Skip to main content

ಬಸವಣ್ಣನ ವಚನಗಳು - 111 ರಿಂದ 120 ರವರೆಗೆ


೧೧೧.
ಎಲೆಯೆಲೆ ಮಾನವಾ, ಅಳಿಯಾಸೆ ಬೇಡವೋ,
ಕಾಳ-ಬೆಳುದಿಂಗಳು-ಸಿರಿ ಸ್ಥಿರವಲ್ಲ!
ಕೇಡಿಲ್ಲದ ಪದವಿಯನೀವ
ಕೂಡಲಸಂಗಮದೇವಯ್ಯನ ಮರೆಯದೆ ಪೂಜಿಸು.
೧೧೨.
ಎಂತಕ್ಕೆ ಎಂತಕ್ಕೆ
ಹಡೆದ ಕಾಯ ಬೀಯವಾಗದ ಮುನ್ನ ಅಟ್ಟುಣ್ಣವೋ!
ಬೆರಣಿಯುಳ್ಳಲ್ಲಿ ಹೊತ್ತು ಹೋಗದ ಮುನ್ನ ಅಟ್ಟುಣ್ಣವೋ!
ಮರಳಿ ಭವಕ್ಕೆ ಬಹೆ ಬಾರದಿಹೆ!
ಕರ್ತೃ ಕೂಡಲಸಂಗಂಗೆ ಶರಣೆನ್ನವೋ!
೧೧೩.
ಶಕುನವೆಂದೆಂಬೆ ಅಪಶಕುನವೆಂದೆಂಬೆ,
ನಿಮ್ಮವರು ಅಳಲಿಕಂದೇಕೆ ಬಂದೆ ?
ನಿಮ್ಮವರು ಅಳಲಿಕಿಂದೇಕೆ ಹೋದೆ ?
ನೀ ಹೋಹಾಗಳಕ್ಕೆ!
ನೀ ಬಾಹಾಗಳಕ್ಕೆ!
ಅಕ್ಕೆ ಬಾರದ ಮುನ್ನ ಪೂಜಿಸು ಕೂಡಲಸಂಗಮದೇವನ.
೧೧೪.
ನಿಮಿಷಂ ನಿಮಿಷಂ ಭೋ!
ಕ್ಷಣದೊಳಗರ್ಧಂ ಭೋ!
ಕಣ್ಣ ಮುಚ್ಚಿ ಬಿಚ್ಚುವಿನಿಸು ಬೇಗಂ ಭೋ
ಸಂಸಾರದಾಗುಂ ಭೋ!
ಸಂಸಾರದ ಹೋಗುಂ ಭೋ!
ಸಂಸಾರದೊಪ್ಪಂ ಭೊ!
ಕೂಡಲಸಂಗಮದೇವ ಮಾಡಿದ
ಮಾಯಂ ಭೋ!
ಅಭ್ರಚ್ಛಾಯಂ ಭೋ!
೧೧೫.
ಹರನೀವ ಕಾಲಕ್ಕೆ ಸಿರಿಯು ಬೆನ್ನಲಿ ಬಕ್ಕು-
ಹರಿದು ಹೆದ್ದೊರೆಯು ಕೆರೆ ತುಂಬಿದಂತಯ್ಯ;
ನೆರೆಯದ ವಸ್ತು ನೆರೆವುದು ನೋಡಯ್ಯ;
ಅರಸು ಪರಿವಾರ ಕೈವಾರ ನೋಡಯ್ಯ.
ಪರಮನಿರಂಜನ ಮರೆವ ಕಾಲಕ್ಕೆ
ತುಂಬಿದ ಹರವಿಯ ಕಲ್ಲು ಕೊಂಡಂತೆ
ಕೂಡಲಸಂಗಮದೇವ.







೧೧೬.
ಪುಣ್ಯಗಳಹ ಕಾಲಕ್ಕೆ ಹಗೆಗಳು ತನ್ನವರಹರು!
ಪುಣ್ಯಗಳಹ ಕಾಲಕ್ಕೆ ಮಣ್ಣು ಹೊನ್ನಹುದು!
ಪುಣ್ಯಗಳಹ ಕಾಲಕ್ಕೆ ಹಾವು ನೇವಳವಹುದು!
ಪುಣ್ಯಗಳಹ ಕಾಲಕ್ಕೆ ಅನ್ಯರು ತನ್ನವರಹರು!
ಇಂತಪ್ಪ ಪುಣ್ಯಗಳೆಲ್ಲವೂ ಭಕ್ತಿಯಿಂದಲಹುದು!
ಭಕ್ತಿ ಕೆಟ್ಟರೆ ಪುಣ್ಯವೂ ಕೆಡುವುದು!
ಇಂತಪ್ಪ ಭಕ್ತಿಯೂ ಪುಣ್ಯವೂ ಚೆನ್ನಬಸವಣ್ಣನಿಂದುಂಟಾಗಿ
ನಾನು ಬದುಕಿದೆನಯ್ಯ ಕೂಡಲಸಂಗಮದೇವ .
೧೧೭.
ಹೊಯ್ದರೆ ಹೊಯ್ಗಳು ಕೈಯ ಮೇಲೆ,
ಬೈದರೆ ಬೈಗಳು ಕೈಯ ಮೇಲೆ,
ಹಿಂದಣ ಜನನವೇನಾದರಾಗಲಿ,
ಇಂದಿನ ಭೋಗವು ಕೈಯ ಮೇಲೆ.
ಕೂಡಲಸಂಗಮದೇವಯ್ಯ,
ನಿನ್ನ ಪೂಜಿಸಿದ ಫಲ ಕೈಯ್ಯ ಮೇಲೆ!
೧೧೮.
ಹೊತ್ತಾರೆ ಎದ್ದು ಅಗ್ಘವಣಿ ಪತ್ರೆಯ ತಂದು
ಹೊತ್ತು ಹೋಗದ ಮುನ್ನ ಪೂಜಿಸು ಲಿಂಗವ.
ಹೊತ್ತು ಹೋದ ಬಳಿಕ ನಿನ್ನನಾರು ಬಲ್ಲರು ?
ಹೊತ್ತು ಹೋಗದ ಮುನ್ನ, ಮೃತ್ಯು ಒಯ್ಯದ ಮುನ್ನ
ತೊತ್ತುಗೆಲಸವ ಮಾಡು ಕೂಡಲಸಂಗಂಗೆ.
೧೧೯.
ಅಚ್ಚಿಗವೇಕಯ್ಯ ? ಸಂಸಾರದೊಳಗಿರ್ದು
ನಿಚ್ಚ ನಿಚ್ಚ ಶಿವರಾತ್ರಿಯ ಮಾಡುವುದು.
ಬೇಗ ಬೇಗ ಅರ್ಚನೆ-ಪೂಜನೆಯ ಮಾಡುವುದು!
ಬೇಗ ಬೇಗ ಕೂಡಲಸಂಗನ ಕೂಡುವುದು!
೧೨೦.
ಅಂದು ಇಂದು ಮತ್ತೊಂದೆನಬೇಡ.
ದಿನವಿಂದೇ ಶಿವಶರಣೆಂಬವಂಗೆ,
ದಿನವಿಂದೇ ಹರಶರಣೆಂಬವಂಗೆ,
ದಿನವಿಂದೇ ನಮ್ಮ ಕೂಡಲಸಂಗನ ಮಾಣದೆ ನೆನೆವಂಗೆ.

Comments

Popular posts from this blog

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ...

ಸರ್ವಜ್ಞನ ವಚನಗಳು - 1 ರಿಂದ 10

ಸರ್ವಜ್ಞನ ವಚನಗಳು -  1 ರಿಂದ 20 ೧. ನಂದಿಯನು ಏರಿದನ ಚಂದಿರನ ಮುಡಿದವನ ಕಂದನಂ ಬೇಡಿ ನೆನೆವುತ್ತ ಮುಂದೆ ಹೇಳುವೆನು ಸರ್ವಜ್ಞ ೨. ಮುನ್ನ ಕಾಲದಲಿ ಪನ್ನಗಧರನಾಳು ಎನ್ನೆಯ ಪೆಸರು, ಪುಷ್ಪದತ್ತನು ಎಂದು ಮನಿಪರು ದಯದಿ ಸರ್ವಜ್ಞ ೩. ಅಂದಿನ ಪುಷ್ಪದತ್ತ ಬಂದ ವರರುಚಿಯಾಗಿ ಮುದವ ಸಾರೆ, ಸರ್ವಜ್ಞನೆಂದೆನಿಸಿ ನಿಂದವನು ನಾನೆ ಸರ್ವಜ್ಞ ೪. ಸಣ್ಣನೆಯ ಮಳಲೊಳಗೆ ನುಣ್ಣನೆಯ ಶಿಲೆಯೊಳಗೆ ಬಣ್ಣೆಸಿಬರೆದ ಪಟದೊಳಗೆಯಿರುವಾತ ತಣ್ಣೊಳಗೆ ಇರನೇ ಸರ್ವಜ್ಞ ೫. ಹೊಲಸು ಮಾಂಸದ ಹುತ್ತ ಎಲುವಿನಾ ಹಂದರವು ಹೊಲೆಬಲಿದ ತನುವಿನೊಳಗಿರ್ದುಮದರೊಳಗೆ ಕುಲವನರಸುವರೆ ಸರ್ವಜ್ಞ ೬. ಎಲುವಿನೀ ಕಾಯಕ್ಕೆ ಸಲೆ ಚರ್ಮದ ಹೊದಿಕೆ ಮಲ ಮೂತ್ರ ಕ್ರಿಮಿಗಳೊಳಗಿರ್ದ ದೇಹಕ್ಕೆ ಕುಲವಾವುದಯ್ಯ ಸರ್ವಜ್ಞ ೭. ಸರ್ವಜ್ಞನೆಂಬುವನು ಗರ್ವದಿಂದಾದವನೆ ? ಸರ್ವರೊಳಗೊಂದು ನುಡಿಗಲಿತು ವಿದ್ಯೆಯ ಪರ್ವತವೇ ಆದ ಸರ್ವಜ್ಞ ೮. ಗುರುವಿನಾ ವಿಸ್ತರದ, ಪರಿಯನಾನೇನೆಂಬೆ ಮೆರೆವ ಬ್ರಹ್ಮಾಂಡದೊಳಹೊರಗೆ ಅವ ಬೆಳಗಿ ಪರಿಪೂರ್ಣನಿರ್ಪ ಸರ್ವಜ್ಞ ೯. ಊರಿಂಗೆ ದಾರಿಯನು ಆರು ತೋರಿದರೇನು? ಸಾರಾಯದಾ ನಿಜವ ತೋರುವ ಗುರುವು ತಾ ನಾರಾದರೇನು? ಸರ್ವಜ್ಞ ೧೦. ಪರತತ್ವ ತನ್ನೊಳಗೆ ಎರವಿಲ್ಲದಿರುತಿರ್ದು ಪರದೇಶಿಯಂತೆ ಇರುತಿರ್ಪಯೋಗಿಯನು ಪರಮಗುರುವೆಂಬೆ ಸರ್ವಜ್ಞ

ಅಕ್ಕನ ವಚನಗಳು - 301 ರಿಂದ 310 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೦೧. ಕಾಮನ ತಲೆಯ ಕೊರೆದು, ಕಾಲನ ಕಣ್ಣ ಕಳೆದು ಸೋಮಸೂರ್ಯರ ಹರಿದು ಹುಡಿಮಾಡಿ ತಿಂಬವಳಿಂಗೆ ನಾಮವನಿಡಬಲ್ಲವರಾರು ಹೇಳಿರೆ! ನೀ ಮದುವಳಿಗನಾಗಿ ನಾ ಮದುವಳಿಗಿತಿಯಾಗಿ ಯವನ(=ಆನಲನ?) ಕೂಡುವ ಮರುತನಂತೆ (?) ನೋಡಾ, ಶ್ರೀಗಿರಿ ಚೆನ್ನಮಲ್ಲಿಕಾರ್ಜುನ ೩೦೨. ಬಸವನ ಭಕ್ತಿ ಕೊಟ್ಟಣದ ಮನೆ ಸಿರಿಯಾಳನ ಭಕ್ತಿ ಕಸಬಗೇರಿ ಸಿಂಧುಬಲ್ಲಾಳನ ಭಕ್ತಿ ಪರದಾರದ್ರೋಹ ಉಳಿದಾದ[+ಟ}ಮಟ ಉದಾಸೀನ ದಾಸೋಹ ಮಾಡುವವರ ದೈನ್ಯವೆಂಬ ಭೂತ ಸೋಂಕಿತು ಮಣ್ಣಿನ ಮನೆಯ ಕಟ್ಟಿ ಮಾಯಾಮೋಹಿನಿಯೆಂಬ ಮಹೇಂದ್ರಜಾಲದೊಳಗಾಗಿ ಮಾಡುವ ಮಾಟ ಭಕ್ತನಲ್ಲಿ ಉಂಡು ಉದ್ದಂಡ ವೃತ್ತಿಯಲ್ಲಿ ನಡೆದವರು ಶಿವನಲ್ಲ ಇವರು ದೇವಲೋಕ ಮರ್ತ್ಯಲೋಕಕ್ಕೆ ಹೊರಗು ಶ್ರೀಗಿರಿ ಚೆನ್ನಮಲ್ಲಿಕಾರ್ಜುನ, ನನ್ನ ಭಕ್ತಿ ನಿನ್ನೊಳಗೈಕ್ಯವಾಯಿತಾಗಿ ನಿರ್ವಯಲಾದೆ ಕಾಣಾ! ೩೦೩. ಅನ್ನವ ನೀಡುವವರಿಗೆ ಧಾನ್ಯವೆ [ಶಿವ]ಲೋಕ ಅರ್ಥವ ಕೊಡುವವರಿಂಗೆ ಪಾಷಾಣವೆ [ಶಿವ]ಲೋಕ ಹೆಣ್ಣು-ಹೊನ್ನು-ಮಣ್ಣು ಮೂರನೂ ಕಣ್ಣಿನಲ್ಲಿ ನೋಡಿ, ಕಿವಿಯಲಿ ಕೇಳಿ ಕೈ[ಯಲಿ] ಮುಟ್ಟಿ ಮಾಡುವ ಭಕ್ತಿ ಸಣ್ಣವರ ಸಮಾರಾಧನೆಯಾಯಿತು ತನ್ನನಿತ್ತು ತುಷ್ಟಿವಡೆವರನೆನಗೆ ತ...