Skip to main content

ಬಸವಣ್ಣನ ವಚನಗಳು - 21 ರಿಂದ 30 ರವರೆಗೆ

ಬಸವಣ್ಣನ ವಚನಗಳು - 21 ರಿಂದ 30 ರವರೆಗೆ
೨೧.
ಅಂದಣವನೇರಿದ ಸೊಣಗನಂತೆ
ಕಂಡರೆ ಬಿಡದು ತನ್ನ ಮುನ್ನಿನ ಸ್ವಭಾವವನು
ಸುಡು, ಸುಡು; ಮನವಿದು ವಿಷಯಕ್ಕೆ ಹರಿವುದು,
ಮೃಡ, ನಿಮ್ಮನನುದಿನ ನೆನೆಯಲೀಯದು.
ಎನ್ನೊಡೆಯನೇ, ಕೂಡಲಸಂಗಮದೇವ,
ನಿಮ್ಮ ಚರಣವ ನೆನೆವಂತೆ ಕರುಣಿಸು,
ಸೆರಗೊಡ್ಡಿ ಬೇಡುವೆ ನಿಮ್ಮ ಧರ್ಮ.
೨೨.
ತುಪ್ಪದ ಸವಿಗೆ ಅಲಗ ನೆಕ್ಕುವ
ಸೊಣಗನಂತೆನ್ನ ಬಾಳುವೆ
ಸಂಸಾರಸಂಗವ ಬಿಡದು ನೋಡೆನ್ನ ಮನವು.
ಈ ನಾಯಿತನವ ಮಾಣಿಸು
ಕೂಡಲಸಂಗಮದೇವಯ್ಯ ನಿಮ್ಮ ಧರ್ಮ.
೨೩.
ಒಂದು ಮೊಲಕ್ಕೆ ನಾಯನೊಂಬತ್ತ ಬಿಟ್ಟಂತೆ
ಎನ್ನ ಬಿಡು, ತನ್ನ ಬಿಡೆಂಬುದು ಕಾಯವಿಕಾರ;
ಎನ್ನ ಬಿಡು, ತನ್ನ ಬಿಡೆಂಬುದು ಮನೋವಿಕಾರ.
ಕರಣೇಂದ್ರಿಯಗಳೆಂಬ ಸೊಣಗ ಮುಟ್ಟದ ಮುನ್ನ
ಮನ ನಿಮ್ಮನೆಯ್ದುಗೆ ಕೂಡಲಸಂಗಮದೇವ.
೨೪.
ತನ್ನ ವಿಚಾರಿಸಲೊಲ್ಲದು
ಇದಿರ ವಿಚಾರಿಸ ಹೋಹುದೀ ಮನವು.
ಏನು ಮಾಡುವೆನೀ ಮನವನು:
ಎಂತು ಮಾಡುವೆನೀ ಮನವನು-
ಕೂಡಲಸಂಗನ ಶರಣರ ನಚ್ಚದ ಮೆಚ್ಚದ ಬೆಂದ ಮನವನು ?
೨೫.
ತನ್ನಿಚ್ಛೆಯ ನುಡಿದರೆ ಮೆಚ್ಚುವುದೀ ಮನವು.
ಇದಿರಿಚ್ಛೆಯ ನುಡಿದರೆ ಮೆಚ್ಚದೀ ಮನವು
ಕೂಡಲಸಂಗನ ಶರಣರ ನಚ್ಚದ ಮೆಚ್ಚದ ಮನವನು
ಕಿಚ್ಚಿನೊಳಿಕ್ಕುವೆನು.
೨೬.
ಸುಡಲೀ ಮನವೆನ್ನ (ಮುಡುಬನ) ಮಾಡಿತ್ತು ನಡೆವಲ್ಲಿ;
ನುಡಿವಲ್ಲಿ ಅಧಿಕನೆಂದೆನಿಸಿತ್ತು.
ಬೆಡಗಿನ ಕೀಲು ಕಳೆದು, ಕೆಡೆದ ಬಳಿಕ,
ಕಡುಗೂಪ ಮಡದಿ ತಾ ಮುಟ್ಟಲಮ್ಮಳು;
ಒಡಲನುರಿಗೊಂಬುದು: ಒಡವೆಯನರಸು ಕೊಂಬ;
ಕಡುಗೂಪ ಮಡದಿಯ ಮತ್ತೊಬ್ಬ ಚೆನ್ನಿಗ ಕೊಂಬ.
ಮುನ್ನ ಮಾಡಿದ ಪಾಪ ತನ್ನ ಬೆನ್ನ ಬಿಡದನ್ನಕ
ಇನ್ನು ಬಯಸಿದರೊಳವೆ ಕೂಡಲಸಂಗಮದೇವ ?
೨೭.
ವಚನದ ಹುಸಿ-ನುಸುಳೆಂತು ಮಾಬುದೆನ್ನ ?
ಮನದ ಮರ್ಕಟತನವೆಂತು ಮಾಬುದೆನ್ನ ?
ಹೃದಯದ ಕಲ್ಮಷವೆಂತು ಮಾಬುದೆನ್ನ ?
ಕಾಯವಿಕಾರಕ್ಕೆ ತರಿಸಲುವೋದೆನು!
ಎನಗಿದು ವಿಧಿಯೇ, ಕೂಡಲಸಂಗಮದೇವ ?
೨೮.
ಮುನಿದೆಯಾದರೆ ಒಮ್ಮೆ ಜರಿದರೆ ಸಾಲದೆ ?
ಅಕಟಕಟ, ಮದನಂಗೆ ಮಾರುಗೊಡುವರೆ ?
ಹಗೆಗೆ ಮಾರುಗೊಟ್ಟು ನಿನ್ನವರನೊಪ್ಪಿಸುವರೆ ?
ಕೂಡಲಸಂಗಮದೇವ ?
೨೯.
ವಿಕಳನಾದೆನು ಪಂಚೇಂದ್ರಿಯಧಾತುವಿಂದ!
ಮತಿಗೆಟ್ಟನು ಮನದ ವಿಕಾರದಿಂದ!
ಧೃತಿಗೆಟ್ಟೆನು ಕಾಯವಿಕಾರದಿಂದ!
ಶರಣುವೊಕ್ಕೆನು ಕೂಡಲಸಂಗಮದೇವಯ್ಯ
ಎನ್ನುವನು ಕಾಯಯ್ಯ.
೩೦.
ಕಾಯವಿಕಾರ ಕಾಡಿಹುದಯ್ಯ!
ಮನೋವಿಕಾರ ಕೂಡಿಹುದಯ್ಯ!
ಇಂದ್ರಿಯವಿಕಾರ ಸುಳಿದಿಹುದಯ್ಯ!
ಆ ಸುಳುಹಿನೊಳಗೆ ಸುಳಿವುತ್ತಲಿದ್ದೇನೆ-ಸಿಲುಕಿಸದಿರಯ್ಯ!
ಅನ್ಯಚಿತ್ತವಿರಿಸದಿರಯ್ಯ, ನಿಮ್ಮ ಚಿತ್ತವಿರಿಸಯ್ಯ!
ಅನುಪಮಸುಖ ಸಾರಾಯ ಶರಣರಲ್ಲಿ,
ಕೂಡಲಸಂಗಮದೇವ, ನಿಮ್ಮಲ್ಲಿ ಇದೇ ವರವ ಬೇಡುವೆನಯ್ಯ ?

Comments

Popular posts from this blog

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ...

ಸರ್ವಜ್ಞನ ವಚನಗಳು - 1 ರಿಂದ 10

ಸರ್ವಜ್ಞನ ವಚನಗಳು -  1 ರಿಂದ 20 ೧. ನಂದಿಯನು ಏರಿದನ ಚಂದಿರನ ಮುಡಿದವನ ಕಂದನಂ ಬೇಡಿ ನೆನೆವುತ್ತ ಮುಂದೆ ಹೇಳುವೆನು ಸರ್ವಜ್ಞ ೨. ಮುನ್ನ ಕಾಲದಲಿ ಪನ್ನಗಧರನಾಳು ಎನ್ನೆಯ ಪೆಸರು, ಪುಷ್ಪದತ್ತನು ಎಂದು ಮನಿಪರು ದಯದಿ ಸರ್ವಜ್ಞ ೩. ಅಂದಿನ ಪುಷ್ಪದತ್ತ ಬಂದ ವರರುಚಿಯಾಗಿ ಮುದವ ಸಾರೆ, ಸರ್ವಜ್ಞನೆಂದೆನಿಸಿ ನಿಂದವನು ನಾನೆ ಸರ್ವಜ್ಞ ೪. ಸಣ್ಣನೆಯ ಮಳಲೊಳಗೆ ನುಣ್ಣನೆಯ ಶಿಲೆಯೊಳಗೆ ಬಣ್ಣೆಸಿಬರೆದ ಪಟದೊಳಗೆಯಿರುವಾತ ತಣ್ಣೊಳಗೆ ಇರನೇ ಸರ್ವಜ್ಞ ೫. ಹೊಲಸು ಮಾಂಸದ ಹುತ್ತ ಎಲುವಿನಾ ಹಂದರವು ಹೊಲೆಬಲಿದ ತನುವಿನೊಳಗಿರ್ದುಮದರೊಳಗೆ ಕುಲವನರಸುವರೆ ಸರ್ವಜ್ಞ ೬. ಎಲುವಿನೀ ಕಾಯಕ್ಕೆ ಸಲೆ ಚರ್ಮದ ಹೊದಿಕೆ ಮಲ ಮೂತ್ರ ಕ್ರಿಮಿಗಳೊಳಗಿರ್ದ ದೇಹಕ್ಕೆ ಕುಲವಾವುದಯ್ಯ ಸರ್ವಜ್ಞ ೭. ಸರ್ವಜ್ಞನೆಂಬುವನು ಗರ್ವದಿಂದಾದವನೆ ? ಸರ್ವರೊಳಗೊಂದು ನುಡಿಗಲಿತು ವಿದ್ಯೆಯ ಪರ್ವತವೇ ಆದ ಸರ್ವಜ್ಞ ೮. ಗುರುವಿನಾ ವಿಸ್ತರದ, ಪರಿಯನಾನೇನೆಂಬೆ ಮೆರೆವ ಬ್ರಹ್ಮಾಂಡದೊಳಹೊರಗೆ ಅವ ಬೆಳಗಿ ಪರಿಪೂರ್ಣನಿರ್ಪ ಸರ್ವಜ್ಞ ೯. ಊರಿಂಗೆ ದಾರಿಯನು ಆರು ತೋರಿದರೇನು? ಸಾರಾಯದಾ ನಿಜವ ತೋರುವ ಗುರುವು ತಾ ನಾರಾದರೇನು? ಸರ್ವಜ್ಞ ೧೦. ಪರತತ್ವ ತನ್ನೊಳಗೆ ಎರವಿಲ್ಲದಿರುತಿರ್ದು ಪರದೇಶಿಯಂತೆ ಇರುತಿರ್ಪಯೋಗಿಯನು ಪರಮಗುರುವೆಂಬೆ ಸರ್ವಜ್ಞ

ಅಕ್ಕನ ವಚನಗಳು - 301 ರಿಂದ 310 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೦೧. ಕಾಮನ ತಲೆಯ ಕೊರೆದು, ಕಾಲನ ಕಣ್ಣ ಕಳೆದು ಸೋಮಸೂರ್ಯರ ಹರಿದು ಹುಡಿಮಾಡಿ ತಿಂಬವಳಿಂಗೆ ನಾಮವನಿಡಬಲ್ಲವರಾರು ಹೇಳಿರೆ! ನೀ ಮದುವಳಿಗನಾಗಿ ನಾ ಮದುವಳಿಗಿತಿಯಾಗಿ ಯವನ(=ಆನಲನ?) ಕೂಡುವ ಮರುತನಂತೆ (?) ನೋಡಾ, ಶ್ರೀಗಿರಿ ಚೆನ್ನಮಲ್ಲಿಕಾರ್ಜುನ ೩೦೨. ಬಸವನ ಭಕ್ತಿ ಕೊಟ್ಟಣದ ಮನೆ ಸಿರಿಯಾಳನ ಭಕ್ತಿ ಕಸಬಗೇರಿ ಸಿಂಧುಬಲ್ಲಾಳನ ಭಕ್ತಿ ಪರದಾರದ್ರೋಹ ಉಳಿದಾದ[+ಟ}ಮಟ ಉದಾಸೀನ ದಾಸೋಹ ಮಾಡುವವರ ದೈನ್ಯವೆಂಬ ಭೂತ ಸೋಂಕಿತು ಮಣ್ಣಿನ ಮನೆಯ ಕಟ್ಟಿ ಮಾಯಾಮೋಹಿನಿಯೆಂಬ ಮಹೇಂದ್ರಜಾಲದೊಳಗಾಗಿ ಮಾಡುವ ಮಾಟ ಭಕ್ತನಲ್ಲಿ ಉಂಡು ಉದ್ದಂಡ ವೃತ್ತಿಯಲ್ಲಿ ನಡೆದವರು ಶಿವನಲ್ಲ ಇವರು ದೇವಲೋಕ ಮರ್ತ್ಯಲೋಕಕ್ಕೆ ಹೊರಗು ಶ್ರೀಗಿರಿ ಚೆನ್ನಮಲ್ಲಿಕಾರ್ಜುನ, ನನ್ನ ಭಕ್ತಿ ನಿನ್ನೊಳಗೈಕ್ಯವಾಯಿತಾಗಿ ನಿರ್ವಯಲಾದೆ ಕಾಣಾ! ೩೦೩. ಅನ್ನವ ನೀಡುವವರಿಗೆ ಧಾನ್ಯವೆ [ಶಿವ]ಲೋಕ ಅರ್ಥವ ಕೊಡುವವರಿಂಗೆ ಪಾಷಾಣವೆ [ಶಿವ]ಲೋಕ ಹೆಣ್ಣು-ಹೊನ್ನು-ಮಣ್ಣು ಮೂರನೂ ಕಣ್ಣಿನಲ್ಲಿ ನೋಡಿ, ಕಿವಿಯಲಿ ಕೇಳಿ ಕೈ[ಯಲಿ] ಮುಟ್ಟಿ ಮಾಡುವ ಭಕ್ತಿ ಸಣ್ಣವರ ಸಮಾರಾಧನೆಯಾಯಿತು ತನ್ನನಿತ್ತು ತುಷ್ಟಿವಡೆವರನೆನಗೆ ತ...