Skip to main content

ಅಕ್ಕನ ವಚನಗಳು - 111 ರಿಂದ 120 ರವರೆಗೆ

೧೧೧.
ಭವಿಸಂಗವಳಿದು ಶಿವಭಕ್ತನಾದ ಬಳಿಕ
ಭಕ್ತಂಗೆ ಭವಿಸಂಗವತಿ ಘೋರ ನರಕ
ಶರಣಸತಿ-ಲಿಂಗಪತಿಯಾದ ಬಳಿಕ
ಶರಣಂಗೆ ಸತಿಸಂಗವತಿಘೋರ ನರಕ
ಚೆನ್ನಮಲ್ಲಿಕಾರ್ಜುನ,
ಲಿಂಗೈಕ್ಯಂಗೆ ಪ್ರಾಣಗುಣವಳಿಯದವರ ಸಂಗವೇ ಭಂಗ

೧೧೨.
ಹೂವು ಕಂದಿದಲ್ಲಿ ಪರಿಮಳವನರಸುವರೇ?
[ಎನ್ನ ತಂದೆ] ಕಂದನಲ್ಲಿ ಕುಂದನರಸುವರೇ?
ಎಲೆ ದೇವ, ಸ್ನೇಹವಿದ್ದ ಠಾವಿನೊಳು
ದ್ರೋಹವಾದ ಬಳಿಕ ಮರಳಿ ಸದ್ಗುಣವನರಸುವರೇನಯ್ಯ?
ನೀ ಎನ್ನ ತಂದೆ, ಹೂವು ಕಂದಿದಲ್ಲಿ [ಪರಿಮಳವನರಸುವರೇ?]
ಕಂದನಲ್ಲಿ [ಕುಂದನರಸುವರೇ?]
ಎಲೆ ದೇವ, ಬೆಂದ ಹುಣ್ಣಿಗೆ ಬೇಗೆಯನಿಕ್ಕುವರೇ?
ಗುರುವೇ ಹೂವು ಕಂದಿದಲ್ಲಿ [ಪರಿಮಳವನರಸುವರೇ?]
[ಕಂದನಲ್ಲಿ ಕುಂದನರಸುವರೇ?]
ಕೇಳಯ್ಯ ಶ್ರೀಶೈಲ ಚೆನ್ನಮಲ್ಲಿಕಾರ್ಜುನ,
ಹೊಳೆಯಳಿದ ಬಳಿಕ ಅಂಬಿಗಂಗೇನುಂಟು?
ಹೂವು ಕಂದಿದಲ್ಲಿ [ಪರಿಮಳವನರಸುವರೇ?]
[ಕಂದನಲ್ಲಿ ಕುಂದನರಸುವರೇ?]

೧೧೩.
ಕಂಗಳಲ್ಲಿ ಕಾಂಬೆನೆಂದು ಕತ್ತಲೆಯ ಹೊಕ್ಕುಡೆಂತಹುದಯ್ಯ?
ಬೆಟ್ಟದ ತುದಿಯ ಮೆಟ್ಟಿಲೆಂದು ಹಳ್ಳಕೊಳ್ಳಂಗಳಲ್ಲಿ
ಇಳಿದೊಡೆಂತಹುದಯ್ಯ?
ನೀನಿಕ್ಕಿದ ಸಯಿದಾನವನೊಲ್ಲದೆ
ಬೇರೆ ಬಯಸಿದೊಡೆಂತಹುದಯ್ಯ?
ಚೆನ್ನಮಲ್ಲಿಕಾರ್ಜುನನ ಘನವನರಿಯಲೆಂದು
ಕಿರುಕುಳಕ್ಕೆ ಸಂದೊಡೆಂತಹುದಯ್ಯ?

೧೧೪.
ಒಳಗಣ ಗಂಡನವ್ವಾ, ಹೊರಗಣ ಮಿಂಡನವ್ವಾ!
ಎರಡನೂ ನಡೆಸಲು [ಬಾರದವ್ವ]!
ಚೆನ್ನಮಲ್ಲಿಕಾರ್ಜುನಯ್ಯ,
ಬಿಲ್ಲು [ಬೆಳವಲಕಾಯನೊಂದಾಗಿ] ಹಿಡಿಯಲು ಬಾರದಯ್ಯ!!

೧೧೫.
ಚಿನ್ನಕ್ಕರಿಸಿನ ಚಿನ್ನಕ್ಕರಿಸಿನ!
ಚಿನ್ನಕ್ಕರಿಸಿನವ ಕೊಳ್ಳಿರವ್ವ!
ನಮ್ಮ ನಲ್ಲನ ಮೈಯ್ಯ ಹತ್ತುವ ಅರಿಸಿನವ ಕೊಳ್ಳಿರವ್ವ
ಒಳಗುಂದದರಿಸಿನವ ಮಿಂದು
ಚೆನ್ನಮಲ್ಲಿಕಾರ್ಜುನನಪ್ಪಿರವ್ವ!






೧೧೬.
ಕಾಯ ಕರ್ರನೆ ಕುಂದಿದರೇನಯ್ಯ?
ಕಾಯ ಮಿರ್ರನೆ ಮಿಂಚಿದರೇನಯ್ಯ?
ಅಂತರಂಗ ಶುದ್ಧವಾದ ಬಳಿಕ
ಚೆನ್ನಮಲ್ಲಿಕಾರ್ಜುನನನೊಲಿದ ಕಾಯ
ಎಂತಾದಡೆಮಗೇನಯ್ಯ?

೧೧೭.
ಹಣ ಮೆದ್ದ ಬಳಿಕ, ಆ ಮರನ ಆರು ತರಿದರೇನು?
ಹೆಣ ಬಿಟ್ಟ ಬಳಿಕ, ಆಕೆಯನಾರು ಕೂಡಿಕೊಂಡರೇನು?
ಮಣ್ಣ ಬಿಟ್ಟ ಬಳಿಕ ಆ ಕೆಯ್ಯನಾರುತ್ತರೇನು?
ಚೆನ್ನಮಲ್ಲಿಕಾರ್ಜುನನ ಅರಿದ ಬಳಿಕ
ಆ ಕಾಯವ ನಾಯಿ ತಿಂದರೇನು ನೀರ ಕುಡಿದರೇನು?

೧೧೮.
ಹಗಲು ನಾಲ್ಕು ಜಾವ ಆಶನಕ್ಕೆ ಕುದಿವರು
ಇರುಳು ನಾಲ್ಕು ಜಾವ ವ್ಯಸನಕ್ಕೆ ಕುದಿವರು
ಅಸಗ ನೀರೊಳಗಿರ್ದುಬಾಯಾರಿ ಸತ್ತಂತೆ
ತಮ್ಮೊಳಗಿರ್ದ ಮಹಾಘನವನರಿಯರು ಚೆನ್ನಮಲ್ಲಿಕಾರ್ಜುನ

೧೧೯.
ನಾಳೆ ಬರುವುದು ನಮಗಿಂದೇ ಬರಲಿ
ಇಂದು ಬರುವುದು ನಮಗೀಗಲೇ ಬರಲಿ
ಆಗೀಗಲೆನ್ನದಿರೊ ಚೆನ್ನಮಲ್ಲಿಕಾರ್ಜುನ

೧೨೦.
ಉಸುರಿನ ಪರಿಮಳವಿರಲು ಕುಸುಮದ ಹಂಗೇಕಯ್ಯ?
ಕ್ಷಮೆ-ದಯೆ-ಶಾಂತಿ-ಸೈರಣೆಯಿರಲು ಸಮಾಧಿಯ ಹಂಗೇಕಯ್ಯ?
ಲೋಕವೇ ತಾನಾದ ಬಳಿಕ ಏಕಾಂತದ ಹಂಗೇಕಯ್ಯ,
ಚೆನ್ನಮಲ್ಲಿಕಾರ್ಜುನ?

Comments

Popular posts from this blog

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ...

ಸರ್ವಜ್ಞನ ವಚನಗಳು - 1 ರಿಂದ 10

ಸರ್ವಜ್ಞನ ವಚನಗಳು -  1 ರಿಂದ 20 ೧. ನಂದಿಯನು ಏರಿದನ ಚಂದಿರನ ಮುಡಿದವನ ಕಂದನಂ ಬೇಡಿ ನೆನೆವುತ್ತ ಮುಂದೆ ಹೇಳುವೆನು ಸರ್ವಜ್ಞ ೨. ಮುನ್ನ ಕಾಲದಲಿ ಪನ್ನಗಧರನಾಳು ಎನ್ನೆಯ ಪೆಸರು, ಪುಷ್ಪದತ್ತನು ಎಂದು ಮನಿಪರು ದಯದಿ ಸರ್ವಜ್ಞ ೩. ಅಂದಿನ ಪುಷ್ಪದತ್ತ ಬಂದ ವರರುಚಿಯಾಗಿ ಮುದವ ಸಾರೆ, ಸರ್ವಜ್ಞನೆಂದೆನಿಸಿ ನಿಂದವನು ನಾನೆ ಸರ್ವಜ್ಞ ೪. ಸಣ್ಣನೆಯ ಮಳಲೊಳಗೆ ನುಣ್ಣನೆಯ ಶಿಲೆಯೊಳಗೆ ಬಣ್ಣೆಸಿಬರೆದ ಪಟದೊಳಗೆಯಿರುವಾತ ತಣ್ಣೊಳಗೆ ಇರನೇ ಸರ್ವಜ್ಞ ೫. ಹೊಲಸು ಮಾಂಸದ ಹುತ್ತ ಎಲುವಿನಾ ಹಂದರವು ಹೊಲೆಬಲಿದ ತನುವಿನೊಳಗಿರ್ದುಮದರೊಳಗೆ ಕುಲವನರಸುವರೆ ಸರ್ವಜ್ಞ ೬. ಎಲುವಿನೀ ಕಾಯಕ್ಕೆ ಸಲೆ ಚರ್ಮದ ಹೊದಿಕೆ ಮಲ ಮೂತ್ರ ಕ್ರಿಮಿಗಳೊಳಗಿರ್ದ ದೇಹಕ್ಕೆ ಕುಲವಾವುದಯ್ಯ ಸರ್ವಜ್ಞ ೭. ಸರ್ವಜ್ಞನೆಂಬುವನು ಗರ್ವದಿಂದಾದವನೆ ? ಸರ್ವರೊಳಗೊಂದು ನುಡಿಗಲಿತು ವಿದ್ಯೆಯ ಪರ್ವತವೇ ಆದ ಸರ್ವಜ್ಞ ೮. ಗುರುವಿನಾ ವಿಸ್ತರದ, ಪರಿಯನಾನೇನೆಂಬೆ ಮೆರೆವ ಬ್ರಹ್ಮಾಂಡದೊಳಹೊರಗೆ ಅವ ಬೆಳಗಿ ಪರಿಪೂರ್ಣನಿರ್ಪ ಸರ್ವಜ್ಞ ೯. ಊರಿಂಗೆ ದಾರಿಯನು ಆರು ತೋರಿದರೇನು? ಸಾರಾಯದಾ ನಿಜವ ತೋರುವ ಗುರುವು ತಾ ನಾರಾದರೇನು? ಸರ್ವಜ್ಞ ೧೦. ಪರತತ್ವ ತನ್ನೊಳಗೆ ಎರವಿಲ್ಲದಿರುತಿರ್ದು ಪರದೇಶಿಯಂತೆ ಇರುತಿರ್ಪಯೋಗಿಯನು ಪರಮಗುರುವೆಂಬೆ ಸರ್ವಜ್ಞ

ಅಕ್ಕನ ವಚನಗಳು - 301 ರಿಂದ 310 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೦೧. ಕಾಮನ ತಲೆಯ ಕೊರೆದು, ಕಾಲನ ಕಣ್ಣ ಕಳೆದು ಸೋಮಸೂರ್ಯರ ಹರಿದು ಹುಡಿಮಾಡಿ ತಿಂಬವಳಿಂಗೆ ನಾಮವನಿಡಬಲ್ಲವರಾರು ಹೇಳಿರೆ! ನೀ ಮದುವಳಿಗನಾಗಿ ನಾ ಮದುವಳಿಗಿತಿಯಾಗಿ ಯವನ(=ಆನಲನ?) ಕೂಡುವ ಮರುತನಂತೆ (?) ನೋಡಾ, ಶ್ರೀಗಿರಿ ಚೆನ್ನಮಲ್ಲಿಕಾರ್ಜುನ ೩೦೨. ಬಸವನ ಭಕ್ತಿ ಕೊಟ್ಟಣದ ಮನೆ ಸಿರಿಯಾಳನ ಭಕ್ತಿ ಕಸಬಗೇರಿ ಸಿಂಧುಬಲ್ಲಾಳನ ಭಕ್ತಿ ಪರದಾರದ್ರೋಹ ಉಳಿದಾದ[+ಟ}ಮಟ ಉದಾಸೀನ ದಾಸೋಹ ಮಾಡುವವರ ದೈನ್ಯವೆಂಬ ಭೂತ ಸೋಂಕಿತು ಮಣ್ಣಿನ ಮನೆಯ ಕಟ್ಟಿ ಮಾಯಾಮೋಹಿನಿಯೆಂಬ ಮಹೇಂದ್ರಜಾಲದೊಳಗಾಗಿ ಮಾಡುವ ಮಾಟ ಭಕ್ತನಲ್ಲಿ ಉಂಡು ಉದ್ದಂಡ ವೃತ್ತಿಯಲ್ಲಿ ನಡೆದವರು ಶಿವನಲ್ಲ ಇವರು ದೇವಲೋಕ ಮರ್ತ್ಯಲೋಕಕ್ಕೆ ಹೊರಗು ಶ್ರೀಗಿರಿ ಚೆನ್ನಮಲ್ಲಿಕಾರ್ಜುನ, ನನ್ನ ಭಕ್ತಿ ನಿನ್ನೊಳಗೈಕ್ಯವಾಯಿತಾಗಿ ನಿರ್ವಯಲಾದೆ ಕಾಣಾ! ೩೦೩. ಅನ್ನವ ನೀಡುವವರಿಗೆ ಧಾನ್ಯವೆ [ಶಿವ]ಲೋಕ ಅರ್ಥವ ಕೊಡುವವರಿಂಗೆ ಪಾಷಾಣವೆ [ಶಿವ]ಲೋಕ ಹೆಣ್ಣು-ಹೊನ್ನು-ಮಣ್ಣು ಮೂರನೂ ಕಣ್ಣಿನಲ್ಲಿ ನೋಡಿ, ಕಿವಿಯಲಿ ಕೇಳಿ ಕೈ[ಯಲಿ] ಮುಟ್ಟಿ ಮಾಡುವ ಭಕ್ತಿ ಸಣ್ಣವರ ಸಮಾರಾಧನೆಯಾಯಿತು ತನ್ನನಿತ್ತು ತುಷ್ಟಿವಡೆವರನೆನಗೆ ತ...