Skip to main content

ಬಸವಣ್ಣನ ವಚನಗಳು - 201 ರಿಂದ 210 ರವರೆಗೆ

೨೦೧.
ಊರ ಸೀರೆಗೆ ಅಸಗ ಬಡಿವಡೆದಂತೆ
ಹೊನ್ನೆನ್ನದು, ಹೆಣ್ಣೆನ್ನದು, ಮಣ್ಣೆನ್ನದು,
ಎಂದು ಮರುಳಾದೆ.
ನಿಮ್ಮನರಿಯದ ಕಾರಣ,
ಕೆಮ್ಮನೆ ಕೆಟ್ಟೆ ಕೂಡಲಸಂಗಮದೇವ.
೨೦೨.
ಕಾಂಚನವೆಂಬ ನಾಯ ನೆಚ್ಚಿ
ನಿಮ್ಮ ನಾನು ಮರೆದೆನಯ್ಯ.
ಕಾಂಚನಕ್ಕೆ ವೇಳೆಯಲ್ಲದೆ, ಲಿಂಗಕ್ಕೆ ವೇಳೆಯಿಲ್ಲ!
ಹಡಕಿಗೆ ಮೆಚ್ಚಿದ ಸೊಣಗನಮೃತದ ರುಚಿಯ ಬಲ್ಲುದೇ ?
ಕೂಡಲಸಂಗಮದೇವ.
೨೦೩.
ಹಗೆಹದಲ್ಲಿ ಬಿದ್ದವರ ಮೇಲೆ ಒರಳ ನೂಂಕುವರೆ ?
ಕೋಳದ ಮೇಲೆ ಸಂಕಲೆಯನಿಕ್ಕುವರೆ ?
ಬೆಂದ ಹುಣ್ಣ ಕಂಬಿಯಲ್ಲಿ ಕೀಸುವರೆ ?
ಕೂಡಲಸಂಗಯ್ಯ ಕಾಡುವ ಕಾಟ
ಸಿರಿಯಾಳಂಗಲ್ಲದೆ ಸೈರಿಸಬಹುದೆ ?
೨೦೪.
ಮಾತಿನಲ್ಲಿ ಶ್ರೋತ್ರಸುಖವ ನುಡಿಯಬಹುದಲ್ಲದೆ,
ಮಾಡುವ ಸತ್ಕ್ರಿಯೆಯಿಂದ ಭಕ್ತನೆನಿಸಲು ಬಾರದು.
ಅರ್ಥಪ್ರಾಣಾಭಿಮಾನವಾರಿಗೆಯು ಸಮನಿಸದು,
ಲಿಂಗಮುಖದಲುದಯವಾದ ಶರಣಂಗಲ್ಲದೆ,
ಅಯ್ಯ, ಕೂಡಲಸಂಗನ ಶರಣರ
ಭಕ್ತಿಭಂಡಾರವು ಎನಗೆಂತು ಸಾಧ್ಯವಪ್ಪುದು,
ಹೇಳೆನ್ನ ತಂದೆ.
೨೦೫.
ಬಾಣಮಯೂರರಂತೆ ಬಣ್ಣಿಸಲರಿಯೆ
ಸಿರಿಯಾಳನಂತೆ ಉಣಲಿಕ್ಕಲರಿಯೆ
ದಾಸಿಮಯ್ಯನಂತೆ ಉಡಕೊಡಲರಿಯೆ
ಉಂಡುಟ್ಟು ಕೊಟ್ಟರೆ ಮುಯ್ಯಿಗೆ ಮುಯ್ಯೆನಿಸಿತ್ತು,
ಎನಗೆ ಕೊಟ್ಟರೆ ಧರ್ಮ ಕೂಡಲಸಂಗಮದೇವ.
೨೦೬.
ಎನ್ನ ತಪ್ಪನಂತಕೋಟಿ
ನಿಮ್ಮ ಸೈರಣೆಗೆ ಲೆಕ್ಕವಿಲ್ಲಯ್ಯ.
ಇನ್ನು ತಪ್ಪಿದೆನಾದರೆ
ನಿಮ್ಮ ಪಾದವೇ ದಿವ್ಯ ಕೂಡಲಸಂಗಮದೇವಯ್ಯ,
ನಿಮ್ಮ ಪ್ರಮಥರ ಮುಂದೆ ಕಿನ್ನರಿ ಬೊಮ್ಮಣ್ಣನೇ ಸಾಕ್ಷಿ!
೨೦೭.
ಅಡಿಗಡಿಗೆ ಎನ್ನ ಮನವ ಜಡಿದು ನೋಡದಿರಯ್ಯ.
ಬಡವನೆಂದೆನ್ನ ಕಾಡದಿರಯ್ಯ
ಎನಗೊಡೆಯರುಂಟು ನಮ್ಮ ಕೂಡಲಸಂಗನ ಶರಣರು.
೨೦೮.
ಮನೆ ನೋಡಾ ಬಡವರು,
ಮನ ನೋಡಾ ಧೀರರು
ಸೋಂಕಿನಲ್ಲಿ ಶುಚಿ;
ಸರ್ವಾಂಗಕಲಿ.
ಪರಸಕ್ಕನುವಿಲ್ಲ; ಬಂದ ತತ್ಕಾಲಕ್ಕುಂಟು.
ಕೂಡಲಸಂಗನ ಶರಣರು ಸ್ವತಂತ್ರಧೀರರು.
೨೦೯.
ಆ ಕರಿಯಾಕೃತಿಯ ಸೂಕರನ ಹೋಲಿಸಿದರೆ
ಸೂಕರ ಆ ಕರಿಯಾಗಬಲ್ಲುದೆ ?
ಆ ವ್ಯಾಳೇಶನಾಕೃತಿಯ ಭೂನಾಗನ ಹೋಲಿಸಿದರೆ
ಭೂನಾಗನಾ ವ್ಯಾಳೇಶನಾಗಬಲ್ಲುದೇ ?
ನಾನು ಭಕ್ತನಾದರೇನಯ್ಯ
ನಮ್ಮ ಕೂಡಲಸಂಗಮದೇವರ ಸದ್ಭಕ್ತರ ಹೋಲಲರಿವೆನೆ ?
೨೧೦.
ಮೋಟನ ಮೌಳಿ, ಮೂಕೊರತಿಯ ಶೃಂಗಾರ,
ಬೇಟ ಕುರುಡಂಗೆ ನಗೆಗೆಡೆಯಾಯಿತ್ತು!
ನಮ್ಮ ಕೂಡಲಸಂಗನ ಶರಣರ ಮುಂದೆ
ಆನು ಭಕ್ತನೆಂಬ ನಾಚಿಕೆ ಸಾಲದೆ ?

Comments

Popular posts from this blog

ಬಸವಣ್ಣನ ವಚನಗಳು - 331 ರಿಂದ 340 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೩೧. ವ್ಯಾಸ ಬೋಯಿತಿಯ ಮಗ. ಮಾರ್ಕಂಡೇಯ ಮಾತಂಗಿಯ ಮಗ. ಮಂಡೋದರಿ ಕಪ್ಪೆಯ ಮಗಳು. ಕುಲವನರಸದಿರಿ ಭೋ! ಕುಲದಿಂದ ಮುನ್ನೇನಾದಿರಿ ಭೋ! ಸಾಕ್ಷಾತ್ ಅಗಸ್ತ್ಯ ಕಬ್ಬಿಲ. ದೂರ್ವಾಸ ಮಚ್ಚಿಗ. ಕಶ್ಯಪ ಕಮ್ಮಾರ. ಕೌಂಡಿನ್ಯನೆಂಬ ಋಷಿ ಮೂರುಲೋಕವರಿಯೆ ನಾವಿದ ಕಾಣಿ ಭೋ! ನಮ್ಮ ಕೂಡಲಸಂಗನ ವಚನವಿಂತೆಂದುದು- "ಶ್ವಪಚೋಪಿಯಾದರೇನು ಶೀವಭಕ್ತನೇ ಕುಲಜಂ" ಭೋ! ೩೩೨. ಹೊಲೆಗಂಡಲ್ಲದೆ ಪಿಂಡದ ನೆಲೆಗಾಶ್ರಯವಿಲ್ಲ. ಜಲಬಿಂದುವಿನ ವ್ಯವಹಾರವೊಂದೇ. ಆಶೆಯಾಮಿಷ ಹರ್ಷರೋಷ ವಿಷಯಾದಿಗಳೆಲ್ಲವೊಂದೇ. ಏನನೋದಿ ಏನ ಕೇಳಿ ಏನು ಫಲ ?! ಕುಲಜನೆಂಬುದಕ್ಕೆ ಆವುದು ದೃಷ್ಟ ? "ಸಪ್ತಧಾತುಸಮಂ ಪಿಂಡಂ ಸಮಯೋನಿಸಮುದ್ಭವಂ | ಆತ್ಮಾಜೀವಸ್ಸಮಸ್ತಸ್ಮಾತ್ ವರ್ಣಾನಾಂ ಕಿಂ ಪ್ರಯೋಜನಂ ?" || ಕಾಸಿ ಕಮ್ಮಾರನಾದ, ಬೀಸಿ ಮಡಿವಾಳನಾದ, ಹಾಸನಿಕ್ಕಿ ಸಾಲಿಗನಾದ, ವೇದವನೋದಿ ಹಾರುವನಾದ. ಕರ್ಣದಲ್ಲಿ ಜನಿಸಿದವರುಂಟೆ ಜಗದೊಳಗೆ ? ಇದು ಕಾರಣ, ಕೂಡಲಸಂಗಮದೇವ, ಲಿಂಗಸ್ಥಲವನರಿದವನೇ ಕುಲಜನು! ೩೩೩. ಕೊಲುವವನೇ ಮಾದಿಗ! ಹೊಲಸ ತಿಂಬವನೇ ಹೊಲೆಯ! ಕುಲವೇನೋ ? ಆವದಿರ ಕುಲವೇನೋ ? ಸಕಲ ಜೀವಾ

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ಜರಿದ

ಬಸವಣ್ಣನ ವಚನಗಳು - 371 ರಿಂದ 380 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೭೧. ಜಂಬೂದ್ವೀಪನವಖಂಡಪೃಥ್ವಿಯೊಳಗೆ ಕೇಳಿರಯ್ಯ ಎರಡಾಳಿನ ಭಾಷೆಯ! ಕೊಲುವೆನೆಂಬ ಭಾಷೆ ದೇವನದು, ಗೆಲುವೆನೆಂಬ ಭಾಷೆ ಭಕ್ತನದು. ಸತ್ಯವೆಂಬ ಕೂರಲಗನೆ ಕಳೆದುಕೊಂಡು ಸದ್ಭಕ್ತರು ಗೆದ್ದರು ಕಾಣಾ ಕೂಡಲಸಂಗಮದೇವ. ೩೭೨. ಶಿವಭಕ್ತನಾಗಿ ತನ್ನ ಹಿಡಿದಹೆನೆಂದು ಹೋದರೆ ನುಗ್ಗುಮಾಡುವ, ನುಸಿಯ ಮಾಡುವ! ಮಣ್ಣುಮಾಡುವ, ಮಸಿಯ ಮಾಡುವ! ಕೂಡಲಸಂಗಮದೇವರ ನೆರೆನಂಬಿದನಾದರೆ ಕಡೆಗೆ ತನ್ನಂತೆ ಮಾಡುವ. ೩೭೩. ಅರೆವನಯ್ಯ ಸಣ್ಣವಹನ್ನಕ ಒರೆವನಯ್ಯ ಬಣ್ಣಗಾಬನ್ನಕ ಅರೆದರೆ ಸುಣ್ಣವಾಗಿ, ಒರೆದರೆ ಬಣ್ಣವಾದರೆ ಕೂಡಲಸಂಗಮದೇವನೊಲಿದು ಸಲಹುವನು. ೩೭೪. ಎಡದ ಪಾದದಲೊದ್ದರೆ ಬಲದ ಪಾದವ ಹಿಡಿವೆ! ಬಲದ ಪಾದದಲೊದ್ದರೆ ಎಡದ ಪಾದವ ಹಿಡಿವೆ! ತ್ರಾಹಿ, ತ್ರಾಹಿ! ತಪ್ಪೆನ್ನದು, ಕ್ಷಮೆ ನಿನ್ನದು! ಕೂಡಲಸಂಗಮದೇವ ನಿಮ್ಮ ಕರುಣದ ಕಂದ ನಾನು! ೩೭೫. ಅಂಜಿದರಾಗದು, ಅಳುಕಿದರಾಗದು! ವಜ್ರಪಂಜರದೊಳಗಿದ್ದರಾಗದು! ತಪ್ಪದೆಲವೋ ಲಲಾಟಲಿಖಿತ! ಕಕ್ಕುಲತೆಬಟ್ಟರಾಗದು ನೋಡಾ! ಧೃತಿಗೆಟ್ಟು ಮನ ಧಾತುಗೆಟ್ಟರೆ ಅಪ್ಪುದು ತಪ್ಪದು ಕೂಡಲಸಂಗಮದೇವ. ೩೭೬. ಆಯುಷ್ಯ ತೀರಿದಲ್ಲದೆ ಮರಣವಿಲ್ಲ. ಭಾಷೆ ತೀರಿದಲ