Skip to main content

ಅಲ್ಲಮಪ್ರಭುವಿನ ವಚನಗಳು : 111 ರಿಂದ 120

೧೧೧.
ಅಱಿದಱಿದು ಅಱಿವು ಬಱುದೊಱಿವೋಯಿತ್ತು !
"ಕುಱುಹ[ತೋಱ]ದಡೆಂತೂ ನಂಬರು,
ತೆಱಹಿಲ್ಲದ ಘನವ ನೆನೆದು
ಗುರುಶರಣೆಂಬುದಲ್ಲದೆ ಮಱಹು ಬಂದೀತೆಂ"ದು
ಗುರು ಕುಱುಹ ತೋಱಿದನಲ್ಲದೆ
ಬಲ್ಲಡೆ ಗುಹೇಶ್ವರಲಿಂಗವು ಹೃದಯದಲೈದಾನೆ.

೧೧೨.
ಉದಕ ಮೂರುತಿಯಾಗಿ
ಉದಯವಾಯಿತ್ತು ಪಿಂಡಿಗೆಯಲ್ಲಿ
ಮೂಲ ಸ್ಥಾನ ಸ್ಥಾಪ್ಯವಾಯಿತ್ತು
ಸ್ವದೇಹಶಿವಪುರದಲ್ಲಿ !
ವಾಯು ಪೂಜಾರಿಯಾಗಿ
ಪರಿಮಳದಿಂಡೆದಂಡೆಯ ಕಟ್ಟಿ
ಪೂಜಿಸುತ್ತಿರ್ದುದೋ ನವದ್ವಾರಶಿವಾಲಯದಾದಿಮಧ್ಯಸ್ಥಾನದಲ್ಲಿ
ಗುಹೇಶ್ವರನೆಂಬುದಲ್ಲಿಯೆ ನಿಂದಿತ್ತು.

೧೧೩.
ಕಾಲೇ ಕಂಭಗಳಾದವೆನ್ನ
ದೇಹವೇ ದೇಗುಲವಾದುವಯ್ಯ !
ಎನ್ನ ನಾಲಗೆಯೆ ಘಂಟೆ
ಶಿರ ಸುವರ್ಣದ ಕಳಸವಿದೇನಯ್ಯ !
ಸ್ವರವೇ ಲಿಂಗಕ್ಕೆ ಸಿಂಹಾಸನವಾಗಿರ್ದುದು !
ಗುಹೇಶ್ವರ,
ನಿಮ್ಮ ಪ್ರಾಣಲಿಂಗಪ್ರತಿಷ್ಠೆ ಪಲ್ಲಟವಾಗದಂತಿದ್ದೆನಯ್ಯ.

೧೧೪.
ಪ್ರಾಣಲಿಂಗಕ್ಕೆ ಕಾಯವೇ ಸೆಜ್ಜೆ
ಆಕಾಶಗಂಗೆಯಲ್ಲಿ ಮಜ್ಜನ
ಹೂವಿಲ್ಲದ ಪರಿಮಳದ ಪೂಜೆ
ಹೃದಯಕಮಲದಲ್ಲಿ ಶಿವಶಿವಾ ಎಂಬ ಶಬ್ದ
ಇದು ಅದ್ವೈತ ಕಾಣಾ ಗುಹೇಶ್ವರ.

೧೧೫.
ಹೊತ್ತಾರೆ ಪೂಜಿಸಲುಬೇಡ ಕಂಡಾ !
ಬೈಗೆ ಪೂಜಿಸಲುಬೇಡ ಕಂಡಾ !
ಇರುಳುವನೂ ಹಗಲುವನೂ ಕಳೆದು ಪೂಜಿಸಬೇಕು ಕಂಡಾ !
ಇಂತಪ್ಪ ಪೂಜೆಯ ಪೂಜಿಸುವರ
ಎನಗೆ ತೋಱಯ್ಯ ಗುಹೇಶ್ವರ.

೧೧೬.
ಅಂಗದಲ್ಲಿ ಮಾಡುವ ಸುಖವದು
ಲಿಂಗಕ್ಕೆ ಭೂಷಣವಾಯಿತ್ತು.
ಕಾಡುಗಿಚ್ಚಿನ ಕೈಯಲ್ಲಿ
ಕರಡವ ಕೊಯ್ಸುವಂತೆ-
ಹಿಂದೆ ಮೆದೆಯಿಲ್ಲ !
ಮುಂದೆ ಹುಲ್ಲಿಲ್ಲ !!
ಅಂಗ-ಲಿಂಗವೆಂಬನ್ನಕ್ಕರ ಫಲದಾಯಕ,
ಲಿಂಗೈಕ್ಯವದು ಬೇಱೆ ಗುಹೇಶ್ವರ.

೧೧೭.
ಎನ್ನ ಮನದ ಕೊನೆಯ ಮೊನೆಯ ಮೇಲೆ
ಅಂಗವಿಲ್ಲದ ರೂಪನ ಕಂಡು ಮರುಳಾದೆನವ್ವ !
ಆತನ ಕಂಡು ಬೆಱಗಾದೆನವ್ವ-
ಎನ್ನಂತರಂಗದ ಆತುಮನೊಳಗೆ
ಅನಿಮಿಷನಿಜೈಕ್ಯ ಗುಹೇಶ್ವರನ ಕಂಡು !

೧೧೮.
ಮನದ ಸುಖವ ಕಂಗಳಿಗೆ ತಂದರೆ
ಕಂಗಳ ಸುಖವ ಮನಕ್ಕೆ ತಂದರೆ
ನಾಚಿತ್ತು, ಮನ ನಾಚಿತ್ತು !
ಸ್ಥಾನಪಲ್ಲಟವಾದಡೆ
ವ್ರತಕ್ಕೆ ಭಂಗ ಗುಹೇಶ್ವರ.

೧೧೯.
ಎನಗೊಂದು ಲಿಂಗ
ನಿನಗೊಂದು ಲಿಂಗ
ಮನೆಗೊಂದು ಲಿಂಗವಾಯಿತ್ತು !
ಹೋಯಿತ್ತಲ್ಲಾ ಭಕ್ತಿ ಜಲವ ಕೂಡಿ !
ಉಳಿ ಮುಟ್ಟಿದ ಲಿಂಗವ
ಮನ ಮುಟ್ಟಬಲ್ಲುದೇ ಗುಹೇಶ್ವರ ?

೧೨೦.
ಅರಳಿಯ ಮರದ ಮೇಲೆ
ಒಂದು ಹಂಸೆ ಗೂಡನಿಕ್ಕಿತ್ತ ಕಂಡೆ !
ಆ ಗೂಡಿನೊಳಗೊಬ್ಬ ಹೆಂಗೂಸು
ಉಯ್ಯಾಲೆಯಾಡುತ್ತಿದ್ದಳು.
ಉಯ್ಯಾಲೆ ಹಱಿದು
ಹೆಂಗೂಸು ನೆಲಕ್ಕೆ ಬಿದ್ದು ಸತ್ತಡೆ
ಪ್ರಾಣಲಿಂಗವ ಕಾಣಬಹುದು ಕಾಣಾ ಗುಹೇಶ್ವರ.

Comments

Popular posts from this blog

ಬಸವಣ್ಣನ ವಚನಗಳು - 331 ರಿಂದ 340 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೩೧. ವ್ಯಾಸ ಬೋಯಿತಿಯ ಮಗ. ಮಾರ್ಕಂಡೇಯ ಮಾತಂಗಿಯ ಮಗ. ಮಂಡೋದರಿ ಕಪ್ಪೆಯ ಮಗಳು. ಕುಲವನರಸದಿರಿ ಭೋ! ಕುಲದಿಂದ ಮುನ್ನೇನಾದಿರಿ ಭೋ! ಸಾಕ್ಷಾತ್ ಅಗಸ್ತ್ಯ ಕಬ್ಬಿಲ. ದೂರ್ವಾಸ ಮಚ್ಚಿಗ. ಕಶ್ಯಪ ಕಮ್ಮಾರ. ಕೌಂಡಿನ್ಯನೆಂಬ ಋಷಿ ಮೂರುಲೋಕವರಿಯೆ ನಾವಿದ ಕಾಣಿ ಭೋ! ನಮ್ಮ ಕೂಡಲಸಂಗನ ವಚನವಿಂತೆಂದುದು- "ಶ್ವಪಚೋಪಿಯಾದರೇನು ಶೀವಭಕ್ತನೇ ಕುಲಜಂ" ಭೋ! ೩೩೨. ಹೊಲೆಗಂಡಲ್ಲದೆ ಪಿಂಡದ ನೆಲೆಗಾಶ್ರಯವಿಲ್ಲ. ಜಲಬಿಂದುವಿನ ವ್ಯವಹಾರವೊಂದೇ. ಆಶೆಯಾಮಿಷ ಹರ್ಷರೋಷ ವಿಷಯಾದಿಗಳೆಲ್ಲವೊಂದೇ. ಏನನೋದಿ ಏನ ಕೇಳಿ ಏನು ಫಲ ?! ಕುಲಜನೆಂಬುದಕ್ಕೆ ಆವುದು ದೃಷ್ಟ ? "ಸಪ್ತಧಾತುಸಮಂ ಪಿಂಡಂ ಸಮಯೋನಿಸಮುದ್ಭವಂ | ಆತ್ಮಾಜೀವಸ್ಸಮಸ್ತಸ್ಮಾತ್ ವರ್ಣಾನಾಂ ಕಿಂ ಪ್ರಯೋಜನಂ ?" || ಕಾಸಿ ಕಮ್ಮಾರನಾದ, ಬೀಸಿ ಮಡಿವಾಳನಾದ, ಹಾಸನಿಕ್ಕಿ ಸಾಲಿಗನಾದ, ವೇದವನೋದಿ ಹಾರುವನಾದ. ಕರ್ಣದಲ್ಲಿ ಜನಿಸಿದವರುಂಟೆ ಜಗದೊಳಗೆ ? ಇದು ಕಾರಣ, ಕೂಡಲಸಂಗಮದೇವ, ಲಿಂಗಸ್ಥಲವನರಿದವನೇ ಕುಲಜನು! ೩೩೩. ಕೊಲುವವನೇ ಮಾದಿಗ! ಹೊಲಸ ತಿಂಬವನೇ ಹೊಲೆಯ! ಕುಲವೇನೋ ? ಆವದಿರ ಕುಲವೇನೋ ? ಸಕಲ ಜೀವಾ

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ಜರಿದ

ಬಸವಣ್ಣನ ವಚನಗಳು - 371 ರಿಂದ 380 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೭೧. ಜಂಬೂದ್ವೀಪನವಖಂಡಪೃಥ್ವಿಯೊಳಗೆ ಕೇಳಿರಯ್ಯ ಎರಡಾಳಿನ ಭಾಷೆಯ! ಕೊಲುವೆನೆಂಬ ಭಾಷೆ ದೇವನದು, ಗೆಲುವೆನೆಂಬ ಭಾಷೆ ಭಕ್ತನದು. ಸತ್ಯವೆಂಬ ಕೂರಲಗನೆ ಕಳೆದುಕೊಂಡು ಸದ್ಭಕ್ತರು ಗೆದ್ದರು ಕಾಣಾ ಕೂಡಲಸಂಗಮದೇವ. ೩೭೨. ಶಿವಭಕ್ತನಾಗಿ ತನ್ನ ಹಿಡಿದಹೆನೆಂದು ಹೋದರೆ ನುಗ್ಗುಮಾಡುವ, ನುಸಿಯ ಮಾಡುವ! ಮಣ್ಣುಮಾಡುವ, ಮಸಿಯ ಮಾಡುವ! ಕೂಡಲಸಂಗಮದೇವರ ನೆರೆನಂಬಿದನಾದರೆ ಕಡೆಗೆ ತನ್ನಂತೆ ಮಾಡುವ. ೩೭೩. ಅರೆವನಯ್ಯ ಸಣ್ಣವಹನ್ನಕ ಒರೆವನಯ್ಯ ಬಣ್ಣಗಾಬನ್ನಕ ಅರೆದರೆ ಸುಣ್ಣವಾಗಿ, ಒರೆದರೆ ಬಣ್ಣವಾದರೆ ಕೂಡಲಸಂಗಮದೇವನೊಲಿದು ಸಲಹುವನು. ೩೭೪. ಎಡದ ಪಾದದಲೊದ್ದರೆ ಬಲದ ಪಾದವ ಹಿಡಿವೆ! ಬಲದ ಪಾದದಲೊದ್ದರೆ ಎಡದ ಪಾದವ ಹಿಡಿವೆ! ತ್ರಾಹಿ, ತ್ರಾಹಿ! ತಪ್ಪೆನ್ನದು, ಕ್ಷಮೆ ನಿನ್ನದು! ಕೂಡಲಸಂಗಮದೇವ ನಿಮ್ಮ ಕರುಣದ ಕಂದ ನಾನು! ೩೭೫. ಅಂಜಿದರಾಗದು, ಅಳುಕಿದರಾಗದು! ವಜ್ರಪಂಜರದೊಳಗಿದ್ದರಾಗದು! ತಪ್ಪದೆಲವೋ ಲಲಾಟಲಿಖಿತ! ಕಕ್ಕುಲತೆಬಟ್ಟರಾಗದು ನೋಡಾ! ಧೃತಿಗೆಟ್ಟು ಮನ ಧಾತುಗೆಟ್ಟರೆ ಅಪ್ಪುದು ತಪ್ಪದು ಕೂಡಲಸಂಗಮದೇವ. ೩೭೬. ಆಯುಷ್ಯ ತೀರಿದಲ್ಲದೆ ಮರಣವಿಲ್ಲ. ಭಾಷೆ ತೀರಿದಲ