Skip to main content

ಅಕ್ಕನ ವಚನಗಳು - 181 ರಿಂದ 190 ರವರೆಗೆ

೧೮೧.
ಗಟ್ಟಿದುಪ್ಪಕ್ಕೆ ತಿಳಿದುಪ್ಪಕ್ಕೆ ಭೇದವುಂಟೇ ಅಯ್ಯ?
ದೀಪಕ್ಕೆ ದೀಪ್ತಿಗೆ ಭೇದವುಂಟೇ ಅಯ್ಯ?
ಆತ್ಮಕ್ಕೆ ಅಂಗಕ್ಕೆ ಭೇದವುಂಟೇ ಅಯ್ಯ
ಎನ್ನಂಗವನು ಶ್ರೀಗುರು ಮಂತ್ರವ ಮಾಡಿ ತೋರಿದನಾಗಿ
ಸಾವಯವಕ್ಕೆ ನಿರವಯವಕ್ಕೆ ಭಿನ್ನವಿಲ್ಲವಯ್ಯ!
ಚೆನ್ನಮಲ್ಲಿಕಾರ್ಜುನದೇವರ ಬೆರೆಸಿ ಮತಿಗೆಟ್ಟವಳ
ಏನ ನುಡಿಸುವಿರಯ್ಯ?

೧೮೨.
ಕೆಂಡವ ಶವದಂತೆ
ಸೂತ್ರ ತಪ್ಪಿದ ಬೊಂಬೆಯಂತೆ
ಜಲವರತ ತಟಾಕದಂತೆ
ಬೆಂದ ನುಲಿಯಂತೆ-
ಮತ್ತೆ ಹಿಂದಣಂಗ ಉಂಟೇ ಅಣ್ಣ
ಚೆನ್ನಮಲ್ಲಿಕಾರ್ಜುನನಂಗವೇ ಆಶ್ರಯವಾದವಳಿಗೆ?!

೧೮೩.
ಫಲ ಒಳಗೆ ಪಕ್ವವಾಗಿಯಲ್ಲದೆ
ಹೊರಗಣ ಸಿಪ್ಪೆ ಒಪ್ಪಗೆಡದು
ಕಾಮನ ಮುದ್ರೆಯ ಕಂಡು ನಿಮಗೆ ನೋವಾದೀತೆಂದು
ಆ ಭಾವದಿಂದ ಮುಚ್ಚಿದೆ
ಇದಕೆ ನೋವೇಕೆ?
ಕಾಡದಿರಣ್ಣ ಚೆನ್ನಮಲ್ಲಿಕಾರ್ಜುನದೇವನ ಒಳಗಾದವಳ

೧೮೪.
ನಾಣ ಮರೆಯ ನೂಲು ಸಡಿಲೆ ನಾಚುವರು ನೋಡಾ
ಗಂಡು-ಹೆಣ್ಣೆಂಬ ಜಾತಿ
ಪ್ರಾಣದೊಡೆಯ ಜಗದೊಳಗೆ ಮುಳುಗುತ್ತ ತೆರಹಿಲ್ಲದಿರಲು
ದೇವರ ಮುಂದೆ ನಾಚಲುಂಟೆ?
ಚೆನ್ನಮಲ್ಲಿಕಾರ್ಜುನಂಗೆ ಜಗವೆಲ್ಲ ಕಣ್ಣಾಗಿ ನೋಡುತ್ತಿರಲು
ಮುಚ್ಚಿ ಮೆರೆಸಬಹುದೆ ಹೇಳಯ್ಯ

೧೮೫.
ಎಲ್ಲಿ ಹೋದರೂ ಕಲಿಗೆ ಭಯವಿಲ್ಲ
ಹಂದೆಗೆ ಸುಖವಿಲ್ಲ ಕೇಳಿರಣ್ಣ!
ಈವಂಗವಗುಣವಿಲ್ಲ, ಕರುಣ ಉಳ್ಳವಂಗೆ ಪಾಪವಿಲ್ಲ
ಇನ್ನು ಪರಧನ-ಪರಸ್ತ್ರೀಯ ತೊರೆದಾತಂಗೆ
ಮುಂದೆ ಭವವಿಲ್ಲ, ಚೆನ್ನಮಲ್ಲಿಕಾರ್ಜುನ






೧೮೬.
ಸಿರಿಯಾಳಂಗೆ ಶಿವದಾಸಿಮಯ್ಯಂಗೆ ಬಸವಂಗೆ
ಆದ ರೇಖೆಯ ಬಿಟ್ಟು ಜೂಜನಾಡರೆ ನಮ್ಮವರಂದು?
ಒಬ್ಬಂಗೆ ಮಗನ ರಪಣ
ಒಬ್ಬಂಗೆ ಸೀರೆಯ ರಪಣ
ಒಬ್ಬಂಗೆ ತನು-ಮನ-ಧನ ರಪಣ
ಮೂವರೂ ಮೂದಲಿಸಿ ಮುಕ್ಕಣ್ಣನ ಗೆಲಿದರು
ಎನ್ನ ದೇವ ಚೆನ್ನಮಲ್ಲಿಕಾರ್ಜುನ

೧೮೭.
ಪ್ರಾಣಲಿಂಗವೆಂದರಿದ ಬಳಿಕ
ಪ್ರಾಣದಾಸೆ ಹಿಂಗಿತ್ತು
ಲಿಂಗಪ್ರಾಣವೆಂದರಿದ ಬಳಿಕ
ಅಂಗದಾಸೆ ಹಿಂಗಿತ್ತು
ಲಿಂಗಸೋಂಕಿನ ಸಂಗಿಗೆ-ಕಂಗಲೇ ಕರುವಾಗಿರ್ದವಯ್ಯ
ಚೆನ್ನಮಲ್ಲಿಕಾರ್ಜುನನ ಹಿಂಗದೆ ಅನಿಮಿಷವಾಗಿಹ ಶರಣಂಗೆ

೧೮೮.
ಕರಸ್ಥಲಕ್ಕೆ ಲಿಂಗಸ್ವಾಯತವಾದ ಬಳಿಕ
ಕಾಯಕ ನಿವೃತ್ತಿಯಾಗಬೇಕು
ಅಂಗದಲಳವಟ್ಟ ಲಿಂಗ ಲಿಂಗೈಕ್ಯಂಗೆ
ಅಂಗಸಂಗ ಮತ್ತೆಲ್ಲಿಯದು?
ಮಹಾಘನವನರಿದ ಮಹಂತರಿಗೆ
ಮಾಯವೆಲ್ಲಿಯದೋ ಚೆನ್ನಮಲ್ಲಿಕಾರ್ಜುನ?

೧೮೯.
ಕಟ್ಟಿದ ಕೆರೆಗೆ ಕೋಡಿ ಮಾಣದು
ಹುಟ್ಟಿದ ಪ್ರಾಣಿಗೆ ಪ್ರಳಯ ತಪ್ಪದಿನ್ನೆಂತಯ್ಯ
ಅರುಹಿರಿಯರೆಲ್ಲಾ ವೃಥಾ ಕೆಟ್ಟುಹೋದರಿನ್ನೆಂತಯ್ಯ
ಚೆನ್ನಮಲ್ಲಿಕಾರ್ಜುನದೇವನ
ಗೊತ್ತ ಮುಟ್ಟಿದವರೆಲ್ಲರೂ ನಿಶ್ಚಿಂತರಾದರು

೧೯೦.
ಊರ ನಡುವೆ ಒಂದು ಬೇಂಟೆ ಬಿದ್ದಿತ್ತು
ಆರು ಕಂಡವರು ಕೊಡಿರಯ್ಯಾ
ಊರಿಗೆ ದೂರುವೆನಗುಸೆಯನಿಕ್ಕುವೆ
ಅರಿತು ಅರಿಯದೆ ಒಂದು ಬೇಂಟೆಯನಾಡಿದೆನು
ಅರಸಿಕೊಡಯ್ಯ ಚೆನ್ನಮಲ್ಲಿಕಾರ್ಜುನ

Comments

Popular posts from this blog

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ...

ಸರ್ವಜ್ಞನ ವಚನಗಳು - 1 ರಿಂದ 10

ಸರ್ವಜ್ಞನ ವಚನಗಳು -  1 ರಿಂದ 20 ೧. ನಂದಿಯನು ಏರಿದನ ಚಂದಿರನ ಮುಡಿದವನ ಕಂದನಂ ಬೇಡಿ ನೆನೆವುತ್ತ ಮುಂದೆ ಹೇಳುವೆನು ಸರ್ವಜ್ಞ ೨. ಮುನ್ನ ಕಾಲದಲಿ ಪನ್ನಗಧರನಾಳು ಎನ್ನೆಯ ಪೆಸರು, ಪುಷ್ಪದತ್ತನು ಎಂದು ಮನಿಪರು ದಯದಿ ಸರ್ವಜ್ಞ ೩. ಅಂದಿನ ಪುಷ್ಪದತ್ತ ಬಂದ ವರರುಚಿಯಾಗಿ ಮುದವ ಸಾರೆ, ಸರ್ವಜ್ಞನೆಂದೆನಿಸಿ ನಿಂದವನು ನಾನೆ ಸರ್ವಜ್ಞ ೪. ಸಣ್ಣನೆಯ ಮಳಲೊಳಗೆ ನುಣ್ಣನೆಯ ಶಿಲೆಯೊಳಗೆ ಬಣ್ಣೆಸಿಬರೆದ ಪಟದೊಳಗೆಯಿರುವಾತ ತಣ್ಣೊಳಗೆ ಇರನೇ ಸರ್ವಜ್ಞ ೫. ಹೊಲಸು ಮಾಂಸದ ಹುತ್ತ ಎಲುವಿನಾ ಹಂದರವು ಹೊಲೆಬಲಿದ ತನುವಿನೊಳಗಿರ್ದುಮದರೊಳಗೆ ಕುಲವನರಸುವರೆ ಸರ್ವಜ್ಞ ೬. ಎಲುವಿನೀ ಕಾಯಕ್ಕೆ ಸಲೆ ಚರ್ಮದ ಹೊದಿಕೆ ಮಲ ಮೂತ್ರ ಕ್ರಿಮಿಗಳೊಳಗಿರ್ದ ದೇಹಕ್ಕೆ ಕುಲವಾವುದಯ್ಯ ಸರ್ವಜ್ಞ ೭. ಸರ್ವಜ್ಞನೆಂಬುವನು ಗರ್ವದಿಂದಾದವನೆ ? ಸರ್ವರೊಳಗೊಂದು ನುಡಿಗಲಿತು ವಿದ್ಯೆಯ ಪರ್ವತವೇ ಆದ ಸರ್ವಜ್ಞ ೮. ಗುರುವಿನಾ ವಿಸ್ತರದ, ಪರಿಯನಾನೇನೆಂಬೆ ಮೆರೆವ ಬ್ರಹ್ಮಾಂಡದೊಳಹೊರಗೆ ಅವ ಬೆಳಗಿ ಪರಿಪೂರ್ಣನಿರ್ಪ ಸರ್ವಜ್ಞ ೯. ಊರಿಂಗೆ ದಾರಿಯನು ಆರು ತೋರಿದರೇನು? ಸಾರಾಯದಾ ನಿಜವ ತೋರುವ ಗುರುವು ತಾ ನಾರಾದರೇನು? ಸರ್ವಜ್ಞ ೧೦. ಪರತತ್ವ ತನ್ನೊಳಗೆ ಎರವಿಲ್ಲದಿರುತಿರ್ದು ಪರದೇಶಿಯಂತೆ ಇರುತಿರ್ಪಯೋಗಿಯನು ಪರಮಗುರುವೆಂಬೆ ಸರ್ವಜ್ಞ

ಅಕ್ಕನ ವಚನಗಳು - 301 ರಿಂದ 310 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೦೧. ಕಾಮನ ತಲೆಯ ಕೊರೆದು, ಕಾಲನ ಕಣ್ಣ ಕಳೆದು ಸೋಮಸೂರ್ಯರ ಹರಿದು ಹುಡಿಮಾಡಿ ತಿಂಬವಳಿಂಗೆ ನಾಮವನಿಡಬಲ್ಲವರಾರು ಹೇಳಿರೆ! ನೀ ಮದುವಳಿಗನಾಗಿ ನಾ ಮದುವಳಿಗಿತಿಯಾಗಿ ಯವನ(=ಆನಲನ?) ಕೂಡುವ ಮರುತನಂತೆ (?) ನೋಡಾ, ಶ್ರೀಗಿರಿ ಚೆನ್ನಮಲ್ಲಿಕಾರ್ಜುನ ೩೦೨. ಬಸವನ ಭಕ್ತಿ ಕೊಟ್ಟಣದ ಮನೆ ಸಿರಿಯಾಳನ ಭಕ್ತಿ ಕಸಬಗೇರಿ ಸಿಂಧುಬಲ್ಲಾಳನ ಭಕ್ತಿ ಪರದಾರದ್ರೋಹ ಉಳಿದಾದ[+ಟ}ಮಟ ಉದಾಸೀನ ದಾಸೋಹ ಮಾಡುವವರ ದೈನ್ಯವೆಂಬ ಭೂತ ಸೋಂಕಿತು ಮಣ್ಣಿನ ಮನೆಯ ಕಟ್ಟಿ ಮಾಯಾಮೋಹಿನಿಯೆಂಬ ಮಹೇಂದ್ರಜಾಲದೊಳಗಾಗಿ ಮಾಡುವ ಮಾಟ ಭಕ್ತನಲ್ಲಿ ಉಂಡು ಉದ್ದಂಡ ವೃತ್ತಿಯಲ್ಲಿ ನಡೆದವರು ಶಿವನಲ್ಲ ಇವರು ದೇವಲೋಕ ಮರ್ತ್ಯಲೋಕಕ್ಕೆ ಹೊರಗು ಶ್ರೀಗಿರಿ ಚೆನ್ನಮಲ್ಲಿಕಾರ್ಜುನ, ನನ್ನ ಭಕ್ತಿ ನಿನ್ನೊಳಗೈಕ್ಯವಾಯಿತಾಗಿ ನಿರ್ವಯಲಾದೆ ಕಾಣಾ! ೩೦೩. ಅನ್ನವ ನೀಡುವವರಿಗೆ ಧಾನ್ಯವೆ [ಶಿವ]ಲೋಕ ಅರ್ಥವ ಕೊಡುವವರಿಂಗೆ ಪಾಷಾಣವೆ [ಶಿವ]ಲೋಕ ಹೆಣ್ಣು-ಹೊನ್ನು-ಮಣ್ಣು ಮೂರನೂ ಕಣ್ಣಿನಲ್ಲಿ ನೋಡಿ, ಕಿವಿಯಲಿ ಕೇಳಿ ಕೈ[ಯಲಿ] ಮುಟ್ಟಿ ಮಾಡುವ ಭಕ್ತಿ ಸಣ್ಣವರ ಸಮಾರಾಧನೆಯಾಯಿತು ತನ್ನನಿತ್ತು ತುಷ್ಟಿವಡೆವರನೆನಗೆ ತ...