Skip to main content

ಅಕ್ಕನ ವಚನಗಳು - 161 ರಿಂದ 170 ರವರೆಗೆ

೧೬೧.
ಆಯತ-ಸ್ವಾಯತ-ಅನುಭಾವವ ನಾನೆತ್ತ ಬಲ್ಲೆನಯ್ಯಾ
ಗುರು-ಲಿಂಗ-ಜಂಗಮಕ್ಕೆ ಅರ್ಥಪ್ರಾಣಾಭಿಮಾನಂಗಳನಿತ್ತ
ನಿನ್ನ ಭಕ್ತರ ಭೃತ್ಯರಿಗಾಳಾಗಿಪ್ಪೆನಯ್ಯಾ
ನಿಮ್ಮ ಶರಣರ ಸಂಗವನಲ್ಲದೆ ಬೇರೊಂದ ಬಯಸೆನಯ್ಯ
ಚೆನ್ನಮಲ್ಲಿಕಾರ್ಜುನ

೧೬೨.
ಅಷ್ಟದಳಕಮಲದ ಆತ್ಮನೊಳಗೆ ಸೃಷ್ಟಿ ಜನಿಸಿ
[ಕೂರುಮ ದಿಗುದಂತಿ] ದಿಗುವಳಯವ ನುಂಗಿ
ನಿಜ ಶೂನ್ಯ ತಾನಾದ ಬಳಿಕ
ತನ್ನ ತಾನರಿದ ನಿಜಪದ ಭಿನ್ನಯೋಗಕ್ಕೆ ಬರಬಹುದೇ?
ಕಂಗಳ ನೋಟದಲ್ಲಿ
ಮನ ಸೊಗಸಿನಲ್ಲಿ
ಅನಂಗನ ಧಾಳಿಯನಗಲಿದೆವಣ್ಣ
ಮರೀಚಿಕಾಜಲದೊಳಡಗಿದ ಪ್ರಾಣಿ ವ್ಯಾಧನ ಬಲೆಗೊಳಗಹುದೇ?
ಎನ್ನ ದೇವ ಚೆನ್ನಮಲ್ಲಿಕಾರ್ಜುನನಲ್ಲದ
ಪರಪುರುಷರು ನಮಗಾಗದಣ್ಣ!

೧೬೩.
ನಮಗೆ ನಮ್ಮ ಲಿಂಗದ ಚಿಂತೆ
ನಮಗೆ ನಮ್ಮ ಭಕ್ತರ ಚಿಂತೆ, ಮನಗೆ ನಮ್ಮ ಆದ್ಯರ ಚಿಂತೆ
ನಮಗೆ ನಮ್ಮ ಚೆನ್ನಮಲ್ಲಿಕಾರ್ಜುನನ ಚಿಂತೆಯಲ್ಲದೆ
ಲೋಕದ ಮಾತು ನಮಗೇಕಣ್ಣ?

೧೬೪.
ನಿಮ್ಮ ನಿಲುವಿಂಗೆ ನೀವು ನಾಚಬೇಡವೆ?
ಅನ್ಯರ ಕೈಲಿ ಅಲ್ಲ ಎನಿಸಿಕೊಂಬ ನಡೆ-ನುಡಿಯೇಕೆ?
ಅಲ್ಲ ಎನಿಸಿಕೊಂಬುದರಿಂದ, ಆ ಕ್ಷಣವೇ ಸಾವುದು ಲೇಸು ಕಾಣಾ
ಚೆನ್ನಮಲ್ಲಿಕಾರ್ಜುನ

೧೬೫.
ಶಿವಭಕ್ತರ ರೋಮ ನೊಂದರೆ
ಒಡನೆ ಶಿವನು ನೋವ ನೋಡಾ
ಶಿವಭಕ್ತರು ಪರಿಣಾಮಿಸಿದರೆ, ಒಡನೆ ಶಿವ ಪರಿಣಆಮಿಸುವ ನೋಡಾ !
ಭಕ್ತದೇಹಿಕ ದೇವ ಎಂಬ ಶ್ರುತಿ ಹೊಗಳುವ ಕಾರಣ
ಶಿವಭಕ್ತರ ಲೇಸು ಹೊಲ್ಲೆಹ ಶಿವನ ಮುಟ್ಟುವುದು
ತಾಯಿ ನೊಂದರೆ ಒಡಲ ಶಿಶು ನೋವ ತೆರನಂತೆ
ಚೆನ್ನಮಲ್ಲಿಕಾರ್ಜುನ-ತನ್ನ ಭಕ್ತರು ನೊಂದರೆ
ಒಡನೆ ತಾ ನೋವನು






೧೬೬.
ನೋಡುವ ಕಂಗಳಿಗೆ ರೂಪಿಂಬಾಗಿರಲು
ನೀವು ಮನ ನಾಚದೆ ಬಂದಿರಣ್ಣ!
ಕೇಳಿದ ಶ್ರೋತ್ರಸೊಗಸಿಗೆ ನೀವು ಮರುಳಾಗಿ ಬಂದಿರಣ್ಣ!
ನಾರಿಯೆಂಬ ರೂಪಿಂಗೆ ನೀವು ಒಲಿದು ಬಂದಿರಣ್ಣ!
ಮೂತ್ರವು ಬಿಂದು ಒಸರುವ ನಾಳವೆಂದು
ಕಂಗಾಣದೆ ಮುಂದುಗೆಟ್ಟು ಬಂದಿರಣ್ಣ!
ಬುದ್ಧಿಗೇಡಿತನದಿಂದ ಪರಮಾರ್ಥದ ಸುಖವ
ಹೋಗಲಾಡಿಸಿಕೊಂಡು
ಇದಾವ ಕಾರಣವೆಂದರಿಯದೆ, ನೀವು ನರಹೇತುವೆಂದರಿದೂ
ಮನ ಹೇಸದೆ ಬಂದಿರಣ್ಣ!
ಚೆನ್ನಮಲ್ಲಿಕಾರ್ಜುನನಲ್ಲದೆ ಮಿಕ್ಕಿಹ ಪುರುಷರೆನಗೆ ಸಹೋದರರು
ಛೀ ಹೋಗಾ ಮರುಳೇ!

೧೬೭.
ಲೇಸು ಹಾಸು, ನೋಟವಾಭರಣ,
ಆಲಿಂಗನ ವಸ್ತ್ರ, ಚುಂಬನವಾರೋಗಣೆ,
ಲಲ್ಲೆವಾತು ತಾಂಬೂಲ, ಲವಲವಿಕೆಯೇ ಅನುಲೇಪನವೆನಗೆ
ಚೆನ್ನಮಲ್ಲಿಕಾರ್ಜುನನ ಕೂಟ ಪರಮಸುಖವವ್ವ!

೧೬೮.
ಆಡುವುದು, ಪಾಡುವುದು; ಕೇಳುವುದು, ಹೇಳುವುದು
ನಗೆ-ನುಡಿ ಸರಸ ಸಮ್ಮೇಳನವಾಗಿಪ್ಪುದು ಶರಣರೊಡನೆ
ಚೆನ್ನಮಲ್ಲಿಕಾರ್ಜುನ ಕೊಟ್ಟ ಆಯುಷ್ಯ ಉಳ್ಳನ್ನಕ್ಕರ
ಲಿಂಗಸುಖಿಗಳ ಸಂಗದಲ್ಲಿ ದಿನಂಗಳ ಕಳೆವುದು!

೧೬೯.
ಜಂಗಮವೆನ್ನ ಪ್ರಾಣ, ಜಂಗಮವೆನ್ನ ಜೀವ!
ಜಂಗಮವೆನ್ನ ನಿಧಿನಿಧಾನ!
ಜಂಗಮವೆನ್ನ ಹರುಷದ ಮೇರೆ!
ಚೆನ್ನಮಲ್ಲಿಕಾರ್ಜುನ,
ಜಂಗಮದ ತಿಂಥಿಣಿಯಲ್ಲಿ ಓಲಾಡುವೆ

೧೭೦.
ಅರಿಯದವರೊಡನೆ ಸಂಗವ ಮಾಡಿದರೆ
ಕಲ್ಲು ಹೊಯ್ದು ಕಿಡಿಯ ತೆಗೆದುಕೊಂಬಂತೆ
ಬಲ್ಲವರೊಡನೆ ಸಂಗವ ಮಾಡಿದರೆ
ಮೊಸರ ಹೊಸೆದು ಬೆಣ್ಣೆಯ ತೆಗೆದುಕೊಂಬಂತೆ
ಚೆನ್ನಮಲ್ಲಿಕಾರ್ಜುನಯ್ಯ, ನಿಮ್ಮ ಶರಣರ ಸಂಗ
ಕರ್ಪುರಗಿರಿಯ ಉರಿಯು ಕೊಂಡಂತೆ

Comments

Popular posts from this blog

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ...

ಸರ್ವಜ್ಞನ ವಚನಗಳು - 1 ರಿಂದ 10

ಸರ್ವಜ್ಞನ ವಚನಗಳು -  1 ರಿಂದ 20 ೧. ನಂದಿಯನು ಏರಿದನ ಚಂದಿರನ ಮುಡಿದವನ ಕಂದನಂ ಬೇಡಿ ನೆನೆವುತ್ತ ಮುಂದೆ ಹೇಳುವೆನು ಸರ್ವಜ್ಞ ೨. ಮುನ್ನ ಕಾಲದಲಿ ಪನ್ನಗಧರನಾಳು ಎನ್ನೆಯ ಪೆಸರು, ಪುಷ್ಪದತ್ತನು ಎಂದು ಮನಿಪರು ದಯದಿ ಸರ್ವಜ್ಞ ೩. ಅಂದಿನ ಪುಷ್ಪದತ್ತ ಬಂದ ವರರುಚಿಯಾಗಿ ಮುದವ ಸಾರೆ, ಸರ್ವಜ್ಞನೆಂದೆನಿಸಿ ನಿಂದವನು ನಾನೆ ಸರ್ವಜ್ಞ ೪. ಸಣ್ಣನೆಯ ಮಳಲೊಳಗೆ ನುಣ್ಣನೆಯ ಶಿಲೆಯೊಳಗೆ ಬಣ್ಣೆಸಿಬರೆದ ಪಟದೊಳಗೆಯಿರುವಾತ ತಣ್ಣೊಳಗೆ ಇರನೇ ಸರ್ವಜ್ಞ ೫. ಹೊಲಸು ಮಾಂಸದ ಹುತ್ತ ಎಲುವಿನಾ ಹಂದರವು ಹೊಲೆಬಲಿದ ತನುವಿನೊಳಗಿರ್ದುಮದರೊಳಗೆ ಕುಲವನರಸುವರೆ ಸರ್ವಜ್ಞ ೬. ಎಲುವಿನೀ ಕಾಯಕ್ಕೆ ಸಲೆ ಚರ್ಮದ ಹೊದಿಕೆ ಮಲ ಮೂತ್ರ ಕ್ರಿಮಿಗಳೊಳಗಿರ್ದ ದೇಹಕ್ಕೆ ಕುಲವಾವುದಯ್ಯ ಸರ್ವಜ್ಞ ೭. ಸರ್ವಜ್ಞನೆಂಬುವನು ಗರ್ವದಿಂದಾದವನೆ ? ಸರ್ವರೊಳಗೊಂದು ನುಡಿಗಲಿತು ವಿದ್ಯೆಯ ಪರ್ವತವೇ ಆದ ಸರ್ವಜ್ಞ ೮. ಗುರುವಿನಾ ವಿಸ್ತರದ, ಪರಿಯನಾನೇನೆಂಬೆ ಮೆರೆವ ಬ್ರಹ್ಮಾಂಡದೊಳಹೊರಗೆ ಅವ ಬೆಳಗಿ ಪರಿಪೂರ್ಣನಿರ್ಪ ಸರ್ವಜ್ಞ ೯. ಊರಿಂಗೆ ದಾರಿಯನು ಆರು ತೋರಿದರೇನು? ಸಾರಾಯದಾ ನಿಜವ ತೋರುವ ಗುರುವು ತಾ ನಾರಾದರೇನು? ಸರ್ವಜ್ಞ ೧೦. ಪರತತ್ವ ತನ್ನೊಳಗೆ ಎರವಿಲ್ಲದಿರುತಿರ್ದು ಪರದೇಶಿಯಂತೆ ಇರುತಿರ್ಪಯೋಗಿಯನು ಪರಮಗುರುವೆಂಬೆ ಸರ್ವಜ್ಞ

ಅಕ್ಕನ ವಚನಗಳು - 301 ರಿಂದ 310 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೦೧. ಕಾಮನ ತಲೆಯ ಕೊರೆದು, ಕಾಲನ ಕಣ್ಣ ಕಳೆದು ಸೋಮಸೂರ್ಯರ ಹರಿದು ಹುಡಿಮಾಡಿ ತಿಂಬವಳಿಂಗೆ ನಾಮವನಿಡಬಲ್ಲವರಾರು ಹೇಳಿರೆ! ನೀ ಮದುವಳಿಗನಾಗಿ ನಾ ಮದುವಳಿಗಿತಿಯಾಗಿ ಯವನ(=ಆನಲನ?) ಕೂಡುವ ಮರುತನಂತೆ (?) ನೋಡಾ, ಶ್ರೀಗಿರಿ ಚೆನ್ನಮಲ್ಲಿಕಾರ್ಜುನ ೩೦೨. ಬಸವನ ಭಕ್ತಿ ಕೊಟ್ಟಣದ ಮನೆ ಸಿರಿಯಾಳನ ಭಕ್ತಿ ಕಸಬಗೇರಿ ಸಿಂಧುಬಲ್ಲಾಳನ ಭಕ್ತಿ ಪರದಾರದ್ರೋಹ ಉಳಿದಾದ[+ಟ}ಮಟ ಉದಾಸೀನ ದಾಸೋಹ ಮಾಡುವವರ ದೈನ್ಯವೆಂಬ ಭೂತ ಸೋಂಕಿತು ಮಣ್ಣಿನ ಮನೆಯ ಕಟ್ಟಿ ಮಾಯಾಮೋಹಿನಿಯೆಂಬ ಮಹೇಂದ್ರಜಾಲದೊಳಗಾಗಿ ಮಾಡುವ ಮಾಟ ಭಕ್ತನಲ್ಲಿ ಉಂಡು ಉದ್ದಂಡ ವೃತ್ತಿಯಲ್ಲಿ ನಡೆದವರು ಶಿವನಲ್ಲ ಇವರು ದೇವಲೋಕ ಮರ್ತ್ಯಲೋಕಕ್ಕೆ ಹೊರಗು ಶ್ರೀಗಿರಿ ಚೆನ್ನಮಲ್ಲಿಕಾರ್ಜುನ, ನನ್ನ ಭಕ್ತಿ ನಿನ್ನೊಳಗೈಕ್ಯವಾಯಿತಾಗಿ ನಿರ್ವಯಲಾದೆ ಕಾಣಾ! ೩೦೩. ಅನ್ನವ ನೀಡುವವರಿಗೆ ಧಾನ್ಯವೆ [ಶಿವ]ಲೋಕ ಅರ್ಥವ ಕೊಡುವವರಿಂಗೆ ಪಾಷಾಣವೆ [ಶಿವ]ಲೋಕ ಹೆಣ್ಣು-ಹೊನ್ನು-ಮಣ್ಣು ಮೂರನೂ ಕಣ್ಣಿನಲ್ಲಿ ನೋಡಿ, ಕಿವಿಯಲಿ ಕೇಳಿ ಕೈ[ಯಲಿ] ಮುಟ್ಟಿ ಮಾಡುವ ಭಕ್ತಿ ಸಣ್ಣವರ ಸಮಾರಾಧನೆಯಾಯಿತು ತನ್ನನಿತ್ತು ತುಷ್ಟಿವಡೆವರನೆನಗೆ ತ...