ಬಸವಣ್ಣನ ವಚನಗಳು - 31 ರಿಂದ 40 ರವರೆಗೆ ೩೧. ಆನು ಒಬ್ಬನು; ಸುಡುವರೈವರು. ಮೇಲೆ ಕಿಚ್ಚು ಘನ, ನಿಲಲು ಬಾರದು. ಕಾಡುಬಸವನ ಹುಲಿ ಕೊಂಡೊಯ್ದರೆ ಆರೈಯಲಾಗದೆ ಕೂಡಲಸಂಗಮದೇವ ? ೩೨. ಬೆಳೆಯ ಭೂಮಿಯಲೊಂದು ಪ್ರಳಯದ ಕಸ ಹುಟ್ಟಿ, ತಿಳಿಯಲೀಯದು; ಎಚ್ಚರಲೀಯದು. ಎನ್ನವಗುಣವೆಂಬ ಕಸವ ಕಿತ್ತು ಸಲಹಯ್ಯ ಲಿಂಗತಂದೆ. ಸುಳಿದೆಗೆದು ಬೆಳೆವೆನು ಕೂಡಲಸಂಗಮದೇವ. ೩೩. ವಿಷಯವೆಂಬ ಹಸುರನೆನ್ನ ಮುಂದೆ ತಂದು ಪಸರಿಸಿದೆಯಯ್ಯ; ಪಶುವೇನ ಬಲ್ಲುದು ಹಸುರೆಂದೆಳಸುವುದು ವಿಷಯರಹಿತನ ಮಾಡಿ, ಭಕ್ತಿರಸವ ದಣಿಯ ಮೇಯಿಸಿ ಸುಬುದ್ಧಿಯೆಂಬುದಕವನೆರೆದು ನೋಡಿ ಸಲಹಯ್ಯ ಕೂಡಲಸಂಗಮದೇವ. ೩೪. ಅಯ್ಯ, ಎಳಗರು ತಾಯನರಸಿ ಬಳಲುವಂತೆ ಅಯ್ಯ, ನಿಮ್ಮನರಸಿ ಬಳಲುತ್ತಿದ್ದೇನೆ, ಅಯ್ಯ, ನೀವೆನ್ನ ಮನಕ್ಕೆ ಪ್ರಸನ್ನವ ಮಾಡಿ ಕಾರುಣ್ಯವ ಮಾಡಿರಯ್ಯ! ನೀವೆನ್ನ ಮನಕ್ಕೆ ನೆಲೆವನೆಯಾಗಿ ಕಾರುಣ್ಯವ ಮಾಡಿರಯ್ಯ! ನೀವಿನಿತು ಲೇಸನೀಯಯ್ಯ, ಅಂಬೇ, ಅಂಬೇ, ಕೂಡಲಸಂಗಮದೇವ! ೩೫. ಕೆಸರಲ್ಲಿ ಬಿದ್ದ ಪಶುವಿನಂತೆ ಅನು ದೆಸೆದೆಸೆಗೆ ಬಾಯ ಬಿಡುತಿದ್ದೇನಯ್ಯ ಅಯ್ಯಾ, ಆರೈವರಿಲ್ಲ-- "ಅಕಟಕಟಾ! ಪಶು" ವೆಂದೆನ್ನ ಕೂಡಲಸಂಗಮದೇವ ಕೊಂಬ ಹಿಡಿದೆತ್ತುವನ್ನಕ. ೩೬. ಬಡಪಶು ಪಂಕದಲ್ಲಿ ಬಿದ್ದರೆ ಕಾಲ ಬಡಿವುದಲ್ಲದೆ, ಬೇರೆ ಗತಿಯುಂಟೆ ? ಶಿವ ಶಿವಾ! ಹೋದಹೆ, ಹೋದಹೆನಯ್ಯ! ನಿಮ್ಮ ಮನದೆತ್ತಲೆನ್ನ ತೆಗೆಯಯ್ಯ ಪಶುವಾನು, ಪಶುಪತಿ ನೀನು. ತುಡುಗುಣಿಯೆಂ...
ಬಸವಣ್ಣ,ಅಕ್ಕಮಹಾದೇವಿ,ಅಲ್ಲಮಪ್ರಭು ಮತೂ ಸರ್ವಜ್ಞರ ವಚನಗಳು