Skip to main content

ಅಲ್ಲಮಪ್ರಭುವಿನ ವಚನಗಳು : 101 ರಿಂದ 110

೧೦೧.
ಪ್ರಣವಮಂತ್ರವ ಕರ್ಣದಲಿ ಹೇಳಿ
ಶ್ರೀಗುರು ಶಿಷ್ಯನ ಅಂಗದ ಮೇಲೆ
ಲಿಂಗಪ್ರತಿಷ್ಠೆಯ ಮಾಡಿದ ಬಳಿಕ
ಪ್ರಾಣದಲಿ ಲಿಂಗವಿಪ್ಪುದೆಂಬ
ವ್ರತಗೇಡಿಗಳ ಮಾತ ಕೇಳಲಾಗದು.
ಒಳಗಿಪ್ಪನೇ ಲಿಂಗದೇವನು
ಮಲ-ಮೂತ್ರ-ಮಾಂಸದ ಹೇಸಿಕೆಯೊಳಗೆ ?
ಅಲ್ಲಿ ಪ್ರಾಣವಿಪ್ಪುದಲ್ಲದೆ ಲಿಂಗವಿಪ್ಪುದೇ ?
ಆ ಪ್ರಾಣವ ತಂದು
ತನ್ನ ಇಷ್ಟಲಿಂಗದಲ್ಲಿರಿಸಿ ನೆರೆಯ ಬಲ್ಲಡೆ
ಆತನೆ ಪ್ರಾಣಲಿಂಗಸಂಬಂಧಿ !
ಅಲ್ಲದವರ ಮೆಚ್ಚುವನೆ ನಮ್ಮ ಗುಹೇಶ್ವರಲಿಂಗವು ?

೧೦೨.
ಕದಳಿಯ ಬನವ ಹೊಕ್ಕು
ಹೊಲಬ ತಿಳಿಯದನ್ನಕ್ಕ,
ಬಯಲ ಗಾಳಿಯ ಹಿಡಿದು
ಘಟ್ಟಿ ಮಾಡದನ್ನಕ್ಕ,
ಬಱಿದೆ ಬಹುದೇ ಶಿವಜ್ಞಾನ ?
ಷಡುವರ್ಗವಳಿಯದನ್ನಕ್ಕ
ಅಷ್ಟಮದವಳಿಯದನ್ನಕ್ಕ
ಬಱಿದೆ ಬಹುದೇ ಶಿವಸಂಪದ ?
ಮದಮತ್ಸರವ ಮಾಡಲಿಲ್ಲ !
ಹೊದಕುಳಿಗೊಳಲಿಲ್ಲ
ಗುಹೇಶ್ವರಲಿಂಗ ಕಲ್ಪಿತದೊಳಗಲ್ಲ !

೧೦೩.
ಶಬ್ದ ಸ್ಪರ್ಶ ರೂಪ ರಸ ಗಂಧ
ಪಂಚೇಂದ್ರಿಯ ಸಪ್ತಧಾತು ಅಷ್ಟಮದದಿಂದ
ಮುಂದುಗಾಣದವರು ನೀವು ಕೇಳಿರೇ !
ಲಿಂಗವಾರ್ತೆಯ ವಚನರಚನೆಯ
ಮಾತನಾಡುವಿರಯ್ಯ !
ಸಂಸಾರದ ಮುಚ್ಚು ಬಿಡದನ್ನಕ್ಕರ
ಸೂಕ್ಷ್ಮಶಿವಪಥವು ಸಾಧ್ಯವಾಗದು.
ಗುಹೇಶ್ವರಲಿಂಗದಲಿ
ವಾಕು ಪಾಕವಾದಡೇನು ?
ಮನ ಪಾಕವಾಗದನ್ನಕ್ಕರ ?!

೧೦೪.
ಮರ್ತ್ಯಲೋಕದ ಮಾನವರು
ದೇಗುಲದೊಳಗೊಂದು ದೇವರ ಮಾಡಿದಡೆ
ಆನು ಬೆಱಗಾದೆನಯ್ಯ !
ನಿಚ್ಚಕ್ಕೆ ನಿಚ್ಚ ಅರ್ಚನೆಪೂಜನೆಯ ಮಾಡಿಸಿ
ಭೋಗವ ಮಾಡುವರ ಕಂಡು ನಾನು ಬೆಱಗಾದೆನು
ಗುಹೇಶ್ವರ,
ನಿಮ್ಮ ಶರಣರು ಹಿಂದೆ ಲಿಂಗವನಿರಿಸಿ ಹೋದರು.

೧೦೫.
ಭಾವದಲೊಬ್ಬ ದೇವರ ಮಾಡಿ
ಮನದಲೊಂದು ಭಕ್ತಿಯ ಮಾಡಿ
ಕಾಯದ ಕೈಯಲ್ಲಿ ಕಾರ್ಯವುಂಟೆ ?
ವಾಯಕ್ಕೆ ಬಳಲುವರು ನೋಡಾ !
ಎತ್ತನೇಱಿ ಎತ್ತನಱಸುವರು ಎತ್ತ ಹೋದರೈ
ಗುಹೇಶ್ವರ ?

೧೦೬.
ಹೊಟ್ಟೆಯ ಮೇಲೆ
ಕಟ್ಟೋಗರದ ಮೊಟ್ಟೆಯ ಕಟ್ಟಿದರೇನು?
ಹಸಿವು ಹೋಹುದೇ ?
ಅಂಗದ ಮೇಲೆ ಲಿಂಗ ಸ್ವಾಯತವಾದರೇನು ?
ಭಕ್ತನಾಗಬಲ್ಲನೆ ?
ಇಟ್ಟ ಕಲ್ಲು ಮೆಳೆಯ ಮೇಲೆ ಸಿಕ್ಕಿದಡೆ
ಆ ಕಲ್ಲು ಲಿಂಗವೆ ?
ಆ ಮೆಳೆ ಭಕ್ತನೆ ?
ಇಟ್ಟಾತ ಗುರುವೆ ?
ಇಂತಪ್ಪನವರ ಕಂಡರೆ ನಾಚುವೆನಯ್ಯ ಗುಹೇಶ್ವರ.

೧೦೭.
ಇಷ್ಟಲಿಂಗವನು ಪ್ರಾಣಲಿಂಗವೆಂಬ
ಕಷ್ಟವೆಲ್ಲಿಯದೋ ?
ಇಷ್ಟಲಿಂಗ ಹೋದರೆ ಪ್ರಾಣಲಿಂಗ ಹೋಗದು ನೋಡಾ !
ಇಷ್ಟಲಿಂಗ-ಪ್ರಾಣಲಿಂಗವೆಂಬ ಬೇಧವನು
ಗುಹೇಶ್ವರ, ನಿಮ್ಮ ಶರಣ ಬಲ್ಲ.

೧೦೮.
ವ್ರತಗೇಡಿ, ವ್ರತಗೇಡಿ ಎಂಬವ ತಾನೆ ವ್ರತಗೇಡಿ,
ವ್ರತಗೆಡಲಿಕೇನು ಹಾಲಂಬಿಲವೆ ?
ವ್ರತಗೆಟ್ಟ ಬಳಿಕ ಘಟ ಉಳಿಯಬಲ್ಲುದೇ ?
ಕಾಯದೊಳಗೆ ಜೀವ ಉಳ್ಳನ್ನಕ್ಕರ
ಅದೇ ಪ್ರಾಣಲಿಂಗವು ಕಾಣಾ ಗುಹೇಶ್ವರ.

೧೦೯.
ಅಂಗದ ಕಳೆಯಲೊಂದು ಲಿಂಗವ ಕಂಡೆ
ಲಿಂಗದ ಕಳೆಯಲೊಂದು ಅಂಗವ ಕಂಡೆ !
ಅಂಗದ ಲಿಂಗದ ಸಂದಣಿಯನಱಸಿ ಕಂಡೆ ನೋಡಿರೇ !
ಇಲ್ಲಿ ಐದಾನೆ ಶಿವನು !
ಬಲ್ಲಡೆ ಇರಿಸಿಕೊಳ್ಳಿರೇ ಕಾಯವಳಿಯದ ಮುನ್ನ !!
ನೋಡಬಲ್ಲಡೆ ಗುಹೇಶ್ವರಲಿಂಗಕ್ಕೆ ಬೇರೆ ಠಾವುಂಟೆ ಹೇಳಿರೇ.

೧೧೦.
ಪೂಜಿಸಿ ಕೆಳಯಿಂಕೆ ಇಳುಹಲದೇನೋ ?
ಅನಾಗತ ಪೂಜೆಯ ಮಾಡಲದೇನೋ ?
ದೇಹವೇ ಪಿಂಡಿಗೆ
ಜೀವವೇ ಲಿಂಗ-ಗುಹೇಶ್ವರ.

Comments

Popular posts from this blog

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ...

ಸರ್ವಜ್ಞನ ವಚನಗಳು - 1 ರಿಂದ 10

ಸರ್ವಜ್ಞನ ವಚನಗಳು -  1 ರಿಂದ 20 ೧. ನಂದಿಯನು ಏರಿದನ ಚಂದಿರನ ಮುಡಿದವನ ಕಂದನಂ ಬೇಡಿ ನೆನೆವುತ್ತ ಮುಂದೆ ಹೇಳುವೆನು ಸರ್ವಜ್ಞ ೨. ಮುನ್ನ ಕಾಲದಲಿ ಪನ್ನಗಧರನಾಳು ಎನ್ನೆಯ ಪೆಸರು, ಪುಷ್ಪದತ್ತನು ಎಂದು ಮನಿಪರು ದಯದಿ ಸರ್ವಜ್ಞ ೩. ಅಂದಿನ ಪುಷ್ಪದತ್ತ ಬಂದ ವರರುಚಿಯಾಗಿ ಮುದವ ಸಾರೆ, ಸರ್ವಜ್ಞನೆಂದೆನಿಸಿ ನಿಂದವನು ನಾನೆ ಸರ್ವಜ್ಞ ೪. ಸಣ್ಣನೆಯ ಮಳಲೊಳಗೆ ನುಣ್ಣನೆಯ ಶಿಲೆಯೊಳಗೆ ಬಣ್ಣೆಸಿಬರೆದ ಪಟದೊಳಗೆಯಿರುವಾತ ತಣ್ಣೊಳಗೆ ಇರನೇ ಸರ್ವಜ್ಞ ೫. ಹೊಲಸು ಮಾಂಸದ ಹುತ್ತ ಎಲುವಿನಾ ಹಂದರವು ಹೊಲೆಬಲಿದ ತನುವಿನೊಳಗಿರ್ದುಮದರೊಳಗೆ ಕುಲವನರಸುವರೆ ಸರ್ವಜ್ಞ ೬. ಎಲುವಿನೀ ಕಾಯಕ್ಕೆ ಸಲೆ ಚರ್ಮದ ಹೊದಿಕೆ ಮಲ ಮೂತ್ರ ಕ್ರಿಮಿಗಳೊಳಗಿರ್ದ ದೇಹಕ್ಕೆ ಕುಲವಾವುದಯ್ಯ ಸರ್ವಜ್ಞ ೭. ಸರ್ವಜ್ಞನೆಂಬುವನು ಗರ್ವದಿಂದಾದವನೆ ? ಸರ್ವರೊಳಗೊಂದು ನುಡಿಗಲಿತು ವಿದ್ಯೆಯ ಪರ್ವತವೇ ಆದ ಸರ್ವಜ್ಞ ೮. ಗುರುವಿನಾ ವಿಸ್ತರದ, ಪರಿಯನಾನೇನೆಂಬೆ ಮೆರೆವ ಬ್ರಹ್ಮಾಂಡದೊಳಹೊರಗೆ ಅವ ಬೆಳಗಿ ಪರಿಪೂರ್ಣನಿರ್ಪ ಸರ್ವಜ್ಞ ೯. ಊರಿಂಗೆ ದಾರಿಯನು ಆರು ತೋರಿದರೇನು? ಸಾರಾಯದಾ ನಿಜವ ತೋರುವ ಗುರುವು ತಾ ನಾರಾದರೇನು? ಸರ್ವಜ್ಞ ೧೦. ಪರತತ್ವ ತನ್ನೊಳಗೆ ಎರವಿಲ್ಲದಿರುತಿರ್ದು ಪರದೇಶಿಯಂತೆ ಇರುತಿರ್ಪಯೋಗಿಯನು ಪರಮಗುರುವೆಂಬೆ ಸರ್ವಜ್ಞ

ಅಕ್ಕನ ವಚನಗಳು - 301 ರಿಂದ 310 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೦೧. ಕಾಮನ ತಲೆಯ ಕೊರೆದು, ಕಾಲನ ಕಣ್ಣ ಕಳೆದು ಸೋಮಸೂರ್ಯರ ಹರಿದು ಹುಡಿಮಾಡಿ ತಿಂಬವಳಿಂಗೆ ನಾಮವನಿಡಬಲ್ಲವರಾರು ಹೇಳಿರೆ! ನೀ ಮದುವಳಿಗನಾಗಿ ನಾ ಮದುವಳಿಗಿತಿಯಾಗಿ ಯವನ(=ಆನಲನ?) ಕೂಡುವ ಮರುತನಂತೆ (?) ನೋಡಾ, ಶ್ರೀಗಿರಿ ಚೆನ್ನಮಲ್ಲಿಕಾರ್ಜುನ ೩೦೨. ಬಸವನ ಭಕ್ತಿ ಕೊಟ್ಟಣದ ಮನೆ ಸಿರಿಯಾಳನ ಭಕ್ತಿ ಕಸಬಗೇರಿ ಸಿಂಧುಬಲ್ಲಾಳನ ಭಕ್ತಿ ಪರದಾರದ್ರೋಹ ಉಳಿದಾದ[+ಟ}ಮಟ ಉದಾಸೀನ ದಾಸೋಹ ಮಾಡುವವರ ದೈನ್ಯವೆಂಬ ಭೂತ ಸೋಂಕಿತು ಮಣ್ಣಿನ ಮನೆಯ ಕಟ್ಟಿ ಮಾಯಾಮೋಹಿನಿಯೆಂಬ ಮಹೇಂದ್ರಜಾಲದೊಳಗಾಗಿ ಮಾಡುವ ಮಾಟ ಭಕ್ತನಲ್ಲಿ ಉಂಡು ಉದ್ದಂಡ ವೃತ್ತಿಯಲ್ಲಿ ನಡೆದವರು ಶಿವನಲ್ಲ ಇವರು ದೇವಲೋಕ ಮರ್ತ್ಯಲೋಕಕ್ಕೆ ಹೊರಗು ಶ್ರೀಗಿರಿ ಚೆನ್ನಮಲ್ಲಿಕಾರ್ಜುನ, ನನ್ನ ಭಕ್ತಿ ನಿನ್ನೊಳಗೈಕ್ಯವಾಯಿತಾಗಿ ನಿರ್ವಯಲಾದೆ ಕಾಣಾ! ೩೦೩. ಅನ್ನವ ನೀಡುವವರಿಗೆ ಧಾನ್ಯವೆ [ಶಿವ]ಲೋಕ ಅರ್ಥವ ಕೊಡುವವರಿಂಗೆ ಪಾಷಾಣವೆ [ಶಿವ]ಲೋಕ ಹೆಣ್ಣು-ಹೊನ್ನು-ಮಣ್ಣು ಮೂರನೂ ಕಣ್ಣಿನಲ್ಲಿ ನೋಡಿ, ಕಿವಿಯಲಿ ಕೇಳಿ ಕೈ[ಯಲಿ] ಮುಟ್ಟಿ ಮಾಡುವ ಭಕ್ತಿ ಸಣ್ಣವರ ಸಮಾರಾಧನೆಯಾಯಿತು ತನ್ನನಿತ್ತು ತುಷ್ಟಿವಡೆವರನೆನಗೆ ತ...