Skip to main content

ಅಕ್ಕನ ವಚನಗಳು - 171 ರಿಂದ 180 ರವರೆಗೆ

೧೭೧.
ಮರ ಮರ ಮಥನಿಸಿ ಕಿಚ್ಚು ಹುಟ್ಟಿ
ಸುತ್ತಣ ತರುಮರಾದಿಗಳ ಸುಡಲಾಯಿತ್ತು
ಆತ್ಮವಾತ್ಮ ಮಥನಿಸಿ ಅನುಭಾವ ಹುಟ್ಟಿ
ಹೊದ್ದಿರ್ದ ತನುಗುಣಾದಿಗಳ ಸುಡಲಾಯಿತ್ತು
ಇಂತಪ್ಪ ಮಹಾನುಭಾವರ ಅನುಭಾವವ ತೋರಿ
ಎನ್ನನುಳುಹಿಕೊಳ್ಳಾ, ಚೆನ್ನ ಮಲ್ಲಿಕಾರ್ಜುನ

೧೭೨.
ಸಂಗದಿಂದಲ್ಲದೇ ಅಗ್ನಿ ಹುಟ್ಟದು
ಸಂಗದಿಂದಲ್ಲದೇ ಬೀಜ ಮೊಳೆದೋರದು
ಸಂಗದಿಂದಲ್ಲದೇ ದೇಹವಾಗದು
ಸಂಗದಿಂದಲ್ಲದೇ ಸರ್ವಸುಖದೋರದು
ಚೆನ್ನಮಲ್ಲಿಕಾರ್ಜುನದೇವಯ್ಯ,
ನಿಮ್ಮ ಶರಣರ ಅನುಭವದ ಸಂಗದಿಂದಾನು
ಪರಮಸುಖಿಯಯ್ಯಾ

೧೭೩.
ಶಿವಭಕ್ತನ ಮನೆಯಂಗಳ
ವಾರಣಾಸಿ ಎಂಬುದು ಹುಸಿಯೆ?
ಶಿವಭಕ್ತನ ಮನೆಯಂಗಳದಲ್ಲಿ
ಅಷ್ಟಷಷ್ಟಿ ತೀರ್ಥಂಗಳು ನೆಲಸಿಪ್ಪವಾಗಿ
ಸುತ್ತಿಬರಲು ಶ್ರೀಶೈಲ, ಕಲಬಲದಲ್ಲಿ ಕೇದಾರ,
ಅಲ್ಲಿಂದ ಹೊರಗೆ ಶ್ರೀ ವಾರಣಾಸಿ
ವಿರಕ್ತಿ ಬೆದೆಯಾಗಿ, ಭಕ್ತಿ ಮೊಳೆಯಾಗಿ
ಎನ್ನ ದೇವ ಚೆನ್ನಮಲ್ಲಿಕಾರ್ಜುನ,
ನಿಮ್ಮ ಭಕ್ತನ ಮನೆಯಂಗಳ ವಾರಣಾಸಿಯಿಂದಧಿಕ ನೋಡಾ!

೧೭೪.
ಕಾಮನ ಗೆಲಿದೆನು, ಬಸವ, ನಿಮ್ಮ ದಯೆಯಿಂದ
ಸೋಮಧರನ ಹಿಡಿಪ್ಪೆತನು, ಬಸವ, ನಿಮ್ಮ ಕೃಪೆಯಿಂದ
ನಾಮದಲ್ಲಿ ಹೆಂಗೂಸೆಂಬ ಹೆಸರಾದಡೇನು?
ಭಾವಿಸಲು ಗಂಡು-ರೂಪು, ಬಸವ, ನಿಮ್ಮ ದಯದಿಂದದ
ಅತಿಕಾಮಿ ಚೆನ್ನಮಲ್ಲಿಕಾರ್ಜುನಯ್ಯಂಗೆ ತೊಡರನಿಕ್ಕಿ
ಎರಡರಿಯೆದೆ ಕೂಡಿದೆನು, ಬಸವ, ನಿಮ್ಮ ಕೃಪೆಯಿಂದ

೧೭೫.
ಅಂಗದ ಭಂಗವ ಲಿಂಗಮುಖದಿಂದ ಗೆಲಿದೆ
ಮನದ ಭಂಗವ ಅರಿವಿನ ಮುಖದಿಂದ ಗೆಲಿದೆ
ಜೀವದ ಭಂಗವ ಶಿವಾನುಭವದಿಂದ ಗೆಲಿದೆ
ಕರಣದ ಕತ್ತಲೆಯ ಬೆಳಗನುಟ್ಟು ಗೆಲಿದೆ
ಜವ್ವನದ ಹೊರಮಿಂಚಿನಲ್ಲಿ ನಿಮ್ಮ ಕಣ್ಣಿಗೆ ತೋರುವ
ಕಾಮನ ಸುಟ್ಟುರುಹಿದ ಭಸ್ಮವ ನೋಡಯ್ಯ
ಚೆನ್ನಮಲ್ಲಿಕಾರ್ಜುನ ಕಾಮನ ಕೊಂದು
ಮನಸಿಜನಾಗುಳುಹಿದರೆ
ಮನಸಿಜನ ತಲೆಯ ಬರಹವ ತೊಡೆದೆನು






೧೭೬.
ಎಲ್ಲರ ಗಂಡರ ಶೃಂಗಾರದ ಪರಿಯಲ್ಲ
ಎನ್ನ ನಲ್ಲನ ಶೃಂಗಾರದ ಪರಿ ಬೇರೆ
ಕರದಲ್ಲಿ ಕಂಕಣ, ಉರದ ಮೇಲಂದುಗೆ, ಕಿವಿಯಲ್ಲಿ ಹಾವುಗೆ
ಉಭಯ-ಸಿರಿವಂತನ ಮೊಣಕಾಲಲ್ಲಿ ಝಳವಟ್ಟಿಗೆ
ಉಂಗುಷ್ಠದಲ್ಲಿ ಮೂಕುತಿ ಅದು ಜಾಣರಿಗೆ ಜಗುಳಿಕೆ
ಚೆನ್ನಮಲ್ಲಿಕಾರ್ಜುನಯ್ಯನ ಶೃಂಗಾರದ ಪರಿ ಬೇರೆ!

೧೭೭.
ದೃಷ್ಟಿವರಿದುದು, ಮನ ನೆಲೆಗೊಂಡುದಿದೇನೋ!
ಆವನೆಂದರಿಯೆ ಭಾವ ನೆಟ್ಟುದವ್ವ!
ಕಳಿಯರಿದು ಅಂಗ ಗಸಣಿಯಾದುದು
ಇನ್ನಾರೆಂದಡೆ ಬಿಡೆ ಚೆನ್ನಮಲ್ಲಿಕಾರ್ಜುನಲಿಂಗವ

೧೭೮.
ತಲೆಯಲ್ಲಿ ನಿರಿ, ಟೊಂಕದಲ್ಲಿ ಮುಡಿ,
ಮೊಣಕಾಲಲ್ಲಿ ಕಿವಿಯೋಲೆ ಕಂಡೆ!
ಹರವಸದ ಉಡೂಗೆ, ಚಿಣ್ಣಂಗೆ ಹರವಸನ ಉಡುಗೆ!
ಏಕಾಂತದಲ್ಲಿ ಕೂಡಿ, ಮುಖವ ಕಂಡು
ಕಾಣದ ಚೆನ್ನಮಲ್ಲಿಕಾರ್ಜುನನ ನೆರೆವ ಪರಿ ಕರ ಹೊಸತು

೧೭೯.
ಭಾವಿಸಿ ನೋಡಿದೆಡೆ ಅಂಗವಾಯಿತ್ತು!
ಅಂಗಗುಣವಳಿದ ಬಳಿಕ ನಿನಗಂಗವಾದೆ
ಭಿನ್ನರುಚಿಯ ಬಿಟ್ಟು ಲಿಂಗರುಚಿಯಾದ ಬಳಿಕ
ಚೆನ್ನಮಲ್ಲಿಕಾರ್ಜುನನ ಕೊಂದು ಸಾವ ಭಾಷೆ!

೧೮೦.
ಕಾಯದೊಳಗೆ ಅಕಾಯವಾಯಿತ್ತು
ಜೀವದೊಳಗೆ ನಿರ್ಜೀವವಾಯಿತ್ತು
ಭಾವದೊಳಗೆ ನಿರ್ಭಾವವಾಯಿತ್ತು
ಎನ್ನ ಮನದೊಳಗೆ ಘನ ನೆನಹಾಯಿತ್ತು
ಎನ್ನ ತಲೆ-ಮೊಲೆಯ ನೋಡಿ ಸಲಹಿದಿರಾಗಿ
ಚೆನ್ನಮಲ್ಲಿಕಾರ್ಜುನಯ್ಯನ ಧರ್ಮದವಳಾನು

Comments

Popular posts from this blog

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ...

ಸರ್ವಜ್ಞನ ವಚನಗಳು - 1 ರಿಂದ 10

ಸರ್ವಜ್ಞನ ವಚನಗಳು -  1 ರಿಂದ 20 ೧. ನಂದಿಯನು ಏರಿದನ ಚಂದಿರನ ಮುಡಿದವನ ಕಂದನಂ ಬೇಡಿ ನೆನೆವುತ್ತ ಮುಂದೆ ಹೇಳುವೆನು ಸರ್ವಜ್ಞ ೨. ಮುನ್ನ ಕಾಲದಲಿ ಪನ್ನಗಧರನಾಳು ಎನ್ನೆಯ ಪೆಸರು, ಪುಷ್ಪದತ್ತನು ಎಂದು ಮನಿಪರು ದಯದಿ ಸರ್ವಜ್ಞ ೩. ಅಂದಿನ ಪುಷ್ಪದತ್ತ ಬಂದ ವರರುಚಿಯಾಗಿ ಮುದವ ಸಾರೆ, ಸರ್ವಜ್ಞನೆಂದೆನಿಸಿ ನಿಂದವನು ನಾನೆ ಸರ್ವಜ್ಞ ೪. ಸಣ್ಣನೆಯ ಮಳಲೊಳಗೆ ನುಣ್ಣನೆಯ ಶಿಲೆಯೊಳಗೆ ಬಣ್ಣೆಸಿಬರೆದ ಪಟದೊಳಗೆಯಿರುವಾತ ತಣ್ಣೊಳಗೆ ಇರನೇ ಸರ್ವಜ್ಞ ೫. ಹೊಲಸು ಮಾಂಸದ ಹುತ್ತ ಎಲುವಿನಾ ಹಂದರವು ಹೊಲೆಬಲಿದ ತನುವಿನೊಳಗಿರ್ದುಮದರೊಳಗೆ ಕುಲವನರಸುವರೆ ಸರ್ವಜ್ಞ ೬. ಎಲುವಿನೀ ಕಾಯಕ್ಕೆ ಸಲೆ ಚರ್ಮದ ಹೊದಿಕೆ ಮಲ ಮೂತ್ರ ಕ್ರಿಮಿಗಳೊಳಗಿರ್ದ ದೇಹಕ್ಕೆ ಕುಲವಾವುದಯ್ಯ ಸರ್ವಜ್ಞ ೭. ಸರ್ವಜ್ಞನೆಂಬುವನು ಗರ್ವದಿಂದಾದವನೆ ? ಸರ್ವರೊಳಗೊಂದು ನುಡಿಗಲಿತು ವಿದ್ಯೆಯ ಪರ್ವತವೇ ಆದ ಸರ್ವಜ್ಞ ೮. ಗುರುವಿನಾ ವಿಸ್ತರದ, ಪರಿಯನಾನೇನೆಂಬೆ ಮೆರೆವ ಬ್ರಹ್ಮಾಂಡದೊಳಹೊರಗೆ ಅವ ಬೆಳಗಿ ಪರಿಪೂರ್ಣನಿರ್ಪ ಸರ್ವಜ್ಞ ೯. ಊರಿಂಗೆ ದಾರಿಯನು ಆರು ತೋರಿದರೇನು? ಸಾರಾಯದಾ ನಿಜವ ತೋರುವ ಗುರುವು ತಾ ನಾರಾದರೇನು? ಸರ್ವಜ್ಞ ೧೦. ಪರತತ್ವ ತನ್ನೊಳಗೆ ಎರವಿಲ್ಲದಿರುತಿರ್ದು ಪರದೇಶಿಯಂತೆ ಇರುತಿರ್ಪಯೋಗಿಯನು ಪರಮಗುರುವೆಂಬೆ ಸರ್ವಜ್ಞ

ಅಕ್ಕನ ವಚನಗಳು - 301 ರಿಂದ 310 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೦೧. ಕಾಮನ ತಲೆಯ ಕೊರೆದು, ಕಾಲನ ಕಣ್ಣ ಕಳೆದು ಸೋಮಸೂರ್ಯರ ಹರಿದು ಹುಡಿಮಾಡಿ ತಿಂಬವಳಿಂಗೆ ನಾಮವನಿಡಬಲ್ಲವರಾರು ಹೇಳಿರೆ! ನೀ ಮದುವಳಿಗನಾಗಿ ನಾ ಮದುವಳಿಗಿತಿಯಾಗಿ ಯವನ(=ಆನಲನ?) ಕೂಡುವ ಮರುತನಂತೆ (?) ನೋಡಾ, ಶ್ರೀಗಿರಿ ಚೆನ್ನಮಲ್ಲಿಕಾರ್ಜುನ ೩೦೨. ಬಸವನ ಭಕ್ತಿ ಕೊಟ್ಟಣದ ಮನೆ ಸಿರಿಯಾಳನ ಭಕ್ತಿ ಕಸಬಗೇರಿ ಸಿಂಧುಬಲ್ಲಾಳನ ಭಕ್ತಿ ಪರದಾರದ್ರೋಹ ಉಳಿದಾದ[+ಟ}ಮಟ ಉದಾಸೀನ ದಾಸೋಹ ಮಾಡುವವರ ದೈನ್ಯವೆಂಬ ಭೂತ ಸೋಂಕಿತು ಮಣ್ಣಿನ ಮನೆಯ ಕಟ್ಟಿ ಮಾಯಾಮೋಹಿನಿಯೆಂಬ ಮಹೇಂದ್ರಜಾಲದೊಳಗಾಗಿ ಮಾಡುವ ಮಾಟ ಭಕ್ತನಲ್ಲಿ ಉಂಡು ಉದ್ದಂಡ ವೃತ್ತಿಯಲ್ಲಿ ನಡೆದವರು ಶಿವನಲ್ಲ ಇವರು ದೇವಲೋಕ ಮರ್ತ್ಯಲೋಕಕ್ಕೆ ಹೊರಗು ಶ್ರೀಗಿರಿ ಚೆನ್ನಮಲ್ಲಿಕಾರ್ಜುನ, ನನ್ನ ಭಕ್ತಿ ನಿನ್ನೊಳಗೈಕ್ಯವಾಯಿತಾಗಿ ನಿರ್ವಯಲಾದೆ ಕಾಣಾ! ೩೦೩. ಅನ್ನವ ನೀಡುವವರಿಗೆ ಧಾನ್ಯವೆ [ಶಿವ]ಲೋಕ ಅರ್ಥವ ಕೊಡುವವರಿಂಗೆ ಪಾಷಾಣವೆ [ಶಿವ]ಲೋಕ ಹೆಣ್ಣು-ಹೊನ್ನು-ಮಣ್ಣು ಮೂರನೂ ಕಣ್ಣಿನಲ್ಲಿ ನೋಡಿ, ಕಿವಿಯಲಿ ಕೇಳಿ ಕೈ[ಯಲಿ] ಮುಟ್ಟಿ ಮಾಡುವ ಭಕ್ತಿ ಸಣ್ಣವರ ಸಮಾರಾಧನೆಯಾಯಿತು ತನ್ನನಿತ್ತು ತುಷ್ಟಿವಡೆವರನೆನಗೆ ತ...