Dear friends,
Daily I will post Basavannana Vachanagalu, Sarvagnana Vachanagalu, Akka Mahadevi Vachana
Allama Prabhudevara Vachanagalu.
೪೭೧.
ಲಗ್ನವೆಲ್ಲಿಯದೋ
ವಿಘ್ನವೆಲ್ಲಿಯದೋ ಸಂಗಯ್ಯ ?
ದೋಷವೆಲ್ಲಿಯದೋ
ದುರಿತವೆಲ್ಲಿಯದೋ ಸಂಗಯ್ಯ ?
ನಿಮ್ಮ ಮಾಣದೆ ನೆನೆವಂಗೆ
ಭವಕರ್ಮವೆಲ್ಲಿಯದೋ ಕೂಡಲಸಂಗಯ್ಯ!
೪೭೨.
ಶರಣ ನಿದ್ರೆಗೈದರೆ ಜಪ ಕಾಣಿರೋ!
ಶರಣನೆದ್ದು ಕುಳಿತರೆ ಶಿವರಾತ್ರಿ ಕಾಣಿರೋ!
ಶರಣ ನಡೆದುದೇ ಪಾವನ ಕಾಣಿರೋ!
ಶರಣ ನುಡಿದುದೇ ಶಿವತತ್ವಕಾಣಿರೋ
ಕೂಡಲಸಂಗನ ಶರಣನ ಕಾಯವೇ
ಕೈಲಾಸ ಕಾಣಿರೋ!
೪೭೩.
ಸಮುದ್ರ ಘನವೆಂಬೆನೆ ?
ಧರೆಯ ಮೇಲಡಗಿತ್ತು!
ಧರೆ ಘನವೆಂಬೆನೆ ?
ನಾಗೇಂದ್ರನ ಫಣಾಮಣಿಯ ಮೇಲಡಗಿತ್ತು!
ನಾಗೇಂದ್ರ ಘನವೆಂಬೆನೆ ?
ಪಾರ್ವತಿಯ ಕಿರುಗುಣಿಕೆಯ ಮುದ್ರಿಕೆಯಾಯಿತ್ತು!
ಅಂಥ ಪಾರ್ವತಿ ಘನವೆಂಬೆನೆ ?
ಪರಮೇಶ್ವರನ ಅರ್ಧಾಂಗಿಯಾದಳು!
ಅಂಥ ಪರಮೇಶ್ವರ ಘನವೆಂಬೆನೆ ?
ನಮ್ಮ ಕೂಡಲಸಂಗನ ಶರಣರ
ಮನದ ಕೊನೆಯ ಮೊನೆಯ ಮೇಲಡಗಿದನು!
೪೭೪.
ನೆಲನೊಂದೇ ಹೊಲೆಗೇರಿ, ಶಿವಾಲಯಕ್ಕೆ!
ಜಲವೊಂದೇ ಶೌಚಾಚಮನಕ್ಕೆ!
ಕುಲವೊಂದೇ ತನ್ನ ತಾನರಿದವಂಗೆ!
ಫಲವೊಂದೇ ಷಡುದರ್ಶನ ಮುಕ್ತಿಗೆ!
ನಿಲವೊಂದೇ, ಕೂಡಲಸಂಗಮದೇವ,
ನಿಮ್ಮನರಿದವಂಗೆ.
೪೭೫.
ಅಯ್ಯಾ, ಸಜ್ಜನ ಸದ್ಭಕ್ತರ ಸಂಗದಿಂದ
ಮಹಾನುಭಾವರ ಕಾಣಬಹುದು!
ಮಹಾನುಭಾವರ ಸಂಗದಿಂದ
ಶ್ರಿಗುರುವನರಿಯಬಹುದು!
ಲಿಂಗವನರಿಯಬಹುದು ಜಂಗಮವನರಿಯಬಹುದು!
ಪ್ರಸಾದವನರಿಯಬಹುದು! ತನ್ನ ತಾನರಿಯಬಹುದು!!
ಇದು ಕಾರಣ ಸದ್ಭಕ್ತರ ಸಂಗವ ಕರುಣಿಸು
ಕೂಡಲಸಂಗಮದೇವಾ ನಿಮ್ಮ ಧರ್ಮ!
೪೭೬.
ಕುಂಡಲಿಗನೊಂದು ಕೀಡೆಯ ತಂದು
ತನ್ನಂತೆ ಮಾಡಿತಲ್ಲ!
ಎಲೆ ಮಾನವಾ, ಕೇಳಿ ನಂಬಯ್ಯ!
ನೋಡಿ ನಂಬಯ್ಯ, ಎಲೆ ಮಾನವ!
"ತ್ವಚ್ಚಿಂತಯಾ ಮಹಾದೇವ!
ತ್ವಮೇವಾಸ್ಮಿ ನ ಸಂಶಯಃ!
ಭ್ರಮದ್ ಭ್ರಮರಚಿಂತಾಯಾಂ
ಕೀಟೋಪಿ ಭ್ರಮರಾಯತೇ"!!
ಕೂಡಲಸಂಗನ ಶರಣರ ಅನುಭಾವ
ಇದರಿಂದ ಕಿರುಕುಳವೆ ಎಲೆ ಮಾನವಾ ?!
೪೭೭.
ಮರಮರನ ಮಥನದಿಂದಗ್ನಿ ಹುಟ್ಟಿ,
ಆ ಮರನೆಲ್ಲವ ಸುಡದಿಪ್ಪುದೆ ?
ಮಹಾನುಭಾವರ ಸಂಗದಿಂದ ಜ್ಞಾನಾಗ್ನಿ ಹುಟ್ಟಿ
ಎನ್ನ ತನುಗುಣವೆಲ್ಲವ ಸುಡದಿಪ್ಪುದೆ ?
ಇದು ಕಾರಣ,
ಮಹಾನುಭಾವರ ತೋರಿಸು
ಕೂಡಲಸಂಗಮದೇವ.
೪೭೮.
ಅರಿದುದ ಅರಿಯಲೊಲ್ಲದು! ಅದೆಂತಯ್ಯ ?
ಮರೆದುದ ಮರೆಯಲೊಲ್ಲದು! ಅದೆಂತಯ್ಯ
ಅರಿದು ಮರೆದ ಮನವ
ಕೂಡಲಸಂಗಯ್ಯ ತಾನೇ ಬಲ್ಲ.
೪೭೯.
ಮೀಸಲು ಬೀಸರವೋದ ಪರಿಯ ನೋಡಾ!
ಕಾಲು ತಾಗಿದ ಅಗ್ಛವಣಿ,
ಕೈ ಮುಟ್ಟಿದರ್ಪಿತ
ಮನ ಮುಟ್ಟಿದಾರೋಗಣೆಯನೆಂತು ಘನವೆಂಬೆನಯ್ಯ !?
ಬಂದ ಪರಿಯಲಿ ಪರಿಣಾಮಿಸಿ
ನಿಂದ ಪರಿಯಲ್ಲಿ ನಿಜಮಾಡಿ
ಆನೆಂದ ಪರಿಯಲ್ಲಿ ಕೈಕೋ
ಕೂಡಲಸಂಗಮದೇವ!
೪೮೦.
ಹಾಲೆಂಜಲು ವತ್ಸನ!
ಉದಕವೆಂಜಲು ಮತ್ಸ್ಯದ!
ಪುಷ್ಪವೆಂಜಲು ತುಂಬಿಯ!
ಎಂತು ಪೂಜಿಸುವೆನಯ್ಯ!
ಶಿವಶಿವಾ! ಎಂತು ಪೂಜಿಸುವೆ ?
ಈ ಎಂಜಲವನತಿಗಳೆವರೆ ಎನ್ನಳವಲ್ಲ.
ಬಂದುದ ಕೈಕೋ ಕೂಡಲಸಂಗಮದೇವ.
Comments
Post a Comment