Daily I will post Basavannana Vachanagalu, Sarvagnana Vachanagalu, Akka Mahadevi Vachana
Allama Prabhudevara Vachanagalu.
೪೩೧.
ಶಿವಾಚಾರವೆಂಬುದೊಂದು ಬಾಳ ಬಾಯಿಧಾರೆ
ಲಿಂಗ ಮೆಚ್ಚಬೇಕು; ಜಂಗಮ ಮೆಚ್ಚಬೇಕು
ಪ್ರಸಾದ ಮೆಚ್ಚಿ ತನ್ನಲ್ಲಿ ಸ್ವಾಯತವಾಗಿರಬೇಕು.
ಬಿಚ್ಚಿ ಬೇರಾದರೆ ಮೆಚ್ಚ ನಮ್ಮ ಕೂಡಲಸಂಗಮದೇವ.
೪೩೨.
ಆವಾವ ಭಾವದಲ್ಲಿ ಶಿವನ ನಂಬಿದ ಶರಣರು
ಎಂತಿದ್ದರೇನಯ್ಯ ?
ಆವಾವ ಭಾವದಲ್ಲಿ ಶಿವನ ನಂಬಿದ ಮಹಿಮರು
ಎಂತಿದ್ದರೇನಯ್ಯ ?
ಸುಚರಿತ್ರರೆಂತಿದ್ದರೇನಯ್ಯ ?
ಅವಲೋಹವ ಕಳೆವ
ಪರುಷವೆಂತಿದ್ದರೇನಯ್ಯ ?
ಕೂಡಲಸಂಗನ ಶರಣರು ರಸದ ವಾರಿಧಿಗಳು
ಎಂತಿದ್ದರೇನಯ್ಯ ?
೪೩೩.
ನಡೆ ಚೆನ್ನ, ನುಡಿ ಚೆನ್ನ, ಎಲ್ಲಿ ನೋಡಿದರಲ್ಲಿ ಚೆನ್ನ!
ಪ್ರಮಥರೊಳಗೆ ಚೆನ್ನ, ಪುರಾತರೊಳಗೆ ಚೆನ್ನ!
ಪ್ರಸಾದಿಗಳೊಳಗೆ ಚೆನ್ನ!
ಸವಿದು ನೋಡಿ ಅಂಬಲಿ ರುಚಿಯಾಯಿತ್ತೆಂದು
ಕೂಡಲಸಂಗಮದೇವರಿಗೆ ಬೇಕಾಯಿತ್ತೆಂದು
ಕೈದೆಗೆದ ನಮ್ಮ ಚೆನ್ನ!
೪೩೪.
ಲಿಂಗವಿಕಾರಿಗೆ ಅಂಗವಿಕಾರವೆಂಬುದಿಲ್ಲ.
ಜಂಗಮವಿಕಾರಿಗೆ ಧನವಿಕಾರವೆಂಬುದಿಲ್ಲ.
ಪ್ರಸಾದವಿಕಾರಿಗೆ ಮನವಿಕಾರವೆಂಬುದಿಲ್ಲ.
ಇಂತೀ ತ್ರಿವಿಧಗುಣವನರಿದಾತನು
ಅಚ್ಚಲಿಂಗೈಕ್ಯನು ಕೂಡಲಸಂಗಮದೇವ.
೪೩೫.
ಪ್ರಾಣಲಿಂಗಪ್ರತಿಗ್ರಾಹಕನಾದ ಬಳಿಕ
ಲಿಂಗವಿರಹಿತವಾಗಿ ನಡೆವ ಪರಿಯೆಂತೊ ?
ಲಿಂಗವಿರಹಿತವಾಗಿ ನುಡಿವ ಪರಿಯೆಂತೊ ?
ಪಂಚೇಂದ್ರಿಯಸುಖವನು
ಲಿಂಗವಿರಹಿತವಾಗಿ ಭುಂಜಿಸಲಾಗದು!
"ಲಿಂಗವಿರಹಿತವಾಗಿ ಉಗುಳ ನುಂಗಲಾಗದು!"
ಇಂತೆಂದುದು ಕೂಡಲಸಂಗನ ವಚನ.
೪೩೬.
ಹತ್ತು ಸಾವಿರ ಗೀತವ ಹಾಡಿ ಅರ್ಥವಿಟ್ಟಲ್ಲಿ ಫಲವೇನು
ಮುಟ್ಟುವ ತೆರನನರಿಯದನ್ನಕ ?
ಕಟ್ಟಿದರೇನು ಬಿಟ್ಟರೇನು
ಮನವು ಲಿಂಗದಲ್ಲಿ ಮುಟ್ಟದನ್ನಕ ?
ಮಾತಿನಲೆ ಒಲಿಸಿ ಮಹತ್ತಪ್ಪ ಲಿಂಗವ ಕಂಡೆನೆಂಬ
ಪಾತಕರ ಮೆಚ್ಚ ನಮ್ಮ ಕೂಡಲಸಂಗಮದೇವ
೪೩೭.
ಶ್ವಾನಜ್ಞಾನ, ಗಜಜ್ಞಾನ, ಕುಕ್ಕುಟಜ್ಞಾನವೆಂಬ
ಜ್ಞಾನತ್ರಯಂಗಳೇಕಾದವು ?!
ಕೂಡಲಸಂಗಮದೇವ,
ನಿಮ್ಮನರಿಯದ ಜ್ಞಾನವೆಲ್ಲ ಅಜ್ಞಾನ!
೪೩೮.
ಕಬ್ಬುನ ಪರುಷವೇದಿಯಾದರೇನು ?!
ಕಬ್ಬುನ ಹೊನ್ನಾಗದೊಡೆ ಪರುಷವದೇಕೋ ?
ಮನೆಯೊಳಗೆ ಕತ್ತಲೆ ಹರಿಯದೊಡೆ
ಆ ಜ್ಯೋತಿಯದೇಕೋ ?
ಕೂಡಲಸಂಗಮದೇವರ ಮನಮುಟ್ಟಿ ಪೂಜಿಸಿ
ಕರ್ಮ ಹರಿಯದೊಡೆ ಆ ಪೂಜೆಯದೇಕೋ ?
೪೩೯.
ಅಹಂಕಾರ ಮನವನಿಂಬುಗೊಂಡಲ್ಲಿ
ಲಿಂಗ ತಾನೆಲ್ಲಿಪ್ಪುದೋ ?
ಅಹಂಕಾರಕ್ಕೆ ಎಡೆಗುಡದೆ
ಲಿಂಗತನುವಾಗಿರಬೇಕು!
ಅಹಂಕಾರರಹಿತನಾದಲ್ಲಿ
ಸನ್ನಿಹಿತ ಕಾಣಾ ಕೂಡಲಸಂಗಮದೇವ.
೪೪೦.
ನುಡಿದರೆ ಮುತ್ತಿನ ಹಾರದಂತಿರಬೇಕು!
ನುಡಿದರೆ ಮಾಣಿಕ್ಯದ ದೀಪ್ತಿಯಂತಿರಬೇಕು!
ನುಡಿದರೆ ಸ್ಫಟಿಕದ ಶಲಾಕೆಯಂತಿರಬೇಕು!
ನುಡಿದರೆ ಲಿಂಗ ಮೆಚ್ಚಿ ಅಹುದೆನಬೇಕು ?
ನುಡಿಯೊಳಗಾಗಿ ನಡೆಯದಿದ್ದರೆ
ಕೂಡಲಸಂಗಮದೇವನೆಂತೊಲಿವನಯ್ಯ ?
Comments
Post a Comment