Skip to main content

ಬಸವಣ್ಣನ ವಚನಗಳು - 261 ರಿಂದ 270 ರವರೆಗೆ

Dear friends,
Daily I will post Basavannana Vachanagalu, Sarvagnana Vachanagalu, Akka Mahadevi Vachana
Allama Prabhudevara Vachanagalu.

Please follow my post and post your valuable comments.
 
೨೬೧.
ಓಡುವಾತ ಲೆಂಕನಲ್ಲ, ಬೇಡುವಾತ ಭಕ್ತನಲ್ಲ!
ಓಡಲಾಗದು ಲೆಂಕನು ಬೇಡಲಾಗದು ಭಕ್ತನು!
ಓಡೆನಯ್ಯ, ಬೇಡೆನಯ್ಯ ಕೂಡಲಸಂಗಮದೇವ.
೨೬೨.
ಎಲ್ಲಿ ನೋಡಿರಲ್ಲಿ ಮನವೆಳಸಿದರೆ
ಆಣೆ, ನಿಮ್ಮಾಣೆ, ನಿಮ್ಮ ಪ್ರಮಥರಾಣೆ!
ಪರವಧುವನು ಮಾದೇವಿಯೆಂದೇ ಕಾಬೆ ಕೂಡಲಸಂಗಮದೇವ.
೨೬೩.
ಹರಿವ ಹಾವಿಂಗಂಜೆ, ಉರಿಯ ನಾಲಗೆಗಂಜೆ!
ಸುರಗಿಯ ಮೊನೆಗಂಜೆ!
ಒಂದಕ್ಕಂಜುವೆ, ಒಂದಕ್ಕಳುಕುವೆ;
ಪರಧನ ಪರಸ್ತ್ರೀಯೆಂಬೀ ಜೂಬಿಂಗಂಜುವೆ!
ಮುನ್ನಂಜದ ರಾವಣನೇ ವಿಧಿಯಾದ
ಅಂಜುವೆನಯ್ಯ, ಕೂಡಲಸಂಗಮದೇವ!
೨೬೪.
ಅಸುರನೈಶ್ವರ್ಯವನೆಣಿಸುವಡೆ-
ಸೀತೆಗೆ ಸರಿ-ಮಿಗಿಲೆನಿಸುವ ಸತಿಯರುಂಟು ಕೋಟಿ!
ಮತಿವಂತ ಶಿರಃಪ್ರಧಾನರೆಂಟು ಕೋಟಿ!
ಲೆಕ್ಕವಿಲ್ಲದ ದಳವು! ಲಕ್ಷ ಕುಮಾರರು!
ದಿಕ್ಪಾಲಕರವನ ಮನೆಯ ಬಂಧನದಲಿಪ್ಪರು
ಸುರಸತಿಯರನೆಲ್ಲರನಾತ ಸೆರೆಮಾಡಿಯಾಳಿದ!
ಶಿವನೇ ನೀ ಕರುಣಿಸಿದಂತಿರದೆ
ಪರವಧುವಿನ ಬೇಟವವನ ಪ್ರಾಣವ ಕೊಂಡಿತ್ತು.
ಇದನರಿತು ಪರವಧುವಿಗೆಳಸುವವರ ಕಂಡು
ಗರುಡ ಕಂಡ ಸರ್ಪ ಧರೆಗಿಳಿವಂತೆ ಅಡಗಿಪ್ಪೆನಯ್ಯ
ಕೂಡಲಸಂಗಮದೇವ.
೨೬೫.
ಒಂದಕೊಂಬತ್ತ ನುಡಿದು ಕಣ್ಣ ಕೆಚ್ಚನೆ ಮಾಡಿ,
ಗಂಡುಗೆದರಿ ಮುಡುಹಿಕ್ಕಿ
ಕೆಲೆವರ ಕಂಡಂಜುವೆ ಓಸರಿಸುವೆ,
ಓಡಿದೆನೆಂಬ ಭಂಗವಾದರಾಗಲಿ
ನಮ್ಮ ಕೂಡಲಸಂಗನ ಶರಣರನುಭಾವವಿಲ್ಲದವರ
ಹೊಲಮೇರೆಯ ಹೊದ್ದೆ, ಹೊಲನ ಬಿಟ್ಟೋಡುವೆ.
೨೬೬.
ದೇವಸಹಿತ ಭಕ್ತ ಮನೆಗೆ ಬಂದರೆ
ಕಾಯಕವಾವುದೆಂದು ಬೆಸಗೊಂಡೆನಾದರೆ
ನಿಮ್ಮಾಣೆ, ನಿಮ್ಮ ಪುರಾತರಾಣೆ, ತಲೆದಂಡ, ತಲೆದಂಡ.
ಕೂಡಲಸಂಗಮದೇವಾ, ಭಕ್ತರಲ್ಲಿ ಕುಲವನರಸಿದರೆ
ನಿಮ್ಮ ರಾಣಿವಾಸದಾಣೆ.
೨೬೭.
ಕೂಪರಿಗೆ ಹೇಳುವೆನು ಕುಳಸ್ಥಳಂಗಳನೆಲ್ಲ,
ಕೂರದವರಿಗೆ ಹೇಳಿ ನಾನೇವೇನು ಶಿವನೆ,
ಕರಲ ಭೂಮಿಯಲ್ಲಿ ಕರೆದ ವೃಷ್ಟಿಯ ತೆರನಂತೆ!
ಅವರೆತ್ತ ಬಲ್ಲರೆನ್ನ ಸುಖದುಃಖವ ?
ಅಂಗವಿಲ್ಲದ ಸಂಗವು
ಅಳಲಿಲ್ಲದ ಹುಯ್ಯಲಂತೆ.
ಇದು ಕಾರಣ ಕೂಡಲಸಂಗಮದೇವಾ
ನಿಮ್ಮ ಶರಣರಿಗಲ್ಲದೆ ಬಾಯ ತೆರೆಯನು.
೨೬೮.
ಒಡೆದೋಡೂ ಎನ್ನ ಮನೆಯಲಿಲ್ಲದಂತೆ ಮಾಡಯ್ಯ !
ಕೊಡು ದೇವ ಎನ್ನ ಕೈಯಲೊಂದು ಗರಿಕೆಯನು,
ಮೃಡದೇವಾ ಶರಣೆಂದು ಭಿಕ್ಷಕ್ಕೆ ಹೋದರೆ,
ಅಲ್ಲಿ, ನಡೆ ದೇವಾ ಎಂದೆನಿಸು ಕೂಡಲಸಂಗಮದೇವ.
೨೬೯.
ಅಯ್ಯ, ನಿಮ್ಮ ಶರಣರ ದಾಸೋಹಕ್ಕೆ
ಎನ್ನ ತನು-ಮನ-ಧನವಲಸದಂತೆ ಮಾಡಯ್ಯ.
ತನು ದಾಸೋಹಕ್ಕೆ ಉಬ್ಬುವಂತೆ ಮಾಡು;
ಮನ ದಾಸೋಹಕ್ಕೆ ಲೀಯವಹಂತೆ ಮಾಡು;
ಧನ ದಾಸೋಹಕ್ಕೆ ಸವೆದು
ನಿಮ್ಮ ಶರಣರ ಪ್ರಸಾದದಲ್ಲಿ ನಿರಂತರ
ಆಡಿ, ಪಾಡಿ; ನೋಡಿ, ಕೂಡಿ;
ಭಾವಿಸಿ, ಸುಖಿಸಿ; ಪರಿಣಾಮಿಸುವಂತೆ ಮಾಡು
ಕೂಡಲಸಂಗಮದೇವ.
೨೭೦.
ಹಾರುವ ಹಾರುವನಪ್ಪೆ ನಾನು,
ಸದ್ಭಕ್ತರೆನ್ನವರೆನ್ನವರೆಂದು!
ಹಾರುವ ಹಾರುವನಪ್ಪೆ ನಾನು, ಶರಣರು ಎನ್ನವರೆನ್ನವರೆಂದು!
ಕೂಡಲಸಂಗನ ಶರಣರು ಒಕ್ಕುದನಿಕ್ಕಿ ಸಲಹುವರೆಂದು!

Comments

Popular posts from this blog

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ...

ಸರ್ವಜ್ಞನ ವಚನಗಳು - 1 ರಿಂದ 10

ಸರ್ವಜ್ಞನ ವಚನಗಳು -  1 ರಿಂದ 20 ೧. ನಂದಿಯನು ಏರಿದನ ಚಂದಿರನ ಮುಡಿದವನ ಕಂದನಂ ಬೇಡಿ ನೆನೆವುತ್ತ ಮುಂದೆ ಹೇಳುವೆನು ಸರ್ವಜ್ಞ ೨. ಮುನ್ನ ಕಾಲದಲಿ ಪನ್ನಗಧರನಾಳು ಎನ್ನೆಯ ಪೆಸರು, ಪುಷ್ಪದತ್ತನು ಎಂದು ಮನಿಪರು ದಯದಿ ಸರ್ವಜ್ಞ ೩. ಅಂದಿನ ಪುಷ್ಪದತ್ತ ಬಂದ ವರರುಚಿಯಾಗಿ ಮುದವ ಸಾರೆ, ಸರ್ವಜ್ಞನೆಂದೆನಿಸಿ ನಿಂದವನು ನಾನೆ ಸರ್ವಜ್ಞ ೪. ಸಣ್ಣನೆಯ ಮಳಲೊಳಗೆ ನುಣ್ಣನೆಯ ಶಿಲೆಯೊಳಗೆ ಬಣ್ಣೆಸಿಬರೆದ ಪಟದೊಳಗೆಯಿರುವಾತ ತಣ್ಣೊಳಗೆ ಇರನೇ ಸರ್ವಜ್ಞ ೫. ಹೊಲಸು ಮಾಂಸದ ಹುತ್ತ ಎಲುವಿನಾ ಹಂದರವು ಹೊಲೆಬಲಿದ ತನುವಿನೊಳಗಿರ್ದುಮದರೊಳಗೆ ಕುಲವನರಸುವರೆ ಸರ್ವಜ್ಞ ೬. ಎಲುವಿನೀ ಕಾಯಕ್ಕೆ ಸಲೆ ಚರ್ಮದ ಹೊದಿಕೆ ಮಲ ಮೂತ್ರ ಕ್ರಿಮಿಗಳೊಳಗಿರ್ದ ದೇಹಕ್ಕೆ ಕುಲವಾವುದಯ್ಯ ಸರ್ವಜ್ಞ ೭. ಸರ್ವಜ್ಞನೆಂಬುವನು ಗರ್ವದಿಂದಾದವನೆ ? ಸರ್ವರೊಳಗೊಂದು ನುಡಿಗಲಿತು ವಿದ್ಯೆಯ ಪರ್ವತವೇ ಆದ ಸರ್ವಜ್ಞ ೮. ಗುರುವಿನಾ ವಿಸ್ತರದ, ಪರಿಯನಾನೇನೆಂಬೆ ಮೆರೆವ ಬ್ರಹ್ಮಾಂಡದೊಳಹೊರಗೆ ಅವ ಬೆಳಗಿ ಪರಿಪೂರ್ಣನಿರ್ಪ ಸರ್ವಜ್ಞ ೯. ಊರಿಂಗೆ ದಾರಿಯನು ಆರು ತೋರಿದರೇನು? ಸಾರಾಯದಾ ನಿಜವ ತೋರುವ ಗುರುವು ತಾ ನಾರಾದರೇನು? ಸರ್ವಜ್ಞ ೧೦. ಪರತತ್ವ ತನ್ನೊಳಗೆ ಎರವಿಲ್ಲದಿರುತಿರ್ದು ಪರದೇಶಿಯಂತೆ ಇರುತಿರ್ಪಯೋಗಿಯನು ಪರಮಗುರುವೆಂಬೆ ಸರ್ವಜ್ಞ

ಅಕ್ಕನ ವಚನಗಳು - 301 ರಿಂದ 310 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೦೧. ಕಾಮನ ತಲೆಯ ಕೊರೆದು, ಕಾಲನ ಕಣ್ಣ ಕಳೆದು ಸೋಮಸೂರ್ಯರ ಹರಿದು ಹುಡಿಮಾಡಿ ತಿಂಬವಳಿಂಗೆ ನಾಮವನಿಡಬಲ್ಲವರಾರು ಹೇಳಿರೆ! ನೀ ಮದುವಳಿಗನಾಗಿ ನಾ ಮದುವಳಿಗಿತಿಯಾಗಿ ಯವನ(=ಆನಲನ?) ಕೂಡುವ ಮರುತನಂತೆ (?) ನೋಡಾ, ಶ್ರೀಗಿರಿ ಚೆನ್ನಮಲ್ಲಿಕಾರ್ಜುನ ೩೦೨. ಬಸವನ ಭಕ್ತಿ ಕೊಟ್ಟಣದ ಮನೆ ಸಿರಿಯಾಳನ ಭಕ್ತಿ ಕಸಬಗೇರಿ ಸಿಂಧುಬಲ್ಲಾಳನ ಭಕ್ತಿ ಪರದಾರದ್ರೋಹ ಉಳಿದಾದ[+ಟ}ಮಟ ಉದಾಸೀನ ದಾಸೋಹ ಮಾಡುವವರ ದೈನ್ಯವೆಂಬ ಭೂತ ಸೋಂಕಿತು ಮಣ್ಣಿನ ಮನೆಯ ಕಟ್ಟಿ ಮಾಯಾಮೋಹಿನಿಯೆಂಬ ಮಹೇಂದ್ರಜಾಲದೊಳಗಾಗಿ ಮಾಡುವ ಮಾಟ ಭಕ್ತನಲ್ಲಿ ಉಂಡು ಉದ್ದಂಡ ವೃತ್ತಿಯಲ್ಲಿ ನಡೆದವರು ಶಿವನಲ್ಲ ಇವರು ದೇವಲೋಕ ಮರ್ತ್ಯಲೋಕಕ್ಕೆ ಹೊರಗು ಶ್ರೀಗಿರಿ ಚೆನ್ನಮಲ್ಲಿಕಾರ್ಜುನ, ನನ್ನ ಭಕ್ತಿ ನಿನ್ನೊಳಗೈಕ್ಯವಾಯಿತಾಗಿ ನಿರ್ವಯಲಾದೆ ಕಾಣಾ! ೩೦೩. ಅನ್ನವ ನೀಡುವವರಿಗೆ ಧಾನ್ಯವೆ [ಶಿವ]ಲೋಕ ಅರ್ಥವ ಕೊಡುವವರಿಂಗೆ ಪಾಷಾಣವೆ [ಶಿವ]ಲೋಕ ಹೆಣ್ಣು-ಹೊನ್ನು-ಮಣ್ಣು ಮೂರನೂ ಕಣ್ಣಿನಲ್ಲಿ ನೋಡಿ, ಕಿವಿಯಲಿ ಕೇಳಿ ಕೈ[ಯಲಿ] ಮುಟ್ಟಿ ಮಾಡುವ ಭಕ್ತಿ ಸಣ್ಣವರ ಸಮಾರಾಧನೆಯಾಯಿತು ತನ್ನನಿತ್ತು ತುಷ್ಟಿವಡೆವರನೆನಗೆ ತ...