Skip to main content

ಬಸವಣ್ಣನ ವಚನಗಳು - 241 ರಿಂದ 250 ರವರೆಗೆ

೨೪೧.
ಭಿತ್ತಿಯಿಲ್ಲದೆ ಬರೆಯಬಹುದೆ ಚಿತ್ತಾರವ ?
ಬಿತ್ತಿ ಬೆಳೆಯಬಹುದೆ ಧರೆಯಿಲ್ಲದೆ ?
ಜಂಗಮವಿಲ್ಲದೆ ಮಾಡಬಹುದೆ,
ರೂಢೀಶನ ಭೇದಿಸಬಹುದೆ ?
ಒಡಲಿಲ್ಲದ ನಿರಾಳಕರ್ತೃ ಕೂಡಲಸಂಗಮದೇವ
ಜಂಗಮಮುಖಲಿಂಗವಾದನಾಗಿ
ಮತ್ತೊಂದನರಿಯೆನಯ್ಯ.
೨೪೨.
ಕೆಂಡದಲ್ಲಿಟ್ಟರೆ ಕೈ ಬೆಂದುದೆಂಬರು;
ಕೊಂಡಿಟ್ಟವನ ಕೈ ಮುನ್ನವೇ ಬೆಂದುದು!
ನೊಂದೆ ನಾನು ನೊಂದೆನಯ್ಯ.
ಬೆಂದೆ ನಾನು ಬೆಂದೆನಯ್ಯ.
ಕೂಡಲಸಂಗನ ಶರಣರ ಕಂಡು
ಕಾಣದಂತಿದ್ದರೆ ಅಂದೇ ಬೆಂದೆನಯ್ಯ.
೨೪೩.
ಲಾಂಛನವ ಕಂಡು ನಂಬುವೆ,
ಅವರಂತರಂಗವ ನೀವೇ ಬಲ್ಲಿರಿ.
ತೊತ್ತಿಂಗೆ ತೊತ್ತುಗೆಲಸವಲ್ಲದೆ
ಅರಸರ ಸುದ್ದಿ ಎಮಗೇಕಯ್ಯ ?
ರತ್ನಮೌಕ್ತಿಕದಚ್ಚು ಕೂಡಲಸಂಗಮದೇವ, ನಿಮ್ಮ ಶರಣರು.
೨೪೪.
ಎಡದ ಕೈಯಲ್ಲಿ ನಿಗಳವನಿಕ್ಕಿ,
ಬಲದ ಕೈಯ್ಯ ಕಡಿದುಕೊಂಡರೆ,
ನೋಯದಿಪ್ಪುದೇ, ಅಯ್ಯ ?
ಪ್ರಾಣ ಒಂದಾಗಿ ದೇಹ ಬೇರಿಲ್ಲ.
ಲಿಂಗವ ಪೂಜಿಸಿ ಜಂಗಮವನುದಾಸೀನ ಮಾಡಿದರೆ
ಬೆಂದೆನಯ್ಯ ನಾನು, ಕೂಡಲಸಂಗಮದೇವ.
೨೪೫.
ತನುವ ನೋಯಿಸಿ, ಮನವ ಬಳಲಿಸಿ
ನಿಮ್ಮ ಪಾದವಿಡಿದವರೊಳರೆ ?
ಈ ನುಡಿ ಸುಡದಿಹುದೆ ?
ಕೂಡಲಸಂಗಮದೇವ,
ಶಿವಭಕ್ತರ ನೋವೇ ಅದು ಲಿಂಗದ ನೋವು!
೨೪೬.
ಕುದುರೆ ಸತ್ತಿಗೆಯವರ ಕಂಡರೆ
ಹೊರಳಿಬಿದ್ದು ಕಾಲ ಹಿಡಿವರಯ್ಯ.
ಬಡಭಕ್ತರು ಬಂದರೆ, ಎಡೆಯಿಲ್ಲ ಅತ್ತ ಸನ್ನಿ ಎಂಬರು.
ಎನ್ನೊಡೆಯ ಕೂಡಲಸಂಗಯ್ಯನವರ
ತಡೆಗೆಡಹಿ ಮೂಗ ಕೊಯ್ಯದೆ ಮಾಬನೆ ?
೨೪೭.
ಅಡ್ಡದೊಡ್ಡ ನಾನಲ್ಲಯ್ಯ.
ದೊಡ್ಡ ಬಸಿರು ಎನಗಿಲ್ಲವಯ್ಯ.
ದೊಡ್ಡವರನಲ್ಲದೆ ನಿಮ್ಮ ಶರಣರು ಮನ್ನಿಸರಯ್ಯ.
ಹಡೆದುಂಬ ಸೂಳೆಯಂತೆ
ಧನವುಳ್ಳವರನರಸಿಯರಸಿ ಬೋಧಿಸಲು,
ಪ್ರಾರ್ಥಿಸಲು ಮುನ್ನ ನಾನರಿಯೆನಯ್ಯ!
ದೊಡ್ಡತನವೆನಗಿಲ್ಲವಯ್ಯ.
ಅಂಜುವೆನಂಜುವೆ ನಿಮ್ಮ ಪ್ರಥಮರಿಗೆ
ಅನಾಥ ನಾನಯ್ಯ, ಕೂಡಲಸಂಗಮದೇವ.
೨೪೮.
ಹಾಲ ಕಂದಲು, ತುಪ್ಪದ ಗಡಿಗೆಯ-
ಬೋಡ, ಮುಕ್ಕೆನಬೇಡ!
ಹಾಲು ಸಿಹಿ, ತುಪ್ಪ ಕಮ್ಮಗೆ!
ಲಿಂಗಕ್ಕೆ ಬೋನ,
ಕೂಡಲಸಂಗನ ಶರಣರ
ಅಂಗಹೀನರೆಂದರೆ ನಾಯಕನರಕ!
೨೪೯.
ಮರಕ್ಕೆ ಬಾಯಿ ಬೇರೆಂದು
ತಳಕ್ಕೆ ನೀರನೆರೆದರೆ ಮೇಲೆ ಪಲ್ಲವಿಸಿತ್ತು ನೋಡಾ!
ಲಿಂಗದ ಬಾಯಿ ಜಂಗಮವೆಂದು
ಪಡಿಪದಾರ್ಥವ ನೀಡಿದರೆ, ಮುಂದೆ ಸಕಲಾರ್ಥವನೀವನು!
ಆ ಜಂಗಮವ ಹರನೆಂದು ಕಂಡು
ನರನೆಂದು ಭಾವಿಸಿದರೆ, ನರಕ ತಪ್ಪದು ಕಾಣಾ!
ಕೂಡಲಸಂಗಮದೇವ.
೨೫೦.
ನನಗೆ ನಾನೇ ಹಗೆ ನೋಡಯ್ಯ!
ನನಗೆ ನಾನೇ ಕೆಳೆ ನೋಡಯ್ಯ!
ನಿಮ್ಮ ಸದ್ಭಕ್ತರೊಡನೆ ವಿರೋಧವ ಮಾಡಿದರೆನ್ನ ಕೊಲುವುದಾಗಿ
ನಿಮ್ಮ ಪುರಾತನರಿಗಂಜಿ ಬೆಸಗೊಂಡರೆನ್ನ ಕಾಯ್ವುದಾಗಿ
ಅನ್ಯ ಹಗೆಯೆಲ್ಲಿ ? ಕೆಳೆಯೆಲ್ಲಿ ?
ಬಾಗಿದ ತಲೆಯ, ಮುಗಿದ ಕೈಯಾಗಿರಿಸು ಕೂಡಲಸಂಗಮದೇವ.

Comments

Popular posts from this blog

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ...

ಸರ್ವಜ್ಞನ ವಚನಗಳು - 1 ರಿಂದ 10

ಸರ್ವಜ್ಞನ ವಚನಗಳು -  1 ರಿಂದ 20 ೧. ನಂದಿಯನು ಏರಿದನ ಚಂದಿರನ ಮುಡಿದವನ ಕಂದನಂ ಬೇಡಿ ನೆನೆವುತ್ತ ಮುಂದೆ ಹೇಳುವೆನು ಸರ್ವಜ್ಞ ೨. ಮುನ್ನ ಕಾಲದಲಿ ಪನ್ನಗಧರನಾಳು ಎನ್ನೆಯ ಪೆಸರು, ಪುಷ್ಪದತ್ತನು ಎಂದು ಮನಿಪರು ದಯದಿ ಸರ್ವಜ್ಞ ೩. ಅಂದಿನ ಪುಷ್ಪದತ್ತ ಬಂದ ವರರುಚಿಯಾಗಿ ಮುದವ ಸಾರೆ, ಸರ್ವಜ್ಞನೆಂದೆನಿಸಿ ನಿಂದವನು ನಾನೆ ಸರ್ವಜ್ಞ ೪. ಸಣ್ಣನೆಯ ಮಳಲೊಳಗೆ ನುಣ್ಣನೆಯ ಶಿಲೆಯೊಳಗೆ ಬಣ್ಣೆಸಿಬರೆದ ಪಟದೊಳಗೆಯಿರುವಾತ ತಣ್ಣೊಳಗೆ ಇರನೇ ಸರ್ವಜ್ಞ ೫. ಹೊಲಸು ಮಾಂಸದ ಹುತ್ತ ಎಲುವಿನಾ ಹಂದರವು ಹೊಲೆಬಲಿದ ತನುವಿನೊಳಗಿರ್ದುಮದರೊಳಗೆ ಕುಲವನರಸುವರೆ ಸರ್ವಜ್ಞ ೬. ಎಲುವಿನೀ ಕಾಯಕ್ಕೆ ಸಲೆ ಚರ್ಮದ ಹೊದಿಕೆ ಮಲ ಮೂತ್ರ ಕ್ರಿಮಿಗಳೊಳಗಿರ್ದ ದೇಹಕ್ಕೆ ಕುಲವಾವುದಯ್ಯ ಸರ್ವಜ್ಞ ೭. ಸರ್ವಜ್ಞನೆಂಬುವನು ಗರ್ವದಿಂದಾದವನೆ ? ಸರ್ವರೊಳಗೊಂದು ನುಡಿಗಲಿತು ವಿದ್ಯೆಯ ಪರ್ವತವೇ ಆದ ಸರ್ವಜ್ಞ ೮. ಗುರುವಿನಾ ವಿಸ್ತರದ, ಪರಿಯನಾನೇನೆಂಬೆ ಮೆರೆವ ಬ್ರಹ್ಮಾಂಡದೊಳಹೊರಗೆ ಅವ ಬೆಳಗಿ ಪರಿಪೂರ್ಣನಿರ್ಪ ಸರ್ವಜ್ಞ ೯. ಊರಿಂಗೆ ದಾರಿಯನು ಆರು ತೋರಿದರೇನು? ಸಾರಾಯದಾ ನಿಜವ ತೋರುವ ಗುರುವು ತಾ ನಾರಾದರೇನು? ಸರ್ವಜ್ಞ ೧೦. ಪರತತ್ವ ತನ್ನೊಳಗೆ ಎರವಿಲ್ಲದಿರುತಿರ್ದು ಪರದೇಶಿಯಂತೆ ಇರುತಿರ್ಪಯೋಗಿಯನು ಪರಮಗುರುವೆಂಬೆ ಸರ್ವಜ್ಞ

ಅಕ್ಕನ ವಚನಗಳು - 301 ರಿಂದ 310 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೦೧. ಕಾಮನ ತಲೆಯ ಕೊರೆದು, ಕಾಲನ ಕಣ್ಣ ಕಳೆದು ಸೋಮಸೂರ್ಯರ ಹರಿದು ಹುಡಿಮಾಡಿ ತಿಂಬವಳಿಂಗೆ ನಾಮವನಿಡಬಲ್ಲವರಾರು ಹೇಳಿರೆ! ನೀ ಮದುವಳಿಗನಾಗಿ ನಾ ಮದುವಳಿಗಿತಿಯಾಗಿ ಯವನ(=ಆನಲನ?) ಕೂಡುವ ಮರುತನಂತೆ (?) ನೋಡಾ, ಶ್ರೀಗಿರಿ ಚೆನ್ನಮಲ್ಲಿಕಾರ್ಜುನ ೩೦೨. ಬಸವನ ಭಕ್ತಿ ಕೊಟ್ಟಣದ ಮನೆ ಸಿರಿಯಾಳನ ಭಕ್ತಿ ಕಸಬಗೇರಿ ಸಿಂಧುಬಲ್ಲಾಳನ ಭಕ್ತಿ ಪರದಾರದ್ರೋಹ ಉಳಿದಾದ[+ಟ}ಮಟ ಉದಾಸೀನ ದಾಸೋಹ ಮಾಡುವವರ ದೈನ್ಯವೆಂಬ ಭೂತ ಸೋಂಕಿತು ಮಣ್ಣಿನ ಮನೆಯ ಕಟ್ಟಿ ಮಾಯಾಮೋಹಿನಿಯೆಂಬ ಮಹೇಂದ್ರಜಾಲದೊಳಗಾಗಿ ಮಾಡುವ ಮಾಟ ಭಕ್ತನಲ್ಲಿ ಉಂಡು ಉದ್ದಂಡ ವೃತ್ತಿಯಲ್ಲಿ ನಡೆದವರು ಶಿವನಲ್ಲ ಇವರು ದೇವಲೋಕ ಮರ್ತ್ಯಲೋಕಕ್ಕೆ ಹೊರಗು ಶ್ರೀಗಿರಿ ಚೆನ್ನಮಲ್ಲಿಕಾರ್ಜುನ, ನನ್ನ ಭಕ್ತಿ ನಿನ್ನೊಳಗೈಕ್ಯವಾಯಿತಾಗಿ ನಿರ್ವಯಲಾದೆ ಕಾಣಾ! ೩೦೩. ಅನ್ನವ ನೀಡುವವರಿಗೆ ಧಾನ್ಯವೆ [ಶಿವ]ಲೋಕ ಅರ್ಥವ ಕೊಡುವವರಿಂಗೆ ಪಾಷಾಣವೆ [ಶಿವ]ಲೋಕ ಹೆಣ್ಣು-ಹೊನ್ನು-ಮಣ್ಣು ಮೂರನೂ ಕಣ್ಣಿನಲ್ಲಿ ನೋಡಿ, ಕಿವಿಯಲಿ ಕೇಳಿ ಕೈ[ಯಲಿ] ಮುಟ್ಟಿ ಮಾಡುವ ಭಕ್ತಿ ಸಣ್ಣವರ ಸಮಾರಾಧನೆಯಾಯಿತು ತನ್ನನಿತ್ತು ತುಷ್ಟಿವಡೆವರನೆನಗೆ ತ...