Skip to main content

ಅಕ್ಕನ ವಚನಗಳು - 161 ರಿಂದ 170 ರವರೆಗೆ

೧೬೧.
ಆಯತ-ಸ್ವಾಯತ-ಅನುಭಾವವ ನಾನೆತ್ತ ಬಲ್ಲೆನಯ್ಯಾ
ಗುರು-ಲಿಂಗ-ಜಂಗಮಕ್ಕೆ ಅರ್ಥಪ್ರಾಣಾಭಿಮಾನಂಗಳನಿತ್ತ
ನಿನ್ನ ಭಕ್ತರ ಭೃತ್ಯರಿಗಾಳಾಗಿಪ್ಪೆನಯ್ಯಾ
ನಿಮ್ಮ ಶರಣರ ಸಂಗವನಲ್ಲದೆ ಬೇರೊಂದ ಬಯಸೆನಯ್ಯ
ಚೆನ್ನಮಲ್ಲಿಕಾರ್ಜುನ

೧೬೨.
ಅಷ್ಟದಳಕಮಲದ ಆತ್ಮನೊಳಗೆ ಸೃಷ್ಟಿ ಜನಿಸಿ
[ಕೂರುಮ ದಿಗುದಂತಿ] ದಿಗುವಳಯವ ನುಂಗಿ
ನಿಜ ಶೂನ್ಯ ತಾನಾದ ಬಳಿಕ
ತನ್ನ ತಾನರಿದ ನಿಜಪದ ಭಿನ್ನಯೋಗಕ್ಕೆ ಬರಬಹುದೇ?
ಕಂಗಳ ನೋಟದಲ್ಲಿ
ಮನ ಸೊಗಸಿನಲ್ಲಿ
ಅನಂಗನ ಧಾಳಿಯನಗಲಿದೆವಣ್ಣ
ಮರೀಚಿಕಾಜಲದೊಳಡಗಿದ ಪ್ರಾಣಿ ವ್ಯಾಧನ ಬಲೆಗೊಳಗಹುದೇ?
ಎನ್ನ ದೇವ ಚೆನ್ನಮಲ್ಲಿಕಾರ್ಜುನನಲ್ಲದ
ಪರಪುರುಷರು ನಮಗಾಗದಣ್ಣ!

೧೬೩.
ನಮಗೆ ನಮ್ಮ ಲಿಂಗದ ಚಿಂತೆ
ನಮಗೆ ನಮ್ಮ ಭಕ್ತರ ಚಿಂತೆ, ಮನಗೆ ನಮ್ಮ ಆದ್ಯರ ಚಿಂತೆ
ನಮಗೆ ನಮ್ಮ ಚೆನ್ನಮಲ್ಲಿಕಾರ್ಜುನನ ಚಿಂತೆಯಲ್ಲದೆ
ಲೋಕದ ಮಾತು ನಮಗೇಕಣ್ಣ?

೧೬೪.
ನಿಮ್ಮ ನಿಲುವಿಂಗೆ ನೀವು ನಾಚಬೇಡವೆ?
ಅನ್ಯರ ಕೈಲಿ ಅಲ್ಲ ಎನಿಸಿಕೊಂಬ ನಡೆ-ನುಡಿಯೇಕೆ?
ಅಲ್ಲ ಎನಿಸಿಕೊಂಬುದರಿಂದ, ಆ ಕ್ಷಣವೇ ಸಾವುದು ಲೇಸು ಕಾಣಾ
ಚೆನ್ನಮಲ್ಲಿಕಾರ್ಜುನ

೧೬೫.
ಶಿವಭಕ್ತರ ರೋಮ ನೊಂದರೆ
ಒಡನೆ ಶಿವನು ನೋವ ನೋಡಾ
ಶಿವಭಕ್ತರು ಪರಿಣಾಮಿಸಿದರೆ, ಒಡನೆ ಶಿವ ಪರಿಣಆಮಿಸುವ ನೋಡಾ !
ಭಕ್ತದೇಹಿಕ ದೇವ ಎಂಬ ಶ್ರುತಿ ಹೊಗಳುವ ಕಾರಣ
ಶಿವಭಕ್ತರ ಲೇಸು ಹೊಲ್ಲೆಹ ಶಿವನ ಮುಟ್ಟುವುದು
ತಾಯಿ ನೊಂದರೆ ಒಡಲ ಶಿಶು ನೋವ ತೆರನಂತೆ
ಚೆನ್ನಮಲ್ಲಿಕಾರ್ಜುನ-ತನ್ನ ಭಕ್ತರು ನೊಂದರೆ
ಒಡನೆ ತಾ ನೋವನು






೧೬೬.
ನೋಡುವ ಕಂಗಳಿಗೆ ರೂಪಿಂಬಾಗಿರಲು
ನೀವು ಮನ ನಾಚದೆ ಬಂದಿರಣ್ಣ!
ಕೇಳಿದ ಶ್ರೋತ್ರಸೊಗಸಿಗೆ ನೀವು ಮರುಳಾಗಿ ಬಂದಿರಣ್ಣ!
ನಾರಿಯೆಂಬ ರೂಪಿಂಗೆ ನೀವು ಒಲಿದು ಬಂದಿರಣ್ಣ!
ಮೂತ್ರವು ಬಿಂದು ಒಸರುವ ನಾಳವೆಂದು
ಕಂಗಾಣದೆ ಮುಂದುಗೆಟ್ಟು ಬಂದಿರಣ್ಣ!
ಬುದ್ಧಿಗೇಡಿತನದಿಂದ ಪರಮಾರ್ಥದ ಸುಖವ
ಹೋಗಲಾಡಿಸಿಕೊಂಡು
ಇದಾವ ಕಾರಣವೆಂದರಿಯದೆ, ನೀವು ನರಹೇತುವೆಂದರಿದೂ
ಮನ ಹೇಸದೆ ಬಂದಿರಣ್ಣ!
ಚೆನ್ನಮಲ್ಲಿಕಾರ್ಜುನನಲ್ಲದೆ ಮಿಕ್ಕಿಹ ಪುರುಷರೆನಗೆ ಸಹೋದರರು
ಛೀ ಹೋಗಾ ಮರುಳೇ!

೧೬೭.
ಲೇಸು ಹಾಸು, ನೋಟವಾಭರಣ,
ಆಲಿಂಗನ ವಸ್ತ್ರ, ಚುಂಬನವಾರೋಗಣೆ,
ಲಲ್ಲೆವಾತು ತಾಂಬೂಲ, ಲವಲವಿಕೆಯೇ ಅನುಲೇಪನವೆನಗೆ
ಚೆನ್ನಮಲ್ಲಿಕಾರ್ಜುನನ ಕೂಟ ಪರಮಸುಖವವ್ವ!

೧೬೮.
ಆಡುವುದು, ಪಾಡುವುದು; ಕೇಳುವುದು, ಹೇಳುವುದು
ನಗೆ-ನುಡಿ ಸರಸ ಸಮ್ಮೇಳನವಾಗಿಪ್ಪುದು ಶರಣರೊಡನೆ
ಚೆನ್ನಮಲ್ಲಿಕಾರ್ಜುನ ಕೊಟ್ಟ ಆಯುಷ್ಯ ಉಳ್ಳನ್ನಕ್ಕರ
ಲಿಂಗಸುಖಿಗಳ ಸಂಗದಲ್ಲಿ ದಿನಂಗಳ ಕಳೆವುದು!

೧೬೯.
ಜಂಗಮವೆನ್ನ ಪ್ರಾಣ, ಜಂಗಮವೆನ್ನ ಜೀವ!
ಜಂಗಮವೆನ್ನ ನಿಧಿನಿಧಾನ!
ಜಂಗಮವೆನ್ನ ಹರುಷದ ಮೇರೆ!
ಚೆನ್ನಮಲ್ಲಿಕಾರ್ಜುನ,
ಜಂಗಮದ ತಿಂಥಿಣಿಯಲ್ಲಿ ಓಲಾಡುವೆ

೧೭೦.
ಅರಿಯದವರೊಡನೆ ಸಂಗವ ಮಾಡಿದರೆ
ಕಲ್ಲು ಹೊಯ್ದು ಕಿಡಿಯ ತೆಗೆದುಕೊಂಬಂತೆ
ಬಲ್ಲವರೊಡನೆ ಸಂಗವ ಮಾಡಿದರೆ
ಮೊಸರ ಹೊಸೆದು ಬೆಣ್ಣೆಯ ತೆಗೆದುಕೊಂಬಂತೆ
ಚೆನ್ನಮಲ್ಲಿಕಾರ್ಜುನಯ್ಯ, ನಿಮ್ಮ ಶರಣರ ಸಂಗ
ಕರ್ಪುರಗಿರಿಯ ಉರಿಯು ಕೊಂಡಂತೆ

Comments

Popular posts from this blog

ಬಸವಣ್ಣನ ವಚನಗಳು - 331 ರಿಂದ 340 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೩೧. ವ್ಯಾಸ ಬೋಯಿತಿಯ ಮಗ. ಮಾರ್ಕಂಡೇಯ ಮಾತಂಗಿಯ ಮಗ. ಮಂಡೋದರಿ ಕಪ್ಪೆಯ ಮಗಳು. ಕುಲವನರಸದಿರಿ ಭೋ! ಕುಲದಿಂದ ಮುನ್ನೇನಾದಿರಿ ಭೋ! ಸಾಕ್ಷಾತ್ ಅಗಸ್ತ್ಯ ಕಬ್ಬಿಲ. ದೂರ್ವಾಸ ಮಚ್ಚಿಗ. ಕಶ್ಯಪ ಕಮ್ಮಾರ. ಕೌಂಡಿನ್ಯನೆಂಬ ಋಷಿ ಮೂರುಲೋಕವರಿಯೆ ನಾವಿದ ಕಾಣಿ ಭೋ! ನಮ್ಮ ಕೂಡಲಸಂಗನ ವಚನವಿಂತೆಂದುದು- "ಶ್ವಪಚೋಪಿಯಾದರೇನು ಶೀವಭಕ್ತನೇ ಕುಲಜಂ" ಭೋ! ೩೩೨. ಹೊಲೆಗಂಡಲ್ಲದೆ ಪಿಂಡದ ನೆಲೆಗಾಶ್ರಯವಿಲ್ಲ. ಜಲಬಿಂದುವಿನ ವ್ಯವಹಾರವೊಂದೇ. ಆಶೆಯಾಮಿಷ ಹರ್ಷರೋಷ ವಿಷಯಾದಿಗಳೆಲ್ಲವೊಂದೇ. ಏನನೋದಿ ಏನ ಕೇಳಿ ಏನು ಫಲ ?! ಕುಲಜನೆಂಬುದಕ್ಕೆ ಆವುದು ದೃಷ್ಟ ? "ಸಪ್ತಧಾತುಸಮಂ ಪಿಂಡಂ ಸಮಯೋನಿಸಮುದ್ಭವಂ | ಆತ್ಮಾಜೀವಸ್ಸಮಸ್ತಸ್ಮಾತ್ ವರ್ಣಾನಾಂ ಕಿಂ ಪ್ರಯೋಜನಂ ?" || ಕಾಸಿ ಕಮ್ಮಾರನಾದ, ಬೀಸಿ ಮಡಿವಾಳನಾದ, ಹಾಸನಿಕ್ಕಿ ಸಾಲಿಗನಾದ, ವೇದವನೋದಿ ಹಾರುವನಾದ. ಕರ್ಣದಲ್ಲಿ ಜನಿಸಿದವರುಂಟೆ ಜಗದೊಳಗೆ ? ಇದು ಕಾರಣ, ಕೂಡಲಸಂಗಮದೇವ, ಲಿಂಗಸ್ಥಲವನರಿದವನೇ ಕುಲಜನು! ೩೩೩. ಕೊಲುವವನೇ ಮಾದಿಗ! ಹೊಲಸ ತಿಂಬವನೇ ಹೊಲೆಯ! ಕುಲವೇನೋ ? ಆವದಿರ ಕುಲವೇನೋ ? ಸಕಲ ಜೀವಾ

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ಜರಿದ

ಬಸವಣ್ಣನ ವಚನಗಳು - 371 ರಿಂದ 380 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೭೧. ಜಂಬೂದ್ವೀಪನವಖಂಡಪೃಥ್ವಿಯೊಳಗೆ ಕೇಳಿರಯ್ಯ ಎರಡಾಳಿನ ಭಾಷೆಯ! ಕೊಲುವೆನೆಂಬ ಭಾಷೆ ದೇವನದು, ಗೆಲುವೆನೆಂಬ ಭಾಷೆ ಭಕ್ತನದು. ಸತ್ಯವೆಂಬ ಕೂರಲಗನೆ ಕಳೆದುಕೊಂಡು ಸದ್ಭಕ್ತರು ಗೆದ್ದರು ಕಾಣಾ ಕೂಡಲಸಂಗಮದೇವ. ೩೭೨. ಶಿವಭಕ್ತನಾಗಿ ತನ್ನ ಹಿಡಿದಹೆನೆಂದು ಹೋದರೆ ನುಗ್ಗುಮಾಡುವ, ನುಸಿಯ ಮಾಡುವ! ಮಣ್ಣುಮಾಡುವ, ಮಸಿಯ ಮಾಡುವ! ಕೂಡಲಸಂಗಮದೇವರ ನೆರೆನಂಬಿದನಾದರೆ ಕಡೆಗೆ ತನ್ನಂತೆ ಮಾಡುವ. ೩೭೩. ಅರೆವನಯ್ಯ ಸಣ್ಣವಹನ್ನಕ ಒರೆವನಯ್ಯ ಬಣ್ಣಗಾಬನ್ನಕ ಅರೆದರೆ ಸುಣ್ಣವಾಗಿ, ಒರೆದರೆ ಬಣ್ಣವಾದರೆ ಕೂಡಲಸಂಗಮದೇವನೊಲಿದು ಸಲಹುವನು. ೩೭೪. ಎಡದ ಪಾದದಲೊದ್ದರೆ ಬಲದ ಪಾದವ ಹಿಡಿವೆ! ಬಲದ ಪಾದದಲೊದ್ದರೆ ಎಡದ ಪಾದವ ಹಿಡಿವೆ! ತ್ರಾಹಿ, ತ್ರಾಹಿ! ತಪ್ಪೆನ್ನದು, ಕ್ಷಮೆ ನಿನ್ನದು! ಕೂಡಲಸಂಗಮದೇವ ನಿಮ್ಮ ಕರುಣದ ಕಂದ ನಾನು! ೩೭೫. ಅಂಜಿದರಾಗದು, ಅಳುಕಿದರಾಗದು! ವಜ್ರಪಂಜರದೊಳಗಿದ್ದರಾಗದು! ತಪ್ಪದೆಲವೋ ಲಲಾಟಲಿಖಿತ! ಕಕ್ಕುಲತೆಬಟ್ಟರಾಗದು ನೋಡಾ! ಧೃತಿಗೆಟ್ಟು ಮನ ಧಾತುಗೆಟ್ಟರೆ ಅಪ್ಪುದು ತಪ್ಪದು ಕೂಡಲಸಂಗಮದೇವ. ೩೭೬. ಆಯುಷ್ಯ ತೀರಿದಲ್ಲದೆ ಮರಣವಿಲ್ಲ. ಭಾಷೆ ತೀರಿದಲ