್ಯಾಸ ಬೋಯಿತಿಯ ಮಗ. ಮಾರ್ಕಂಡೇಯ ಮಾತಂಗಿಯ ಮಗ. ಮಂಡೋದರಿ ಕಪ್ಪೆಯ ಮಗಳು. ಕುಲವನರಸದಿರಿ ಭೋ! ಕುಲದಿಂದ ಮುನ್ನೇನಾದಿರಿ ಭೋ! ಸಾಕ್ಷಾತ್ ಅಗಸ್ತ್ಯ ಕಬ್ಬಿಲ. ದೂರ್ವಾಸ ಮಚ್ಚಿಗ. ಕಶ್ಯಪ ಕಮ್ಮಾರ. ಕೌಂಡಿನ್ಯನೆಂಬ ಋಷಿ ಮೂರುಲೋಕವರಿಯೆ ನಾವಿದ ಕಾಣಿ ಭೋ! ನಮ್ಮ ಕೂಡಲಸಂಗನ ವಚನವಿಂತೆಂದುದು- "ಶ್ವಪಚೋಪಿಯಾದರೇನು ಶೀವಭಕ್ತನೇ ಕುಲಜಂ" ಭೋ! ೩೩೨. ಹೊಲೆಗಂಡಲ್ಲದೆ ಪಿಂಡದ ನೆಲೆಗಾಶ್ರಯವಿಲ್ಲ. ಜಲಬಿಂದುವಿನ ವ್ಯವಹಾರವೊಂದೇ. ಆಶೆಯಾಮಿಷ ಹರ್ಷರೋಷ ವಿಷಯಾದಿಗಳೆಲ್ಲವೊಂದೇ. ಏನನೋದಿ ಏನ ಕೇಳಿ ಏನು ಫಲ ?! ಕುಲಜನೆಂಬುದಕ್ಕೆ ಆವುದು ದೃಷ್ಟ ? "ಸಪ್ತಧಾತುಸಮಂ ಪಿಂಡಂ ಸಮಯೋನಿಸಮುದ್ಭವಂ | ಆತ್ಮಾಜೀವಸ್ಸಮಸ್ತಸ್ಮಾತ್ ವರ್ಣಾನಾಂ ಕಿಂ ಪ್ರಯೋಜನಂ ?" || ಕಾಸಿ ಕಮ್ಮಾರನಾದ, ಬೀಸಿ ಮಡಿವಾಳನಾದ, ಹಾಸನಿಕ್ಕಿ ಸಾಲಿಗನಾದ, ವೇದವನೋದಿ ಹಾರುವನಾದ. ಕರ್ಣದಲ್ಲಿ ಜನಿಸಿದವರುಂಟೆ ಜಗದೊಳಗೆ ? ಇದು ಕಾರಣ, ಕೂಡಲಸಂಗಮದೇವ, ಲಿಂಗಸ್ಥಲವನರಿದವನೇ ಕುಲಜನು! ೩೩೩. ಕೊಲುವವನೇ ಮಾದಿಗ! ಹೊಲಸ ತಿಂಬವನೇ ಹೊಲೆಯ! ಕುಲವೇನೋ ? ಆವದಿರ ಕುಲವೇನೋ ? ಸಕಲ ಜೀವಾ

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ಜರಿದ

ಬಸವಣ್ಣನ ವಚನಗಳು - 371 ರಿಂದ 380 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೭೧. ಜಂಬೂದ್ವೀಪನವಖಂಡಪೃಥ್ವಿಯೊಳಗೆ ಕೇಳಿರಯ್ಯ ಎರಡಾಳಿನ ಭಾಷೆಯ! ಕೊಲುವೆನೆಂಬ ಭಾಷೆ ದೇವನದು, ಗೆಲುವೆನೆಂಬ ಭಾಷೆ ಭಕ್ತನದು. ಸತ್ಯವೆಂಬ ಕೂರಲಗನೆ ಕಳೆದುಕೊಂಡು ಸದ್ಭಕ್ತರು ಗೆದ್ದರು ಕಾಣಾ ಕೂಡಲಸಂಗಮದೇವ. ೩೭೨. ಶಿವಭಕ್ತನಾಗಿ ತನ್ನ ಹಿಡಿದಹೆನೆಂದು ಹೋದರೆ ನುಗ್ಗುಮಾಡುವ, ನುಸಿಯ ಮಾಡುವ! ಮಣ್ಣುಮಾಡುವ, ಮಸಿಯ ಮಾಡುವ! ಕೂಡಲಸಂಗಮದೇವರ ನೆರೆನಂಬಿದನಾದರೆ ಕಡೆಗೆ ತನ್ನಂತೆ ಮಾಡುವ. ೩೭೩. ಅರೆವನಯ್ಯ ಸಣ್ಣವಹನ್ನಕ ಒರೆವನಯ್ಯ ಬಣ್ಣಗಾಬನ್ನಕ ಅರೆದರೆ ಸುಣ್ಣವಾಗಿ, ಒರೆದರೆ ಬಣ್ಣವಾದರೆ ಕೂಡಲಸಂಗಮದೇವನೊಲಿದು ಸಲಹುವನು. ೩೭೪. ಎಡದ ಪಾದದಲೊದ್ದರೆ ಬಲದ ಪಾದವ ಹಿಡಿವೆ! ಬಲದ ಪಾದದಲೊದ್ದರೆ ಎಡದ ಪಾದವ ಹಿಡಿವೆ! ತ್ರಾಹಿ, ತ್ರಾಹಿ! ತಪ್ಪೆನ್ನದು, ಕ್ಷಮೆ ನಿನ್ನದು! ಕೂಡಲಸಂಗಮದೇವ ನಿಮ್ಮ ಕರುಣದ ಕಂದ ನಾನು! ೩೭೫. ಅಂಜಿದರಾಗದು, ಅಳುಕಿದರಾಗದು! ವಜ್ರಪಂಜರದೊಳಗಿದ್ದರಾಗದು! ತಪ್ಪದೆಲವೋ ಲಲಾಟಲಿಖಿತ! ಕಕ್ಕುಲತೆಬಟ್ಟರಾಗದು ನೋಡಾ! ಧೃತಿಗೆಟ್ಟು ಮನ ಧಾತುಗೆಟ್ಟರೆ ಅಪ್ಪುದು ತಪ್ಪದು ಕೂಡಲಸಂಗಮದೇವ. ೩೭೬. ಆಯುಷ್ಯ ತೀರಿದಲ್ಲದೆ ಮರಣವಿಲ್ಲ. ಭಾಷೆ ತೀರಿದಲ