Skip to main content

ಅಕ್ಕನ ವಚನಗಳು - 61 ರಿಂದ 70 ರವರೆಗೆ

೬೧.
ಪೃಥ್ವಿಯ ಗೆಲಿದ ಏಲೇಶ್ವರನ ನಾನು ಕಂಡೆ
ಭಾವಭ್ರಮೆಯ ಗೆಲಿದ ಬ್ರಹ್ಮೇಶ್ವರನ ನಾನು ಕಂಡೆ
ಸತ್ವ-ರಜ-ತಮ-ತ್ರಿವಿಧವ ಗೆಲಿದ ತ್ರಿಪುರಾಂತಕನ ಕಂಡೆ
ಅಂತರಂಗ-ಆತ್ಮಜ್ಞಾನದಿಂದ ಜ್ಯೋತಿಸಿದ್ಧಯ್ಯನ ನಾನು ಕಂಡೆ
ಇವರೆಲ್ಲರ ಮಧ್ಯಸ್ಥಾನ ಪ್ರಾಣಲಿಂಗವೆಂದು
ಸುಜ್ಞಾನದಲ್ಲಿ ತೋರಿದ ಆ ಬಸವಣ್ಣನ ಪ್ರಸಾದದಿಂದ
ಚೆನ್ನಮಲ್ಲಿಕಾರ್ಜುನನ ಕಂಡೆನಯ್ಯ
೬೨.
ಅಪಾರ ಗಂಭೀರದ ಅಂಬುಧಿಯಲ್ಲಿ
ತಾರಾಪಥವ ನೋಡಿ ನಡೆಯೆ
ಭೈತ್ರದಿಂದ ದ್ವೀಪಾಂತರಕ್ಕೆ ಸಕಲಪದಾರ್ಥನವೆಯ್ದಿಸುವುದು
ಎನ್ನ ದೇವ ಚೆನ್ನಮಲ್ಲಿಕಾರ್ಜುನಯ್ಯನ ಸಮೀಪ
ತುರ್ಯಸಂಭಾಷಣೆಯನರಿದಡೆ ಮುನ್ನಿನಲ್ಲಿಗೆಯ್ದಿಸುವುದು
೬೩.
ಕ್ರೀಯೊಳ್ಳುಡೊಂತೊಂದಾಸೆ
ಸದ್ಭಕ್ತರ ನುಡಿಗಡಣ ಉಳ್ಳೊಡಂತೊಂದಾಸೆ
ಶ್ರೀಗಿರಿಯನೇರಿ ನಿಮ್ಮ ಬೆರೆಸಿದರೆ ಎನ್ನಾಸೆಗೆ ಕಡೆಯೇ ಅಯ್ಯ?
ಆವಾಸೆಯೂ ಇಲ್ಲದೆ ನಿಮ್ಮ ನಂಬಿ ಬಂದು ಕೆಟ್ಟೆನಯ್ಯ
೬೪.
ಆರೂ ಇಲ್ಲದವಳೆಂದು
ಅಳಿಗೊಳಲು ಬೇಡ ಕಂಡಯ್ಯ
ಏನ ಮಾಡಿದೆಡೆಯೂ ನಾನಂಜುವಳಲ್ಲ!
ತರಗೆಲೆಯ ಮೆಲಿದು ನಾನಿಹೆನು
ಸುರಗಿಯ ಮೇಲೆರಗಿ ನಾನಿಹೆನು
ಚೆನ್ನಮಲ್ಲಿಕಾರ್ಜುನಯ್ಯ
ಕರ ಕಡೆ ನೋಡಿದಡೆ
ಒಡಲನೂ ಪ್ರಾಣವನೂ ನಿಮಗೊಪ್ಪಿಸಿ ಶುದ್ಧಳಿಹೆನು
೬೫.
ಕಿಡಿಕಿಡಿ ಕೆದರಿದಡೆ
ಎನಗೆ ಹಸಿವು ತೃಷೆ ಅಡಗಿತ್ತೆಂಬೆನು
ಮುಗಿಲು ಹರಿದು ಬಿದ್ದಡೆ
ಎನಗೆ ಮಜ್ಜನಕ್ಕೆರೆದರೆಂಬೆನು
ಗಿರಿ ಮೇಲೆ ಬಿದ್ದಡೆ ಎನಗೆ ಪುಷ್ಪವೆಂಬೆನು
ಚೆನ್ನಮಲ್ಲಿಕಾರ್ಜುನಯ್ಯ, ಶಿರ ಹರಿದು ಬಿದ್ದಡೆ ಪ್ರಾಣ
ನಿಮಗರ್ಪಿತವೆಂಬೆನು






೬೬.
ನಚ್ಚುಗೆ ಮನ ನಿಮ್ಮಲ್ಲಿ ಮೆಚ್ಚುಗೆ ಮನ ನಿಮ್ಮಲ್ಲಿ
ಸಲುಗೆ ಮನ ನಿಮ್ಮಲ್ಲಿ ಸೋಲುಗೆ ಮನ ನಿಮ್ಮಲ್ಲಿ
ಅಳಲುಗೆ ಮನ ನಿಮ್ಮಲ್ಲಿ ಬಳಲುಗೆ ಮನ ನಿಮ್ಮಲ್ಲಿ
ಕರಗುಗೆ ಮನ ನಿಮ್ಮಲ್ಲಿ ಕೊರಗುಗೆ ಮನ ನಿಮ್ಮಲ್ಲಿ
ಎನ್ನ ಪಂಚೇದ್ರಿಯಗಳು ಕಬ್ಬುನ ಉಂಡ ನೀರಿನಂತೆ
ನಿಮ್ಮಲ್ಲಿ ಬೆರೆಸುಗೆ ಚೆನ್ನಮಲ್ಲಿಕಾರ್ಜುನಯ್ಯ
೬೭.
ಒಡಲಿಲ್ಲದ, ನುಡಿಯಿಲ್ಲದ, ಕಡೆಯಿಲ್ಲದ
ನಲ್ಲನ ಒಡಗೂಡಿ ಸುಖಿಯಾದೆ ಕೇಳಿರಯ್ಯ
ಭಾಷೆ ಪೈಸರವಿಲ್ಲ ಓಸರಿಸೆನನ್ಯಕ್ಕೆ
ಆಸೆ ಮಾಡೆನು ಮತ್ತೆ ಭಿನ್ನ ಸುಖಕ್ಕೆ
ಆರಳಿದು ಮೂರಾಗಿ, ಮೂರಳಿದು ಎರಡಾಗಿ,
ಎರಡಳಿದು ಒಂದಾಗಿ ನಿಂದೆನಯ್ಯ
ಬಸವಣ್ಣ ಮೊದಲಾದ ಶರಣರಿಗೆ ಶರಣಾರ್ಥಿ
ಪ್ರಭುವಿನಿಂದ ಕೃತಕೃತ್ಯಳಾದೆನು ನಾನು
ಮರೆಯಲಾಗದು ನಾನು ನಿಮ್ಮ ಶಿಶುವೆಂದು
ಚೆನ್ನಮಲ್ಲಿಕಾರ್ಜುನನ ಬೆರೆಸೆಂದು
ಎನ್ನ ಹರಸುತ್ತಿಹುದು
೬೮.
ಹೊಳೆವ ಕೆಂಜೆಡೆಗಳ ಮಣಿಮುಕುಟದ
ಒಪ್ಪುವ ಸುಲಿಪಲ್ಗಳ ನಗೆಮೊಗದ
ಕಂಗಳ ಕಾಂತಿಯಿಂ ಈರೇಳು ಭುವನಮಂ ಬೆಳಗುವ
ದಿವ್ಯ ಸ್ವರೂಪನಂ ಕಂಡೆ ನಾನು
ಕಂಡೆನ್ನ ಕಂಗಳ ಬರ ಹಿಂಗಿತ್ತೆಂದೆನಗೆ
ಗಂಡ ಗಂಡರನ್ನೆಲ್ಲ ಹೆಂಡಹೆಂಡಿರಾಗಿ ಆಳುವ
ಗುರುವನ ಕಂಡೆ ನಾನು !
ಜಗದಾದಿ ಶಕ್ತಿಯೊಳು ಬೆರೆಸಿ ಒಡನಾಡುವ
ಪರಮ ಗುರು ಚೆನ್ನಮಲ್ಲಿಕಾರ್ಜುನನ ನಿಲುವ ಕಂಡು ಬದುಕಿದೆನು
೬೯.
ಕಿಚ್ಚಿಲ್ಲದ ಬೇಗೆಯಲಿ ಬೆಂದೆನವ್ವ
ಏರಿಲ್ಲದ ಘಾಯದಲಿ ನೊಂದೆನವ್ವ
ಸುಖವಿಲ್ಲದ ಧಾವತಿಗೊಂಡೆನವ್ವ
ಚೆನ್ನಮಲ್ಲಿಕಾರ್ಜುನದೇವಂಗೊಲಿದು
ಬಾರದ ಭವಂಗಳಲಿ ಬಂದೆನವ್ವ
೭೦.
ಬೆರಸುವಡೆ ಬೇಗ ತೋರ! ಹೊರಹಾಕದಿರಯ್ಯ!
ನಿಮ್ಮಲ್ಲಿಗೆ ಸಲೆ ಸಂದ ತೊತ್ತಾನು, ಎನ್ನ ಹೊರಹಾಕದಿರಯ್ಯ
ಚೆನ್ನಮಲ್ಲಿಕಾರ್ಜುನಯ್ಯ, ನಿಮ್ಮ ನಂಬಿ
ಬೆಂಬಳಿ ಬಂದೆನು ಇಂಬುಗೊಳ್ಳಯ್ಯ ಬೇಗದಲಿ

Comments

Popular posts from this blog

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ...

ಸರ್ವಜ್ಞನ ವಚನಗಳು - 1 ರಿಂದ 10

ಸರ್ವಜ್ಞನ ವಚನಗಳು -  1 ರಿಂದ 20 ೧. ನಂದಿಯನು ಏರಿದನ ಚಂದಿರನ ಮುಡಿದವನ ಕಂದನಂ ಬೇಡಿ ನೆನೆವುತ್ತ ಮುಂದೆ ಹೇಳುವೆನು ಸರ್ವಜ್ಞ ೨. ಮುನ್ನ ಕಾಲದಲಿ ಪನ್ನಗಧರನಾಳು ಎನ್ನೆಯ ಪೆಸರು, ಪುಷ್ಪದತ್ತನು ಎಂದು ಮನಿಪರು ದಯದಿ ಸರ್ವಜ್ಞ ೩. ಅಂದಿನ ಪುಷ್ಪದತ್ತ ಬಂದ ವರರುಚಿಯಾಗಿ ಮುದವ ಸಾರೆ, ಸರ್ವಜ್ಞನೆಂದೆನಿಸಿ ನಿಂದವನು ನಾನೆ ಸರ್ವಜ್ಞ ೪. ಸಣ್ಣನೆಯ ಮಳಲೊಳಗೆ ನುಣ್ಣನೆಯ ಶಿಲೆಯೊಳಗೆ ಬಣ್ಣೆಸಿಬರೆದ ಪಟದೊಳಗೆಯಿರುವಾತ ತಣ್ಣೊಳಗೆ ಇರನೇ ಸರ್ವಜ್ಞ ೫. ಹೊಲಸು ಮಾಂಸದ ಹುತ್ತ ಎಲುವಿನಾ ಹಂದರವು ಹೊಲೆಬಲಿದ ತನುವಿನೊಳಗಿರ್ದುಮದರೊಳಗೆ ಕುಲವನರಸುವರೆ ಸರ್ವಜ್ಞ ೬. ಎಲುವಿನೀ ಕಾಯಕ್ಕೆ ಸಲೆ ಚರ್ಮದ ಹೊದಿಕೆ ಮಲ ಮೂತ್ರ ಕ್ರಿಮಿಗಳೊಳಗಿರ್ದ ದೇಹಕ್ಕೆ ಕುಲವಾವುದಯ್ಯ ಸರ್ವಜ್ಞ ೭. ಸರ್ವಜ್ಞನೆಂಬುವನು ಗರ್ವದಿಂದಾದವನೆ ? ಸರ್ವರೊಳಗೊಂದು ನುಡಿಗಲಿತು ವಿದ್ಯೆಯ ಪರ್ವತವೇ ಆದ ಸರ್ವಜ್ಞ ೮. ಗುರುವಿನಾ ವಿಸ್ತರದ, ಪರಿಯನಾನೇನೆಂಬೆ ಮೆರೆವ ಬ್ರಹ್ಮಾಂಡದೊಳಹೊರಗೆ ಅವ ಬೆಳಗಿ ಪರಿಪೂರ್ಣನಿರ್ಪ ಸರ್ವಜ್ಞ ೯. ಊರಿಂಗೆ ದಾರಿಯನು ಆರು ತೋರಿದರೇನು? ಸಾರಾಯದಾ ನಿಜವ ತೋರುವ ಗುರುವು ತಾ ನಾರಾದರೇನು? ಸರ್ವಜ್ಞ ೧೦. ಪರತತ್ವ ತನ್ನೊಳಗೆ ಎರವಿಲ್ಲದಿರುತಿರ್ದು ಪರದೇಶಿಯಂತೆ ಇರುತಿರ್ಪಯೋಗಿಯನು ಪರಮಗುರುವೆಂಬೆ ಸರ್ವಜ್ಞ

ಅಕ್ಕನ ವಚನಗಳು - 301 ರಿಂದ 310 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೦೧. ಕಾಮನ ತಲೆಯ ಕೊರೆದು, ಕಾಲನ ಕಣ್ಣ ಕಳೆದು ಸೋಮಸೂರ್ಯರ ಹರಿದು ಹುಡಿಮಾಡಿ ತಿಂಬವಳಿಂಗೆ ನಾಮವನಿಡಬಲ್ಲವರಾರು ಹೇಳಿರೆ! ನೀ ಮದುವಳಿಗನಾಗಿ ನಾ ಮದುವಳಿಗಿತಿಯಾಗಿ ಯವನ(=ಆನಲನ?) ಕೂಡುವ ಮರುತನಂತೆ (?) ನೋಡಾ, ಶ್ರೀಗಿರಿ ಚೆನ್ನಮಲ್ಲಿಕಾರ್ಜುನ ೩೦೨. ಬಸವನ ಭಕ್ತಿ ಕೊಟ್ಟಣದ ಮನೆ ಸಿರಿಯಾಳನ ಭಕ್ತಿ ಕಸಬಗೇರಿ ಸಿಂಧುಬಲ್ಲಾಳನ ಭಕ್ತಿ ಪರದಾರದ್ರೋಹ ಉಳಿದಾದ[+ಟ}ಮಟ ಉದಾಸೀನ ದಾಸೋಹ ಮಾಡುವವರ ದೈನ್ಯವೆಂಬ ಭೂತ ಸೋಂಕಿತು ಮಣ್ಣಿನ ಮನೆಯ ಕಟ್ಟಿ ಮಾಯಾಮೋಹಿನಿಯೆಂಬ ಮಹೇಂದ್ರಜಾಲದೊಳಗಾಗಿ ಮಾಡುವ ಮಾಟ ಭಕ್ತನಲ್ಲಿ ಉಂಡು ಉದ್ದಂಡ ವೃತ್ತಿಯಲ್ಲಿ ನಡೆದವರು ಶಿವನಲ್ಲ ಇವರು ದೇವಲೋಕ ಮರ್ತ್ಯಲೋಕಕ್ಕೆ ಹೊರಗು ಶ್ರೀಗಿರಿ ಚೆನ್ನಮಲ್ಲಿಕಾರ್ಜುನ, ನನ್ನ ಭಕ್ತಿ ನಿನ್ನೊಳಗೈಕ್ಯವಾಯಿತಾಗಿ ನಿರ್ವಯಲಾದೆ ಕಾಣಾ! ೩೦೩. ಅನ್ನವ ನೀಡುವವರಿಗೆ ಧಾನ್ಯವೆ [ಶಿವ]ಲೋಕ ಅರ್ಥವ ಕೊಡುವವರಿಂಗೆ ಪಾಷಾಣವೆ [ಶಿವ]ಲೋಕ ಹೆಣ್ಣು-ಹೊನ್ನು-ಮಣ್ಣು ಮೂರನೂ ಕಣ್ಣಿನಲ್ಲಿ ನೋಡಿ, ಕಿವಿಯಲಿ ಕೇಳಿ ಕೈ[ಯಲಿ] ಮುಟ್ಟಿ ಮಾಡುವ ಭಕ್ತಿ ಸಣ್ಣವರ ಸಮಾರಾಧನೆಯಾಯಿತು ತನ್ನನಿತ್ತು ತುಷ್ಟಿವಡೆವರನೆನಗೆ ತ...