Skip to main content

ಅಕ್ಕನ ವಚನಗಳು - 41 ರಿಂದ 50 ರವರೆಗೆ

೪೧.
ಶ್ರೀ ಗುರುಲಿಂಗದೇವರು ತಮ್ಮ ಹಸ್ತವ ತಂದು
ಎನ್ನ ಮಸ್ತಕದ ಮೇಲೆ ಇರಿಸಿದಾಗಳೇ
ಎನ್ನ ಭವಂ ನಾಸ್ತಿಯಾಯಿತ್ತು! ಎನ್ನ ತನ್ನಂತೆ ಮಾಡಿದ!
ಎನಗೆ-ತನಗೆ ತೆರಹಿಲ್ಲದಂತೆ ಮಾಡಿ ತೋರಿದನು ನೋಡಾ!
ತನ್ನ ಕರಸ್ಥಲದಲ್ಲಿದ್ದ ಮಹಾಲಿಂಗವನು
ಎನ್ನ ಕರಸ್ಥಲದಲ್ಲಿ ಮೂರ್ತಿಗೊಳಿಸಿದ!
ಎನ್ನ ಕರಸ್ಥಲದಲ್ಲಿದ್ದ ಮಹಾಲಿಂಗವನು
ಎನ್ನ ಮನಸ್ಥಲದಲ್ಲಿ ಮೂರ್ತಿಗೊಳಿಸಿದ!
ಎನ್ನ ಮನಸ್ಥಲದಲ್ಲಿದ್ದ ಮಹಾಲಿಂಗವನು
ಎನ್ನ ಭಾವಸ್ಥಲದಲ್ಲಿ ಮೂರ್ತಿಗೊಳಿಸಿದ!
ಎನ್ನ ಭಾವಸ್ಥಲದಲ್ಲಿದ್ದ ಮಹಾಲಿಂಗವನು
ಎನ್ನ ಜ್ಞಾನಸ್ಥಲದಲ್ಲಿ ಮೂರ್ತಿಗೊಳಿಸಿದ!
ಎನ್ನ ಜ್ಞಾನಸ್ಥಲದಲ್ಲಿದ್ದ ಮಹಾಲಿಂಗವನು
ಎನ್ನ ಸರ್ವಾಂಗದೊಳಹೊರಗೆ ತೆರಹಿಲ್ಲದಳವಡಿಸಿದ
ನಮ್ಮ ಗುರುಲಿಂಗದೇವ ಚೆನ್ನಮಲ್ಲಿಕಾರ್ಜುನ
೪೨.
ನಿತ್ಯವೆನ್ನ ಮನೆಗೆ ನಡೆದು ಬಂದಿತ್ತು
ಮುಕ್ತಿಯೆನ್ನ ಮನೆಗೆ ನಡೆದು ಬಂದಿತ್ತು
ಜಯ ಜಯ ಗುರು ನಮೋ
ಪರಮ ಗುರುವೆ ನಮೋ ನಮೋ
ಚೆನ್ನಮಲ್ಲಿಕಾರ್ಜುನನ ತಂದೆನಗೆ ತೋರಿ ಕೊಟ್ಟ
ಗುರುವೆ ನಮೋ ನಮೋ
೪೩.
ನರ-ಜನ್ಮವ ತೊಡೆದು
ಹರ-ಜನ್ಮವ ಮಾಡಿದ ಗುರುವೆ
ಭವಬಂಧನವ ಬಿಡಿಸಿ
ಪರಮಸುಖವ ತೋರಿದ ಗುರುವೆ
ಭವಿ ಎಂಬುದ ತೊಡೆದು
ಭಕ್ತೆ ಎಂದೆನಿಸಿದ ಗುರುವೆ
ಚೆನ್ನಮಲ್ಲಿಕಾರ್ಜುನನ ತಂದೆನ್ನ ಕೈವಶಕೆ
ಕೊಟ್ಟ ಗುರುವೆ ನಮೋ ನಮೋ
೪೪.
ಸಂಸಾರಸಾಗರದೊಳಗೆ ಬಿದ್ದೆ ನೋಡಾ ನಾನು
ಸಂಸಾರ ನಿಸ್ಸಾರವೆಂದು ತೋರಿದನೆನಗೆ ಗುರು
ಅಂಗ ವಿಕಾರದ ಸಂಗವ ನಿಲಿಸಿ
ಲಿಂಗವನಂಗದ ಮೇಲೆ ಸ್ಥಾಪ್ಯವ ಮಾಡಿದನೆನ್ನ ಗುರು
ಹಿಂದಣ ಜನ್ಮವ ತೊಡೆದು
ಮುಂದಣ ಪಥವ ತೋರಿದನೆನ್ನ ತಂದೆ
ಚೆನ್ನಮಲ್ಲಿಕಾರ್ಜುನನ ನಿಜವನರುಹಿದನೆನ್ನ ಗುರು
೪೫.
ಅರಲುಗೊಂಡ ಕೆರೆಗೆ ತೊರೆ ಬಂದು ಹಾಯ್ದಂತೆ
ಬರಲುಗೊಂಡ ಸಸಿಗೆ ಮಳೆಸುರಿದಂತಾಯ್ತು ನೋಡಾ!
ಇಂದೆನಗೆ ಇಹದ ಸುಖ, ಪರದ ಗತಿ ನಡೆದು ಬಂದಂತಾಯಿತ್ತು
ನೋಡಾ ಚೆನ್ನಮಲ್ಲಿಕಾರ್ಜುನಯ್ಯ ಗುರುಪಾದವ ಕಂಡು
ಧನ್ಯಳಾದೆನು ನೋಡಾ






೪೬.
ಲೋಕದ ಚೇಷ್ಟೆಗೆ ರವಿ ಬೀಜವಾದಂತೆ
ಕರಣಂಗಳ ಚೇಷ್ಟೆಗೆ ಮನವೇ ಬೀಜ!
ಎನಗುಳ್ಳುದೊಂದು ಮನ,
ಆ ಮನ ನಿಮ್ಮಲ್ಲಿ ಒಡೆವೆರೆದ ಬಳಿಕ
ಎನಗೆ ಭಯವುಂಟೆ ಚೆನ್ನಮಲ್ಲಿಕಾರ್ಜುನಯ್ಯ!?
೪೭.
ಅಂಗವ ಲಿಂಗಮುಖಕ್ಕೆ ಅರ್ಪಿಸಿ
ಅಂಗ ಅನಂಗವಾಯಿತ್ತು
ಮನವ ಅರಿವಿಂಗರ್ಪಿಸಿ ಮನ ಲಯವಾಯಿತ್ತು
ಭಾವವ ತೃಪ್ತಿಗರ್ಪಿಸಿ ಭಾವ ಬಯಲಾಯಿತ್ತು
ಅಂಗ-ಮನ-ಭಾವವಳಿದ ಕಾರಣ ಕಾಯ ಅಕಾಯವಾಯಿತ್ತು
ಎನ್ನ ಅಕಾಯದ ಸುಖವ ಲಿಂಗ ಭೋಗಿಸುವನಾಗಿ
ಶರಣಸತಿ-ಲಿಂಗಪತಿಯಾದೆನು!
ಇದು ಕಾರಣ ಚೆನ್ನಮಲ್ಲಿಕಾರ್ಜುನಯ್ಯನೆಂಬ
ಗಂಡನ ಒಳಹೊಕ್ಕು ಬೆರೆಸಿದೆನು!
೪೮.
ಹರನೇ ನೀನೆನಗೆ ಗಂಡನಾಗಬೇಕೆಂದು
ಅನಂತಕಾಲ ತಪಿಸಿದ್ದೆ ನೋಡಾ!
ಹದೆಯ ಮೇಲಣ ಮಾತ ಬೆಸಗೊಳಲಟ್ಟಿದರೆ
ಶಶಿಧರನ ಹತ್ತಿರಕ್ಕೆ ಕಳುಹಿದರೆಮ್ಮವರು
ಭಸ್ಮವನೇ ಪೂಸಿ ಕಂಕಣವನೆ ಕಟ್ಟಿದರು
ಚೆನ್ನಮಲ್ಲಿಕಾರ್ಜುನ ತನಗೆ ನಾನಾಗಬೇಕೆಂದು!
೪೯.
ಜಲದ ಮಂಟಪದ ಮೇಲೆ
ಉರಿಯ ಚಪ್ಪರವನಿಕ್ಕಿ,
ಆಲಿಕಲ್ಲ ಹಸೆಯ ಹಾಸಿ, ಬಾಸಿಗವ ಕಟ್ಟಿ
ಕಾಲಿಲ್ಲದ ಹೆಂಡತಿಗೆ
ತಲೆಯಿಲ್ಲದ ಗಂಡ ಬಂದು ಮುಟ್ಟಿದನು ನೋಡಾ!
ಎಂದೆಂದೂ ಬಿಡದ ಬಾಳುವೆಗೆ ಕೊಟ್ಟರೆನ್ನ
ಚೆನ್ನಮಲ್ಲಿಕಾರ್ಜುನಯ್ಯನಿಗೆ!
೫೦.
ಎನ್ನ ನಾನರಿಯದಂದು ಮುನ್ನ ನೀನೆಲ್ಲಿರ್ದೆ? ಹೇಳಯ್ಯ!
ಚಿನ್ನದೊಳಗಣ ಬಣ್ಣದಂತೆ ಎನ್ನೊಳಗಿರ್ದೆಯಯ್ಯ
ಎನ್ನೊಳಗಿರ್ದು ಮೈದೋರದ ಭೇದವ
ನಿಮ್ಮಲ್ಲಿ ಕಂಡೆನು ಕಾಣಾ ಚೆನ್ನಮಲ್ಲಿಕಾರ್ಜುನ

Comments

Popular posts from this blog

ಬಸವಣ್ಣನ ವಚನಗಳು - 331 ರಿಂದ 340 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೩೧. ವ್ಯಾಸ ಬೋಯಿತಿಯ ಮಗ. ಮಾರ್ಕಂಡೇಯ ಮಾತಂಗಿಯ ಮಗ. ಮಂಡೋದರಿ ಕಪ್ಪೆಯ ಮಗಳು. ಕುಲವನರಸದಿರಿ ಭೋ! ಕುಲದಿಂದ ಮುನ್ನೇನಾದಿರಿ ಭೋ! ಸಾಕ್ಷಾತ್ ಅಗಸ್ತ್ಯ ಕಬ್ಬಿಲ. ದೂರ್ವಾಸ ಮಚ್ಚಿಗ. ಕಶ್ಯಪ ಕಮ್ಮಾರ. ಕೌಂಡಿನ್ಯನೆಂಬ ಋಷಿ ಮೂರುಲೋಕವರಿಯೆ ನಾವಿದ ಕಾಣಿ ಭೋ! ನಮ್ಮ ಕೂಡಲಸಂಗನ ವಚನವಿಂತೆಂದುದು- "ಶ್ವಪಚೋಪಿಯಾದರೇನು ಶೀವಭಕ್ತನೇ ಕುಲಜಂ" ಭೋ! ೩೩೨. ಹೊಲೆಗಂಡಲ್ಲದೆ ಪಿಂಡದ ನೆಲೆಗಾಶ್ರಯವಿಲ್ಲ. ಜಲಬಿಂದುವಿನ ವ್ಯವಹಾರವೊಂದೇ. ಆಶೆಯಾಮಿಷ ಹರ್ಷರೋಷ ವಿಷಯಾದಿಗಳೆಲ್ಲವೊಂದೇ. ಏನನೋದಿ ಏನ ಕೇಳಿ ಏನು ಫಲ ?! ಕುಲಜನೆಂಬುದಕ್ಕೆ ಆವುದು ದೃಷ್ಟ ? "ಸಪ್ತಧಾತುಸಮಂ ಪಿಂಡಂ ಸಮಯೋನಿಸಮುದ್ಭವಂ | ಆತ್ಮಾಜೀವಸ್ಸಮಸ್ತಸ್ಮಾತ್ ವರ್ಣಾನಾಂ ಕಿಂ ಪ್ರಯೋಜನಂ ?" || ಕಾಸಿ ಕಮ್ಮಾರನಾದ, ಬೀಸಿ ಮಡಿವಾಳನಾದ, ಹಾಸನಿಕ್ಕಿ ಸಾಲಿಗನಾದ, ವೇದವನೋದಿ ಹಾರುವನಾದ. ಕರ್ಣದಲ್ಲಿ ಜನಿಸಿದವರುಂಟೆ ಜಗದೊಳಗೆ ? ಇದು ಕಾರಣ, ಕೂಡಲಸಂಗಮದೇವ, ಲಿಂಗಸ್ಥಲವನರಿದವನೇ ಕುಲಜನು! ೩೩೩. ಕೊಲುವವನೇ ಮಾದಿಗ! ಹೊಲಸ ತಿಂಬವನೇ ಹೊಲೆಯ! ಕುಲವೇನೋ ? ಆವದಿರ ಕುಲವೇನೋ ? ಸಕಲ ಜೀವಾ

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ಜರಿದ

ಬಸವಣ್ಣನ ವಚನಗಳು - 371 ರಿಂದ 380 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೭೧. ಜಂಬೂದ್ವೀಪನವಖಂಡಪೃಥ್ವಿಯೊಳಗೆ ಕೇಳಿರಯ್ಯ ಎರಡಾಳಿನ ಭಾಷೆಯ! ಕೊಲುವೆನೆಂಬ ಭಾಷೆ ದೇವನದು, ಗೆಲುವೆನೆಂಬ ಭಾಷೆ ಭಕ್ತನದು. ಸತ್ಯವೆಂಬ ಕೂರಲಗನೆ ಕಳೆದುಕೊಂಡು ಸದ್ಭಕ್ತರು ಗೆದ್ದರು ಕಾಣಾ ಕೂಡಲಸಂಗಮದೇವ. ೩೭೨. ಶಿವಭಕ್ತನಾಗಿ ತನ್ನ ಹಿಡಿದಹೆನೆಂದು ಹೋದರೆ ನುಗ್ಗುಮಾಡುವ, ನುಸಿಯ ಮಾಡುವ! ಮಣ್ಣುಮಾಡುವ, ಮಸಿಯ ಮಾಡುವ! ಕೂಡಲಸಂಗಮದೇವರ ನೆರೆನಂಬಿದನಾದರೆ ಕಡೆಗೆ ತನ್ನಂತೆ ಮಾಡುವ. ೩೭೩. ಅರೆವನಯ್ಯ ಸಣ್ಣವಹನ್ನಕ ಒರೆವನಯ್ಯ ಬಣ್ಣಗಾಬನ್ನಕ ಅರೆದರೆ ಸುಣ್ಣವಾಗಿ, ಒರೆದರೆ ಬಣ್ಣವಾದರೆ ಕೂಡಲಸಂಗಮದೇವನೊಲಿದು ಸಲಹುವನು. ೩೭೪. ಎಡದ ಪಾದದಲೊದ್ದರೆ ಬಲದ ಪಾದವ ಹಿಡಿವೆ! ಬಲದ ಪಾದದಲೊದ್ದರೆ ಎಡದ ಪಾದವ ಹಿಡಿವೆ! ತ್ರಾಹಿ, ತ್ರಾಹಿ! ತಪ್ಪೆನ್ನದು, ಕ್ಷಮೆ ನಿನ್ನದು! ಕೂಡಲಸಂಗಮದೇವ ನಿಮ್ಮ ಕರುಣದ ಕಂದ ನಾನು! ೩೭೫. ಅಂಜಿದರಾಗದು, ಅಳುಕಿದರಾಗದು! ವಜ್ರಪಂಜರದೊಳಗಿದ್ದರಾಗದು! ತಪ್ಪದೆಲವೋ ಲಲಾಟಲಿಖಿತ! ಕಕ್ಕುಲತೆಬಟ್ಟರಾಗದು ನೋಡಾ! ಧೃತಿಗೆಟ್ಟು ಮನ ಧಾತುಗೆಟ್ಟರೆ ಅಪ್ಪುದು ತಪ್ಪದು ಕೂಡಲಸಂಗಮದೇವ. ೩೭೬. ಆಯುಷ್ಯ ತೀರಿದಲ್ಲದೆ ಮರಣವಿಲ್ಲ. ಭಾಷೆ ತೀರಿದಲ