Skip to main content

ಬಸವಣ್ಣನ ವಚನಗಳು - 91 ರಿಂದ 100 ರವರೆಗೆ

ಬಸವಣ್ಣನ ವಚನಗಳು - 91 ರಿಂದ 100 ರವರೆಗೆ

೯೧.
ಪರಷ ಮುಟ್ಟಿದ ಬಳಿಕ ಕಬ್ಬುನವಾಗದು ನೋಡಾ!
ಲಿಂಗ(ವ) ಮುಟ್ಟಿದ ಬಳಿಕ
ಕುಚಿತ್ತಾಚಾರವಾಗದು ನೋಡಾ
ಕೂಡಲಸಂಗನ ಶರಣರು ಅನ್ಯವನರಿಯರಾಗಿ.
೯೨.
ದೇವಲೋಕ ಮರ್ತ್ಯಲೋಕವೆಂಬುದು
ಬೇರೆ ಮತ್ತುಂಟೆ ? ಇಹಲೋಕದೊಳಗೇ ಮತ್ತನಂತಲೋಕ!
ಶಿವಲೋಕ ಶಿವಾಚಾರವಯ್ಯ,
ಶಿವಭಕ್ತನಿದ್ದ ಠಾವೇ ದೇವಲೋಕ,
ಭಕ್ತನಂಗಳವೇ ವಾರಣಾಸಿ,
ಶಿವಭಕ್ತನ ಕಾಯವೇ ಕೈಲಾಸ, ಇದು ಸತ್ಯ ಕೂಡಲಸಂಗಮದೇವ.
೯೩.
ಕಟ್ಟಿದಿರಲ್ಲಿ ಶಿವಭಕ್ತನ ಕಂಡು,
ದೃಷ್ಟಿಯಾರೆ ಮನಮುಟ್ಟಿ ನೋಡಿ ಶರಣೆಂದರೆ
ಹುಟ್ಟೇಳು ಜನ್ಮದ ಪಾಪ ಬಿಟ್ಟು ಹೋಹವು ನೋಡಾ!
ಮುಟ್ಟಿ ಚರಣಕ್ಕೆರಗಿದರೆ,
ತನು ಒಪ್ಪಿದಂತಿಹುದು
ಪರುಷ ಮುಟ್ಟಿದಂತೆ.
ಕರ್ತೃ ಕೂಡಲಸಂಗನ ಶರಣರ ಸಂಗವು!
ಮತ್ತೆ ಭವಮಾಲೆಯ ಹೊದ್ದಲೀಯದು ನೋಡಾ!
೯೪.
ಆರಾರ ಸಂಗವೇನೇನ ಮಾಡದಯ್ಯ!
ಕೀಡೆ ಕುಂಡಲಿಗನಾಗದೇನಯ್ಯ ?
ಚಂದನದ ಸನ್ನಿಧಿಯಲ್ಲಿ, ಪರಿಮಳ ತಾಗಿ
ಬೇವು-ಬೊಬ್ಬುಲಿ-ತರಿಯ ಗಂಧಂಗಳಾಗವೆ ?
ನಮ್ಮ ಕೂಡಲಸಂಗನ ಶರಣರ ಸನ್ನಿಧಿಯಲ್ಲಿದ್ದು
ಕರ್ಮ ನಿರ್ಮಳವಾಗದಿಹುದೇ ?
೯೫.
ಹಾವಿನ ಡೊಂಕು ಹುತ್ತಕ್ಕೆ ಸಸಿನ.
ನದಿಯ ಡೊಂಕು ಸಮುದ್ರಕ್ಕೆ ಸಸಿನ.
ನಮ್ಮ ಕೂಡಲಸಂಗನ ಶರಣರ ಡೊಂಕು ಲಿಂಗಕ್ಕೆ ಸಸಿನ.
೯೬.
ಆಳಿಗೊಂಡಿಹರೆಂದು ಅಂಜಲದೇಕೆ ?
ನಾಸ್ತಿಕವಾಡಿಹರೆಂದು ನಾಚಲದೇಕೆ ?
ಆರಾದಡಾಗಲಿ ಶ್ರೀ ಮಹಾದೇವಂಗೆ ಶರಣೆನ್ನಿ.
ಏನೂ ಅರಿಯೆನೆಂದು ಮೋನಗೊಂಡಿರಬೇಡ
ಕೂಡಲಸಂಗಮದೇವರ ಮುಂದೆ ದಂ-ದಣ-ದತ್ತಣಯೆನ್ನಿ.
೯೭.
ಹಮ್ಮಿನ ಭಕ್ತಿ ಕರ್ಮಕ್ಕೆ ಮೊದಲು!
ಮರ್ಮವರಿಯದ ಮಾಟ ಸಯಿದಾನದ ಕೇಡು!
ಬಂದ ಸಮಯೋಚಿತವನರಿಯದಿದ್ದರೆ
ನಿಂದಿರಲೊಲ್ಲ ಕೂಡಲಸಂಗಮದೇವ.
೯೮.
ಬಲ್ಲಿದರೊಡನೆ ಬವರವಾದರೆ
ಗೆಲಲುಂಟು ಸೋಲಲುಂಟು-
ಕಳನೊಳಗೆ ಭಾಷೆ ಪೂರಾಯವಯ್ಯ!
ನಮ್ಮ ಕೂಡಲಸಂಗನ ಶರಣರಿಗೆ
ಮಾಡಿ ಮಾಡಿ, ಧನ ಸವೆದು ಬಡವಾದರೆ
ಆ ಭಕ್ತನು ಲಿಂಗಕ್ಕೆ ಪೂಜೆಯಹನು.
೯೯.
ಗೀತವ ಬಲ್ಲಾತ ಜಾಣನಲ್ಲ.
ಮಾತ ಬಲ್ಲಾತ ಜಾಣನಲ್ಲ.
ಜಾಣನು ಜಾಣನು, ಆತ ಜಾಣನು;
ಲಿಂಗವ ನೆರೆ ನಂಬಿದಾತ ಆತ ಜಾಣನು!
ಜಂಗಮಕ್ಕೆ ಸವೆಸುವಾತ ಆತ ಜಾಣನು!
ಜವನ ಬಾಯಲು ಬಾಲವ ಕೊಯ್ದು
ಹೋದಾತ ಆತ ಜಾಣನು
ನಮ್ಮ ಕೂಡಲಸಂಗನ ಶರಣನು!
೧೦೦.
ಹಾವು-ಹದ್ದು-ಕಾಗೆ-ಗೂಗೆ ಅನಂತ ಕಾಲ ಬದುಕವೆ ?
ಬೇಡವೋ ಮಾನವ,
ಲೇಸೆನಿಸಿಕೊಂಡು ಬದುಕುವೋ, ಮಾನವ, ಶಿವಭಕ್ತನಾಗಿ!
"ಜೀವಿತಂ ಶಿವಭಕ್ತಾನಾಂ ವರಂ ಪಂಚ ದಿನಾನಿ ಚ
ಅಜಕಲ್ಪ ಸಹಸ್ರಂ ತು ಭಕ್ತಿಹೀನಂ ನ ಶಾಂಕರಿ" ಎಂದುದಾಗಿ
ನಮ್ಮ ಕೂಡಲಸಂಗಮದೇವರ ಭಕ್ತಿವಿಡಿದು
ಐದು ದಿನವಾದರೂ ಬದುಕಿದರೆ ಸಾಲದೆ ?!

Comments

Popular posts from this blog

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ...

ಸರ್ವಜ್ಞನ ವಚನಗಳು - 1 ರಿಂದ 10

ಸರ್ವಜ್ಞನ ವಚನಗಳು -  1 ರಿಂದ 20 ೧. ನಂದಿಯನು ಏರಿದನ ಚಂದಿರನ ಮುಡಿದವನ ಕಂದನಂ ಬೇಡಿ ನೆನೆವುತ್ತ ಮುಂದೆ ಹೇಳುವೆನು ಸರ್ವಜ್ಞ ೨. ಮುನ್ನ ಕಾಲದಲಿ ಪನ್ನಗಧರನಾಳು ಎನ್ನೆಯ ಪೆಸರು, ಪುಷ್ಪದತ್ತನು ಎಂದು ಮನಿಪರು ದಯದಿ ಸರ್ವಜ್ಞ ೩. ಅಂದಿನ ಪುಷ್ಪದತ್ತ ಬಂದ ವರರುಚಿಯಾಗಿ ಮುದವ ಸಾರೆ, ಸರ್ವಜ್ಞನೆಂದೆನಿಸಿ ನಿಂದವನು ನಾನೆ ಸರ್ವಜ್ಞ ೪. ಸಣ್ಣನೆಯ ಮಳಲೊಳಗೆ ನುಣ್ಣನೆಯ ಶಿಲೆಯೊಳಗೆ ಬಣ್ಣೆಸಿಬರೆದ ಪಟದೊಳಗೆಯಿರುವಾತ ತಣ್ಣೊಳಗೆ ಇರನೇ ಸರ್ವಜ್ಞ ೫. ಹೊಲಸು ಮಾಂಸದ ಹುತ್ತ ಎಲುವಿನಾ ಹಂದರವು ಹೊಲೆಬಲಿದ ತನುವಿನೊಳಗಿರ್ದುಮದರೊಳಗೆ ಕುಲವನರಸುವರೆ ಸರ್ವಜ್ಞ ೬. ಎಲುವಿನೀ ಕಾಯಕ್ಕೆ ಸಲೆ ಚರ್ಮದ ಹೊದಿಕೆ ಮಲ ಮೂತ್ರ ಕ್ರಿಮಿಗಳೊಳಗಿರ್ದ ದೇಹಕ್ಕೆ ಕುಲವಾವುದಯ್ಯ ಸರ್ವಜ್ಞ ೭. ಸರ್ವಜ್ಞನೆಂಬುವನು ಗರ್ವದಿಂದಾದವನೆ ? ಸರ್ವರೊಳಗೊಂದು ನುಡಿಗಲಿತು ವಿದ್ಯೆಯ ಪರ್ವತವೇ ಆದ ಸರ್ವಜ್ಞ ೮. ಗುರುವಿನಾ ವಿಸ್ತರದ, ಪರಿಯನಾನೇನೆಂಬೆ ಮೆರೆವ ಬ್ರಹ್ಮಾಂಡದೊಳಹೊರಗೆ ಅವ ಬೆಳಗಿ ಪರಿಪೂರ್ಣನಿರ್ಪ ಸರ್ವಜ್ಞ ೯. ಊರಿಂಗೆ ದಾರಿಯನು ಆರು ತೋರಿದರೇನು? ಸಾರಾಯದಾ ನಿಜವ ತೋರುವ ಗುರುವು ತಾ ನಾರಾದರೇನು? ಸರ್ವಜ್ಞ ೧೦. ಪರತತ್ವ ತನ್ನೊಳಗೆ ಎರವಿಲ್ಲದಿರುತಿರ್ದು ಪರದೇಶಿಯಂತೆ ಇರುತಿರ್ಪಯೋಗಿಯನು ಪರಮಗುರುವೆಂಬೆ ಸರ್ವಜ್ಞ

ಅಕ್ಕನ ವಚನಗಳು - 301 ರಿಂದ 310 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೦೧. ಕಾಮನ ತಲೆಯ ಕೊರೆದು, ಕಾಲನ ಕಣ್ಣ ಕಳೆದು ಸೋಮಸೂರ್ಯರ ಹರಿದು ಹುಡಿಮಾಡಿ ತಿಂಬವಳಿಂಗೆ ನಾಮವನಿಡಬಲ್ಲವರಾರು ಹೇಳಿರೆ! ನೀ ಮದುವಳಿಗನಾಗಿ ನಾ ಮದುವಳಿಗಿತಿಯಾಗಿ ಯವನ(=ಆನಲನ?) ಕೂಡುವ ಮರುತನಂತೆ (?) ನೋಡಾ, ಶ್ರೀಗಿರಿ ಚೆನ್ನಮಲ್ಲಿಕಾರ್ಜುನ ೩೦೨. ಬಸವನ ಭಕ್ತಿ ಕೊಟ್ಟಣದ ಮನೆ ಸಿರಿಯಾಳನ ಭಕ್ತಿ ಕಸಬಗೇರಿ ಸಿಂಧುಬಲ್ಲಾಳನ ಭಕ್ತಿ ಪರದಾರದ್ರೋಹ ಉಳಿದಾದ[+ಟ}ಮಟ ಉದಾಸೀನ ದಾಸೋಹ ಮಾಡುವವರ ದೈನ್ಯವೆಂಬ ಭೂತ ಸೋಂಕಿತು ಮಣ್ಣಿನ ಮನೆಯ ಕಟ್ಟಿ ಮಾಯಾಮೋಹಿನಿಯೆಂಬ ಮಹೇಂದ್ರಜಾಲದೊಳಗಾಗಿ ಮಾಡುವ ಮಾಟ ಭಕ್ತನಲ್ಲಿ ಉಂಡು ಉದ್ದಂಡ ವೃತ್ತಿಯಲ್ಲಿ ನಡೆದವರು ಶಿವನಲ್ಲ ಇವರು ದೇವಲೋಕ ಮರ್ತ್ಯಲೋಕಕ್ಕೆ ಹೊರಗು ಶ್ರೀಗಿರಿ ಚೆನ್ನಮಲ್ಲಿಕಾರ್ಜುನ, ನನ್ನ ಭಕ್ತಿ ನಿನ್ನೊಳಗೈಕ್ಯವಾಯಿತಾಗಿ ನಿರ್ವಯಲಾದೆ ಕಾಣಾ! ೩೦೩. ಅನ್ನವ ನೀಡುವವರಿಗೆ ಧಾನ್ಯವೆ [ಶಿವ]ಲೋಕ ಅರ್ಥವ ಕೊಡುವವರಿಂಗೆ ಪಾಷಾಣವೆ [ಶಿವ]ಲೋಕ ಹೆಣ್ಣು-ಹೊನ್ನು-ಮಣ್ಣು ಮೂರನೂ ಕಣ್ಣಿನಲ್ಲಿ ನೋಡಿ, ಕಿವಿಯಲಿ ಕೇಳಿ ಕೈ[ಯಲಿ] ಮುಟ್ಟಿ ಮಾಡುವ ಭಕ್ತಿ ಸಣ್ಣವರ ಸಮಾರಾಧನೆಯಾಯಿತು ತನ್ನನಿತ್ತು ತುಷ್ಟಿವಡೆವರನೆನಗೆ ತ...