Skip to main content

ಅಲ್ಲಮಪ್ರಭುವಿನ ವಚನಗಳು : 91 ರಿಂದ 100

ಅಲ್ಲಮಪ್ರಭುವಿನ ವಚನಗಳು : 91 ರಿಂದ 100
೯೧.
ಲಿಂಗ ಒಳಗೋ ಹೊಱಗೋ ?
ಬಲ್ಲಡೆ ನೀವು ಹೇಳಿರೇ !
ಲಿಂಗ ಎಡನೋ ಬಲನೋ ?
ಬಲ್ಲಡೆ ನೀವು ಹೇಳಿರೇ !
ಲಿಂಗ ಮುಂದೋ ಹಿಂದೋ ?
ಬಲ್ಲಡೆ ನೀವು ಹೇಳಿರೇ !
ಲಿಂಗ ಸ್ಥೂಲವೋ ಸೂಕ್ಷ್ಮವೋ ?
ಬಲ್ಲಡೆ ನೀವು ಹೇಳಿರೇ !
ಲಿಂಗ ಪ್ರಾಣವೋ, ಪ್ರಾಣ ಲಿಂಗವೋ ?
ಬಲ್ಲಡೆ ನೀವು ಹೇಳಿರೇ ? ಗುಹೇಶ್ವರ.
೯೨.
ತನುವಿಂಗೆ ತನುವಾಗಿ
ಮನಕ್ಕೆ ಮನವಾಗಿ
ಜೀವಕ್ಕೆ ಜೀವವಾಗಿ ಇದ್ದುದನಾರು ಬಲ್ಲರೋ ?!
ಅದು ದೂರವೆಂದು
ಸಮೀಪವೆಂದು
ಮಹಂತ ಗುಹೇಶ್ವರನೊಳಗೆಂದು
ಹೊಱಗೆಂದು
ಬಱುಸೂಱೆವೋದರು !
ಪ್ರಸಾದಿ ಸ್ಥಲ
೯೩.
ಲಿಂಗಾರ್ಚನೆಯಿಲ್ಲದ ಮುನ್ನ
ಸಿಂಗಿಯಾನಾರೋಗಿಸಿದಿರಿ
ಸಂಜೆ ಸಮಾಧಿಗಳಿಲ್ಲದ ಮುನ್ನ ಉಂಡಿರಿ ಚೆನ್ನನ ಮನೆಯಲ್ಲಿ
ಚಿತ್ರಗುಪ್ತರಱಿಯದ ಮುನ್ನ ಎತ್ತಿದಿರಿ ಕಾಂಚಿಯ ಪುರವ
ಬೈಚಿಟ್ಟಿರಿ ಕೈಲಾಸವ ನಿಮ್ಮ ಚಿಕ್ಕುಟಾಧಾರದಲ್ಲಿ
ಈರೇಳು ಭುವನಂಗಳೆಲ್ಲವೂ ನಿಮ್ಮ ರೋಮಕೂಪದಲ್ಲಡಗಿದವು
ಪ್ರಾಣಾಪಾನ ವ್ಯಾನೋದಾನ ಸಮಾನರಹಿತ ಗುಹೇಶ್ವರ.
೯೪.
ತ್ರಿವಿಧ ನಿತ್ಯವ
ತ್ರಿವಿಧ ಅನಿತ್ಯವ ಬಲ್ಲವರಾರೋ ?
ತ್ರಿವಿಧಕ್ಕೆ ತ್ರಿವಿಧವನಿತ್ತು
ತ್ರಿವಿಧಪ್ರಸಾದದ ಕೊಳಬಲ್ಲಡೆ
ಆತನ ಧೀರನೆಂಬೆ !
ಆತನ
ಗುಹೇಶ್ವರಲಿಂಗದಲ್ಲಿ ಅಚ್ಚಪ್ರಸಾದಿಯೆಂಬೆ !
೯೫.
ಬೇಡದ ಮುನ್ನ ಮಾಡಬಲ್ಲಡೆ ಭಕ್ತ
ಬೇಡುವನೆ ಲಿಂಗಜಂಗಮ ?
ಬೇಡುವರಿಗೆಯೂ
ಬೇಡಿಸಿಕೊಂಬವರಿಗೆಯೂ
ಪ್ರಸಾದವಿಲ್ಲ ಗುಹೇಶ್ವರ.
೯೬.
ಒಳಗ ತೊಳೆಯಲಱಿಯದೇ
ಹೊಱಗ ತೊಳೆದು ಕುಡಿಯುತ್ತಿದ್ದರಯ್ಯ !
ಪಾದೋದಕ-ಪ್ರಸಾದವನಱಿಯದೆ
ಬಂದ ಬಟ್ಟೆಯಲ್ಲಿ ಮುಳುಗುತ್ತೈದಾರೆ ಗುಹೇಶ್ವರ.
೯೭.
ಮಾಡಿದ ಓಗರ ಮಾಡಿದಂತೆ ಇದ್ದಿತು
ನೀಡುವ ಕೈಗಳೆಡೆಯಾಡುತ್ತಿದ್ದವು.
ಲಿಂಗಕ್ಕರ್ಪಿತವ ಮಾಡಿದೆನೆಂಬರು.
ಒಂದಱಲೊಂದು ಸವೆಯದು ನೋಡಾ
ಲಿಂಗನಾರೋಗಣೆಯ ಮಾಡಿದನೆಂಬರು
ತಾವುಂಡು ನಿಮ್ಮ ದೂಱುವರು ಗುಹೇಶ್ವರ.
೯೮.
ತನ್ನ ಮುಟ್ಟಿ ನೀಡಿದುದೇ ಪ್ರಸಾದ.
ತನ್ನ ಮುಟ್ಟದೇ ನೀಡಿದುದೇ ಓಗರ.
ಲಿಂಗಕ್ಕೆ ಕೊಟ್ಟು ಕೊಂಡಡೆ ಪ್ರಸಾದಿ.
ಇದುಕಾರಣ-
ಇಂತಪ್ಪ ಭೃತ್ಯಾಚಾರಿಗಲ್ಲದೆ ಪ್ರಸಾದವಿಲ್ಲ ಗುಹೇಶ್ವರ.
೯೯.
ಆಧಿಯಿಲ್ಲದಿದ್ದಡೆ
ಲಿಂಗಪ್ರಸಾದಿಯೆಂಬೆ !
ವ್ಯಾಧಿಯಿಲ್ಲದಿದ್ದಡೆ
ಜಂಗಮಪ್ರಸಾದಿಯೆಂಬೆ !
ಲೌಕಿಕ ಸೋಂಕದಿದ್ದಡೆ
ಸಮಯಪ್ರಸಾದಿಯೆಂಬೆ !
ಇಂತೀ ತ್ರಿವಿಧಪ್ರಸಾದಸಂಬಂಧಿಯಾದಾತನ
ಅಚ್ಚಪ್ರಸಾದಿಯೆಂಬೆನು ಕಾಣಾ ಗುಹೇಶ್ವರ.
೧೦೦.
ಪದವನರ್ಪಿಸಬಹುದಲ್ಲದೆ
ಪದಾರ್ಥವನರ್ಪಿಸಬಾರದು !
ಓಗರವನರ್ಪಿಸಬಹುದಲ್ಲದೆ
ಪ್ರಸಾದವನರ್ಪಿಸಬಾರದು !
ಗುಹೇಶ್ವರ, ನಿಮ್ಮ ಶರಣರು
ಹಿಂದ ನೋಡಿ ಮುಂದನರ್ಪಿಸಿದರು !
ಪ್ರಾಣಲಿಂಗಿ ಸ್ಥಲ

Comments

Popular posts from this blog

ಬಸವಣ್ಣನ ವಚನಗಳು - 331 ರಿಂದ 340 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೩೧. ವ್ಯಾಸ ಬೋಯಿತಿಯ ಮಗ. ಮಾರ್ಕಂಡೇಯ ಮಾತಂಗಿಯ ಮಗ. ಮಂಡೋದರಿ ಕಪ್ಪೆಯ ಮಗಳು. ಕುಲವನರಸದಿರಿ ಭೋ! ಕುಲದಿಂದ ಮುನ್ನೇನಾದಿರಿ ಭೋ! ಸಾಕ್ಷಾತ್ ಅಗಸ್ತ್ಯ ಕಬ್ಬಿಲ. ದೂರ್ವಾಸ ಮಚ್ಚಿಗ. ಕಶ್ಯಪ ಕಮ್ಮಾರ. ಕೌಂಡಿನ್ಯನೆಂಬ ಋಷಿ ಮೂರುಲೋಕವರಿಯೆ ನಾವಿದ ಕಾಣಿ ಭೋ! ನಮ್ಮ ಕೂಡಲಸಂಗನ ವಚನವಿಂತೆಂದುದು- "ಶ್ವಪಚೋಪಿಯಾದರೇನು ಶೀವಭಕ್ತನೇ ಕುಲಜಂ" ಭೋ! ೩೩೨. ಹೊಲೆಗಂಡಲ್ಲದೆ ಪಿಂಡದ ನೆಲೆಗಾಶ್ರಯವಿಲ್ಲ. ಜಲಬಿಂದುವಿನ ವ್ಯವಹಾರವೊಂದೇ. ಆಶೆಯಾಮಿಷ ಹರ್ಷರೋಷ ವಿಷಯಾದಿಗಳೆಲ್ಲವೊಂದೇ. ಏನನೋದಿ ಏನ ಕೇಳಿ ಏನು ಫಲ ?! ಕುಲಜನೆಂಬುದಕ್ಕೆ ಆವುದು ದೃಷ್ಟ ? "ಸಪ್ತಧಾತುಸಮಂ ಪಿಂಡಂ ಸಮಯೋನಿಸಮುದ್ಭವಂ | ಆತ್ಮಾಜೀವಸ್ಸಮಸ್ತಸ್ಮಾತ್ ವರ್ಣಾನಾಂ ಕಿಂ ಪ್ರಯೋಜನಂ ?" || ಕಾಸಿ ಕಮ್ಮಾರನಾದ, ಬೀಸಿ ಮಡಿವಾಳನಾದ, ಹಾಸನಿಕ್ಕಿ ಸಾಲಿಗನಾದ, ವೇದವನೋದಿ ಹಾರುವನಾದ. ಕರ್ಣದಲ್ಲಿ ಜನಿಸಿದವರುಂಟೆ ಜಗದೊಳಗೆ ? ಇದು ಕಾರಣ, ಕೂಡಲಸಂಗಮದೇವ, ಲಿಂಗಸ್ಥಲವನರಿದವನೇ ಕುಲಜನು! ೩೩೩. ಕೊಲುವವನೇ ಮಾದಿಗ! ಹೊಲಸ ತಿಂಬವನೇ ಹೊಲೆಯ! ಕುಲವೇನೋ ? ಆವದಿರ ಕುಲವೇನೋ ? ಸಕಲ ಜೀವಾ

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ಜರಿದ

ಬಸವಣ್ಣನ ವಚನಗಳು - 371 ರಿಂದ 380 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೭೧. ಜಂಬೂದ್ವೀಪನವಖಂಡಪೃಥ್ವಿಯೊಳಗೆ ಕೇಳಿರಯ್ಯ ಎರಡಾಳಿನ ಭಾಷೆಯ! ಕೊಲುವೆನೆಂಬ ಭಾಷೆ ದೇವನದು, ಗೆಲುವೆನೆಂಬ ಭಾಷೆ ಭಕ್ತನದು. ಸತ್ಯವೆಂಬ ಕೂರಲಗನೆ ಕಳೆದುಕೊಂಡು ಸದ್ಭಕ್ತರು ಗೆದ್ದರು ಕಾಣಾ ಕೂಡಲಸಂಗಮದೇವ. ೩೭೨. ಶಿವಭಕ್ತನಾಗಿ ತನ್ನ ಹಿಡಿದಹೆನೆಂದು ಹೋದರೆ ನುಗ್ಗುಮಾಡುವ, ನುಸಿಯ ಮಾಡುವ! ಮಣ್ಣುಮಾಡುವ, ಮಸಿಯ ಮಾಡುವ! ಕೂಡಲಸಂಗಮದೇವರ ನೆರೆನಂಬಿದನಾದರೆ ಕಡೆಗೆ ತನ್ನಂತೆ ಮಾಡುವ. ೩೭೩. ಅರೆವನಯ್ಯ ಸಣ್ಣವಹನ್ನಕ ಒರೆವನಯ್ಯ ಬಣ್ಣಗಾಬನ್ನಕ ಅರೆದರೆ ಸುಣ್ಣವಾಗಿ, ಒರೆದರೆ ಬಣ್ಣವಾದರೆ ಕೂಡಲಸಂಗಮದೇವನೊಲಿದು ಸಲಹುವನು. ೩೭೪. ಎಡದ ಪಾದದಲೊದ್ದರೆ ಬಲದ ಪಾದವ ಹಿಡಿವೆ! ಬಲದ ಪಾದದಲೊದ್ದರೆ ಎಡದ ಪಾದವ ಹಿಡಿವೆ! ತ್ರಾಹಿ, ತ್ರಾಹಿ! ತಪ್ಪೆನ್ನದು, ಕ್ಷಮೆ ನಿನ್ನದು! ಕೂಡಲಸಂಗಮದೇವ ನಿಮ್ಮ ಕರುಣದ ಕಂದ ನಾನು! ೩೭೫. ಅಂಜಿದರಾಗದು, ಅಳುಕಿದರಾಗದು! ವಜ್ರಪಂಜರದೊಳಗಿದ್ದರಾಗದು! ತಪ್ಪದೆಲವೋ ಲಲಾಟಲಿಖಿತ! ಕಕ್ಕುಲತೆಬಟ್ಟರಾಗದು ನೋಡಾ! ಧೃತಿಗೆಟ್ಟು ಮನ ಧಾತುಗೆಟ್ಟರೆ ಅಪ್ಪುದು ತಪ್ಪದು ಕೂಡಲಸಂಗಮದೇವ. ೩೭೬. ಆಯುಷ್ಯ ತೀರಿದಲ್ಲದೆ ಮರಣವಿಲ್ಲ. ಭಾಷೆ ತೀರಿದಲ