Skip to main content

ಬಸವಣ್ಣನ ವಚನಗಳು - 331 ರಿಂದ 340 ರವರೆಗೆ

Dear friends,
Daily I will post Basavannana Vachanagalu, Sarvagnana Vachanagalu, Akka Mahadevi Vachana
Allama Prabhudevara Vachanagalu.

Please follow my post and post your valuable comments.
 
೩೩೧.
ವ್ಯಾಸ ಬೋಯಿತಿಯ ಮಗ.
ಮಾರ್ಕಂಡೇಯ ಮಾತಂಗಿಯ ಮಗ.
ಮಂಡೋದರಿ ಕಪ್ಪೆಯ ಮಗಳು.
ಕುಲವನರಸದಿರಿ ಭೋ!
ಕುಲದಿಂದ ಮುನ್ನೇನಾದಿರಿ ಭೋ!
ಸಾಕ್ಷಾತ್ ಅಗಸ್ತ್ಯ ಕಬ್ಬಿಲ.
ದೂರ್ವಾಸ ಮಚ್ಚಿಗ.
ಕಶ್ಯಪ ಕಮ್ಮಾರ.
ಕೌಂಡಿನ್ಯನೆಂಬ ಋಷಿ
ಮೂರುಲೋಕವರಿಯೆ ನಾವಿದ ಕಾಣಿ ಭೋ!
ನಮ್ಮ ಕೂಡಲಸಂಗನ ವಚನವಿಂತೆಂದುದು-
"ಶ್ವಪಚೋಪಿಯಾದರೇನು ಶೀವಭಕ್ತನೇ ಕುಲಜಂ" ಭೋ!

೩೩೨.
ಹೊಲೆಗಂಡಲ್ಲದೆ ಪಿಂಡದ ನೆಲೆಗಾಶ್ರಯವಿಲ್ಲ.
ಜಲಬಿಂದುವಿನ ವ್ಯವಹಾರವೊಂದೇ.
ಆಶೆಯಾಮಿಷ ಹರ್ಷರೋಷ ವಿಷಯಾದಿಗಳೆಲ್ಲವೊಂದೇ.
ಏನನೋದಿ ಏನ ಕೇಳಿ ಏನು ಫಲ ?!
ಕುಲಜನೆಂಬುದಕ್ಕೆ ಆವುದು ದೃಷ್ಟ ?
"ಸಪ್ತಧಾತುಸಮಂ ಪಿಂಡಂ
ಸಮಯೋನಿಸಮುದ್ಭವಂ |
ಆತ್ಮಾಜೀವಸ್ಸಮಸ್ತಸ್ಮಾತ್
ವರ್ಣಾನಾಂ ಕಿಂ ಪ್ರಯೋಜನಂ ?" ||
ಕಾಸಿ ಕಮ್ಮಾರನಾದ, ಬೀಸಿ ಮಡಿವಾಳನಾದ,
ಹಾಸನಿಕ್ಕಿ ಸಾಲಿಗನಾದ, ವೇದವನೋದಿ ಹಾರುವನಾದ.
ಕರ್ಣದಲ್ಲಿ ಜನಿಸಿದವರುಂಟೆ ಜಗದೊಳಗೆ ?
ಇದು ಕಾರಣ, ಕೂಡಲಸಂಗಮದೇವ,
ಲಿಂಗಸ್ಥಲವನರಿದವನೇ ಕುಲಜನು!

೩೩೩.
ಕೊಲುವವನೇ ಮಾದಿಗ!
ಹೊಲಸ ತಿಂಬವನೇ ಹೊಲೆಯ!
ಕುಲವೇನೋ ? ಆವದಿರ ಕುಲವೇನೋ ?
ಸಕಲ ಜೀವಾತ್ಮರಿಗೆ ಲೇಸನೇ ಬಯಸುವ
ನಮ್ಮ ಕೂಡಲಸಂಗನ ಶರಣರೇ ಕುಲಜರು!

೩೩೪.
ಹೊನ್ನ ನೇಗಿಲಲುತ್ತು
ಎಕ್ಕೆಯ ಬೀಜವ ಬಿತ್ತುವರೆ ?
ಕರ್ಪೂರದ ಮರನ ಕಡಿದು
ಕಳ್ಳಿಗೆ ಬೇಲಿಯನಿಕ್ಕುವರೆ ?
ಶ್ರೀಗಂಧದ ಮರನ ಕಡಿದು
ಬೇವಿಂಗೆ ಅಡೆಯನಿಕ್ಕುವರೆ ?
ನಮ್ಮ ಕೂಡಲಸಂಗನ
ಶರಣರಿಗಲ್ಲದೆ ಬೇರೆ ಇಚ್ಛಾಭೋಜನವಿಕ್ಕಿದರೆ
ಕಿಚ್ಚಿನೊಳಗುಚ್ಚೆಯ ಹೊಯ್ದು
ಹವಿಯ ಬೇಳ್ದಂತಾಯಿತ್ತು.

೩೩೫.
ಕುರಿವಿಂಡು ಕಬ್ಬಿನ ಉಲಿವ ತೋಂಟವ ಹೊಕ್ಕು
ತೆರನನರಿಯದೇ ತನಿರಸದ,
ಹೊರಗಣೆಲೆಯನೇ ಮೇದುವು!
ನಿಮ್ಮನರಿವ ಮದಕರಿಯಲ್ಲದೆ
ಕುರಿಯೇನ ಬಲ್ಲುದೋ ಕೂಡಲಸಂಗಮದೇವ ?

೩೩೬.
ದೇವ, ನಿಮ್ಮ ಪೂಜಿಸಿ
ಚೆನ್ನನ ಕುಲ ಚೆನ್ನಾಯಿತ್ತು!
ದೇವ, ನಿಮ್ಮ ಪೂಜಿಸಿ
ದಾಸನ ಕುಲ ದೇಸಿವಡೆಯಿತ್ತು!
ದೇವ, ನಿಮ್ಮಡಿಗೆರಗಿ
ಮಡಿವಾಳ ಮಾಚಯ್ಯ ನಿಮ್ಮಡಿಯಾದ!
ನೀನೊಲಿದ ಕುಲಕ್ಕೆ
ನೀನೊಲಿದ ಹೊಲೆಗೆ ಮೇರೆಯುಂಟೇ, ದೇವ ?
ಶ್ವಪಚೋಪಿ ಮುನಿಶ್ರೇಷ್ಠಃ
ಯಸ್ತು ಲಿಂಗಾರ್ಚನೇ ರತಃ |
ಲಿಂಗಾರ್ಚನವಿಹೀನೋಪಿ
ಬ್ರಾಹ್ಮಣಃ ಶ್ವಪಚಾಧಮಃ ||
ಎಂದುದಾಗಿ ಜಾತಿ-ವಿಜಾತಿಯಾದರೇನು
ಅಜಾತಂಗೆ ಶರಣೆಂದೆನ್ನದವನು ?
ಆತನೇ ಹೊಲೆಯ ಕೂಡಲಸಂಗಮದೇವ.

೩೩೭.
ಭಕ್ತಿಹೀನನ ದಾಸೋಹವ
ಸದ್ಭಕ್ತರು ಸವಿಯರು!
ಬೇವಿನ ಹಣ್ಣು ಕಾಗೆಗೆ ಇನಿದಲ್ಲದೆ
ಕೋಗಿಲೆಗೆ ಮೆಲಲಾಗದು!
ಲಿಂಗಸಂಬಂಧವಿಲ್ಲದವರ ನುಡಿ
ಕೂಡಲಸಂಗನ ಶರಣರಿಗೆ ಸಮನಿಸದು.

೩೩೮.
ಬಂದು ಬಲ್ಲಹ ಬಿಡಲು
ಹೊಲಗೇರಿಯೆಂಬ ಹೆಸರೊಳವೇ ಅಯ್ಯ!
ಲಿಂಗವಿದ್ದವರ ಮನೆ
ಕೈಲಾಸವೆಂದು ನಂಬಬೇಕು!
ಇದಕ್ಕೆ ಪ್ರಮಾಣ:-
ಚಂಡಾಲವಾಟಿಕಾಯಾಂ ವಾ
ಶಿವಭಕ್ತಃಸ್ಸ್ಥಿತೋ ಯದಿ |
ತತ್ ಶ್ರೇಣಿಶ್ಯಿವಲೋಕಸ್ಯಾತ್
ತದ್ ಗೃಹಂ ಶಿವಮಂದಿರಂ ||
ಲೋಕದ ಡಂಭಕರ ಮಾತು ಬೇಡ.
ಕೂಡಲಸಂಗನಿದ್ದುದೇ ಕೈಲಾಸ!

೩೩೯.
ದೇವನೊಬ್ಬ ನಾಮ ಹಲವು.
ಪರಮ ಪತಿವ್ರತೆಗೆ ಗಂಡನೊಬ್ಬ.
ಮತ್ತೊಂದಕ್ಕೆರಗಿದರೆ
ಕಿವಿ ಮೂಗ ಕೊಯ್ವನು.
ಹಲವು ದೈವದ ಎಂಜಲ
ತಿಂಬವರನೇನೆಂಬೆ ಕೂಡಲಸಂಗಮದೇವ.

೩೪೦.
ಎಲವೋ! ಎಲವೋ!
ಪಾಪಕರ್ಮವ ಮಾಡಿದವನೇ
ಎಲವೊ! ಎಲವೊ!
ಬ್ರಹ್ಮೇತಿಯ ಮಾಡಿದವನೇ
ಒಮ್ಮೆ ಶರಣೆನ್ನೆಲವೋ!
ಒಮ್ಮೆ ಶರಣೆಂದರೆ
ಪಾಪಕರ್ಮ ಓಡುವವು.
ಸರ್ವಪ್ರಾಯಶ್ಚಿತ್ತಕ್ಕೆ
ಹೊನ್ನಪರ್ವತಂಗಳೆಯ್ದವು!
ಓರ್ವಂಗೆ ಶರಣೆನ್ನು ನಮ್ಮ ಕೂಡಲಸಂಗಮದೇವಂಗೆ!

Comments

Popular posts from this blog

ಸರ್ವಜ್ಞನ ವಚನಗಳು - 91 ರಿಂದ 100

ಸರ್ವಜ್ಞನ ವಚನಗಳು -  91 ರಿಂದ 100 ೯೧. ಹುಟ್ಟಿಸುವನಜನೆಂಬ, ಕಷ್ಟದಾ ನುಡಿಬೇಡ ಹುಟ್ಟಿಪನು ತನ್ನ ಶಿರಹರಿಯೆ ಮತ್ತೊಂದು ಹುಟ್ಟಿಸನದೇಕೆ ಸರ್ವಜ್ಞ ೯೨. ಹತ್ತು ಭವವನು ಎತ್ತಿ, ಎತ್ತು ಎಮ್ಮೆಯ ಕಾದು ಮತ್ತೆ ಪಾಂಡವರಿಗಾಳಾದ ಹರಿಯು ತಾ ನೆತ್ತಣಾ ದೈವ ಸರ್ವಜ್ಞ ೯೩. ನರಸಿಂಹನವತಾರ ಹಿರಿದಾದ ಅದ್ಭುತವು ಶರಭನು ಗುರಿಂದ ಕೊಲುವಾಗ ನರಿಯಂದವಾದ ಸರ್ವಜ್ಞ ೯೪. ಪಾಲಿಸುವ ಹರಿಯು ತಾ, ಸೋಲನೆಂದೆನಬೇಡ ಶೂಲಿ ತ ಮಗನ ತಲೆ ಚಿಗುಟಿ ಹರಿ ಏಕೆ ಪಾಲಿಸದೆ ಹೋದ ಸರ್ವಜ್ಞ ೯೫. ಹರನವನ ಕೊಲುವಂದು, ಎರಳೆಯನು ಎಸೆವಂದು ಮರಳಿ ವರಗಳನು ಕೊಡುವಂದು ಪುರಹರಗೆ ಸರಿಯಾದ ಕಾಣೆ ಸರ್ವಜ್ಞ ೯೬. ಹರಿ ಬೊಮ್ಮನೆಂಬವರು, ಹರನಿಂದಲಾದವರು ಅರಸಿಗೆ ಆಳು ಸರಿಯಹನೆ ಶಿವನಿಂದ ಮೆರೆವರಿನ್ನಾರು ಸರ್ವಜ್ಞ ೯೭. ಹರಿದಲೆಯ ಬೊಮ್ಮಂಗೆ, ಕುರಿದಲೆಯ ದಕ್ಷಂಗೆ ನೆರೆಹತ್ತು ಜನನವಾಹರಿಗೆ ಇವರುಗಳು ಸರಿಯಹರೆ ಸರ್ವಜ್ಞ ೯೮. ಧರೆಯ ತೇರನು ಮಾಡಿ, ಅಜನ ಸಾರಥಿ ಮಾಡಿ ಹರಿಯ ಶರವಮಾಡಿ ತ್ರಿಪುರವನು ಆಳಿದಂತೆ ಸರಿಯಾರು ಹೇಳಿ ಸರ್ವಜ್ಞ ೯೯. ಇಂದ್ರನಾನೆಯನೇರಿ ಒಂದನೂ ಕೊಡಲರಿಯ ಚ್ಂದ್ರಶೇಖರನು ಮುದಿಯೆತ್ತನೇರಿ ಬೇಕೆಂದುದನು ಕೊಡುವ ಸರ್ವಜ್ಞ ೧೦೦. ಉಂಬಳಿಯ ಇದ್ದವರ, ಕಂಬಳಿಯ ಹೊದೆಯುವರೆ ಶಂಭುವಿದ್ದಂತೆ ಮತ್ತೊಂದು ದೈವವನು ನಂಬುವನೆ ಹೆಡ್ಡ ಸರ್ವಜ್ಞ

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ...