Skip to main content

ಬಸವಣ್ಣನ ವಚನಗಳು - 291 ರಿಂದ 300 ರವರೆಗೆ

Dear friends,
Daily I will post Basavannana Vachanagalu, Sarvagnana Vachanagalu, Akka Mahadevi Vachana
Allama Prabhudevara Vachanagalu.

Please follow my post and post your valuable comments.
 
೨೯೧.
ಮಂಡೆಯ ಬೋಳಿಸಿಕೊಂಡು
ಗಂಡುದೊತ್ತುವೊಕ್ಕೆನಯ್ಯ.
ಲಜ್ಜೆಗೆಟ್ಟಾದರೂ ಲಿಂಗವನೊಲಿಸುವೆ.
ನಾಣುಗೆಟ್ಟಾದರೂ ಲಿಂಗವನೊಲಿಸುವೆ.
ಕೆಲದ ಸಂಸಾರಿಗಳು ನಗುತಿದ್ದರಿರಲಿ.
ಕೂಡಲಸಂಗಮದೇವ ಶರಣಾಗತಿವೊಕ್ಕೆನಯ್ಯ.
೨೯೨.
ಎನಗೆ ನಿಮ್ಮ ನೆನಹಾದಾಗವೇ ಉದಯ!
ಎನಗೆ ನಿಮ್ಮ ಮರಹಾದಾಗವೇ ಅಸ್ತಮಾನ!
ಎನಗೆ ನಿಮ್ಮ ನೆನಹವೇ ಜೀವ!
ಎನಗೆ ನಿಮ್ಮ ನೆನಹವೇ ಪ್ರಾಣ ಕಾಣ ತಂದೆ!
ಸ್ವಾಮಿ, ಎನ್ನ ಹೃದಯದಲ್ಲಿ
ನಿಮ್ಮ ಚರಣದುಂಡಿಗೆಯನೊತ್ತಯ್ಯ!
ವದನದಲ್ಲಿ ಪಂಚಾಕ್ಷರಿಯ ಬರೆಯಯ್ಯ
ಕೂಡಲಸಂಗಮದೇವ.
೨೯೩.
ಎನ್ನ ಕಾಯವ ದಂಡಿಗೆಯ ಮಾಡಯ್ಯ,
ಎನ್ನ ಶಿರವ ಸೋರೆಯ ಮಾಡಯ್ಯ,
ಎನ್ನ ನರವ ತಂತಿಯ ಮಾಡಯ್ಯ,
ಎನ್ನ ಬೆರಲ ಕಡ್ಡಿಯ ಮಾಡಯ್ಯ,
ಬತ್ತೀಸ ರಾಗವ ಹಾಡಯ್ಯ,
ಉರದಲೊತ್ತಿ ಬಾಜಿಸು ಕೂಡಲಸಂಗಮದೇವ.
೨೯೪.
ಮನಕ್ಕೆ ಮನೋಹರವಲ್ಲದ ಗಂಡರು
ಮನಕ್ಕೆ ಬಾರರು ಕೇಳವ್ವ ಕೆಳದಿ.
ಪನ್ನಗಭೂಷಣನಲ್ಲದ ಗಂಡರು
ಇನ್ನೆನಗಾಗದ ಮೋರೆ ನೋಡವ್ವ!
ಕನ್ನೆಯಂದಿನ ಕೂಟ:
ಚಿಕ್ಕಂದಿನ ಬಾಳುವೆ,
ನಿಮ್ಮಾಣೆಯಯ್ಯ ಕೂಡಲಸಂಗಮದೇವ.
೨೯೫.
ಜಗವೆಲ್ಲಾ ಅರಿಯಲು
ಎನಗೊಬ್ಬ ಗಂಡನುಂಟು!
ಆನು ಮುತ್ತೈದೆ;
ಆನು ನಿಟ್ಟೈದೆ.
ಕೂಡಲಸಂಗಮದೇವನಂತಪ್ಪ
ಎನಗೊಬ್ಬ ಗಂಡನುಂಟು.
೨೯೬.
ಸಂಸಾರವೆಂಬ ಶ್ವಾನನಟ್ಟಿ
ಮೀಸಲ ಬೀಸರ ಮಾಡದಿರಯ್ಯ!
ಎನ್ನ ಚಿತ್ತವು ನಿನ್ನ ಧ್ಯಾನವಯ್ಯ!
ನೀನಲ್ಲದೆ ಮತ್ತೇನನೂ ಅರಿಯೆನು
ಕನ್ನೆಯಲ್ಲಿ ಕೈವಿಡಿದೆನು.
ನಿನ್ನಲ್ಲಿ ನೆರೆದೆನು.
ಮನ್ನಿಸು ಕಂಡಾ ಮಹಾಲಿಂಗವೆ!
ಸತಿಯಾನು ಪತಿ ನೀನು
ಮನೆಯೊಡೆಯ ಮನೆಯ ಕಾಯ್ದಿಪ್ಪಂತೆ
ನೀನೆನ್ನ ಮನವ ಕಾಯ್ದಿಪ್ಪ ಗಂಡನು.
ನಿನಗೋತ ಮನವನನ್ಯಕ್ಕೆ ಹರಿಸಿದರೆ
ನಿನ್ನಭಿಮಾನ ಹಾನಿ ಕೂಡಲಸಂಗಮದೇವ.
೨೯೭.
ಅಯ್ಯ, ನಿಮ್ಮ ಅನುಭಾವದಿಂದ
ಎನ್ನ ತನು ಹಾಳಾಯಿತ್ತು.
ಅಯ್ಯ, ನಿಮ್ಮ ಅನುಭಾವದಿಂದ
ಎನ್ನ ಮನ ಹಾಳಾಯಿತ್ತು.
ಅಯ್ಯ, ನಿಮ್ಮ ಅನುಭಾವದಿಂದ
ಎನ್ನ ಕರ್ಮಚ್ಛೇದನವಾಯಿತ್ತು.
ಅಯ್ಯ, ನಿಮ್ಮವರು ಅಡಿಗಡಿಗೆ ಹೇಳಿ
ಭಕ್ತಿ ಎಂಬೀ ಒಡವೆಯನು
ದಿಟಮಾಡಿ ತೋರಿದರು ಕೂಡಲಸಂಗಮದೇವ.
೨೯೮.
ಭಕ್ತನೆಂತೆಂಬೆನಯ್ಯ, ಭವಿಸಂಗ ಬಿಡದನ್ನಕ ?
ಮಾಹೇಶ್ವರನೆಂತೆಂಬೆನಯ್ಯ,
ಪರಸ್ತ್ರೀ ಪರರರ್ಥದಾಸೆ ಬಿಡದನ್ನಕ ?
ಪ್ರಸಾದಿಯೆಂತೆಂಬೆನಯ್ಯ,
ಆಧಿವ್ಯಾಧಿ ನಷ್ಟವಾಗದನ್ನಕ ?
ಪ್ರಾಣಲಿಂಗಿಯೆಂತೆಂಬೆನಯ್ಯ,
ಪ್ರಾಣ ಸ್ವಸ್ಥಿರವಾಗದನ್ನಕ ?
ಶರಣನೆಂತೆಂಬೆನಯ್ಯ,
ಪಂಚೇಂದ್ರಿಯ ನಾಸ್ತಿಯಾಗದನ್ನಕ ?
ಐಕ್ಯನೆಂತೆಂಬೆನಯ್ಯ,
ಜನನ ಮರಣ ವಿರಹಿತವಾಗದನ್ನಕ ?
ಇಂತಪ್ಪ ಭಾಷೆ-ವ್ರತ-ವೇಷಂಗಳ
ನಾನರಿಯೆನಯ್ಯ!
ಅಘಟಿತ-ಘಟಿತ-ವರ್ತಮಾನವ
ನಾನರಿಯೆನಯ್ಯ!
ನಿಮ್ಮ ಶರಣರ ತೊತ್ತು,
ಭೃತ್ಯಾಚಾರವ ಮಾಡುವೆ ಕೂಡಲಸಂಗಮದೇವ.
೨೯೯.
ಅಭ್ಯಾಸವೆನ್ನ ವರ್ತಿಸಿತ್ತಯ್ಯ!
ಭಕ್ತಿ ಸಾಧ್ಯವಾಗದು, ನಾನೇವೆನಯ್ಯ ?
ಆನು ನಿಮ್ಮ ಮನಂಬೊಗುವನ್ನಕ,
ನೀವೆನ್ನ ಮನಂಬೊಗುವನ್ನಕ.
ಕಾಯಗುಣಂಗಳ ಕಳೆದವರಿಗೆ ಶರಣೆಂಬೆ
ಕೂಡಲಸಂಗಮದೇವ.
೩೦೦.
ತನುಸಾರಾಯರ, ಮನಸಾರಾಯರ,
ಜ್ಞಾನಸಾರಾಯರ ತೋರಯ್ಯ ನಿಮ್ಮ ಧರ್ಮ!
ಭಾವಸಾರಾಯರ, ಭಕ್ತಿಸಾರಾಯರ,
ತೋರಯ್ಯ ನಿಮ್ಮ ಧರ್ಮ !
ಕೂಡಲಸಂಗಮದೇವಯ್ಯ, ನಿಮ್ಮನರಿಯದ
ಅವಗುಣಿಗಳ ತೋರದಿರಯ್ಯ ನಿಮ್ಮ ಧರ್ಮ.

Comments

Popular posts from this blog

ಅಕ್ಕನ ವಚನಗಳು - 271 ರಿಂದ 280 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೨೭೧. ತನು ಶುದ್ಧ, ಮನ ಶುದ್ಧ, ಭಾವಶುದ್ಧವಾದವರನೆನಗೊಮ್ಮೆ ತೋರಾ! ನಡೆಯೆಲ್ಲ ಸದಾಚಾರ, ನುಡಿಯೆಲ್ಲ ಶಿವಾಗಮ, ನಿತ್ಯಶುದ್ಧರಾದವರನೆನಗೊಮ್ಮೆ ತೋರಾ! ಕತ್ತಲೆಯ ಮೆಟ್ಟಿ ತಳವೆಳಗಾಗಿ ಹೊರಗೊಳಗೊಂದಾಗಿ ನಿಂದ ನಿಮ್ಮ ಶರಣರನೆನಗೊಮ್ಮೆ ತೋರಾ ಚೆನ್ನಮಲ್ಲಿಕಾರ್ಜುನ ೨೭೨. ನಡೆ ಶುಚಿ, ನುಡಿ ಶುಚಿ, ತನು ಶುಚಿ, ಮನ ಶುಚಿ, ಭಾವ ಶುಚಿ-ಇಂತೀ ಪಂಚತೀರ್ಥಂಗಳನೊಳಕೊಂಡು ಮರ್ತ್ಯದಲ್ಲಿ ನಿಂದ ನಿಮ್ಮ ಶರಣರ ತೋರಿ ಎನ್ನನುಳುಹಿಕೊಳ್ಳಾ ಚೆನ್ನಮಲ್ಲಿಕಾರ್ಜುನ ೨೭೩. ಪಡೆವುದರಿದು ನರಜನ್ಮವ, ಪಡೆವುದರಿದು ಹರಭಕ್ತಿಯ; ಪಡೆವುದರಿದು ಗುರುಕಾರುಣ್ಯವ, ಪಡೆವುದರಿದು ಸತ್ಯಶರಣರನುಭಾವವ! ಇಂತಾಗಿ ಚೆನ್ನಮಲ್ಲಿಕಾರ್ಜುನಯ್ಯನ ಶರಣರ ಅನುಭಾವದಲ್ಲಿ ನಲಿನಲಿದಾಡು ಕಂಡೆಯಾ ಎಲೆ ಮನವೇ! ೨೭೪. ವನವೆಲ್ಲ ಕಲ್ಪತರು! ಗಿಡುವೆಲ್ಲ ಮರುಜೇವಣಿ! ಶಿಲೆಗಳೆಲ್ಲ ಪರುಷ! ನೆಲವೆಲ್ಲ ಅವಿಮುಕ್ತ ಕ್ಷೇತ್ರ! ಜಲವೆಲ್ಲ ನಿರ್ಜರಾಮೃತ! ಮೃಗವೆಲ್ಲ ಪುರುಷಮೃಗ! ಎಡರುವ ಹರಳೆಲ್ಲ ಚಿಂತಾಮಣಿ! ಚೆನ್ನಮಲ್ಲಿಕಾರ್ಜುನಯ್ಯನ ನಚ್ಚಿನ ಗಿರಿಯ ಸುತ್ತಿ ನೋಡುತ ಬಂದು, ಕದಳಿಯ ಬನವ ಕಂಡೆ ನಾನು ೨೭೫. ತನುವೆಲ್ಲ ...

ಸರ್ವಜ್ಞನ ವಚನಗಳು - 1 ರಿಂದ 10

ಸರ್ವಜ್ಞನ ವಚನಗಳು -  1 ರಿಂದ 20 ೧. ನಂದಿಯನು ಏರಿದನ ಚಂದಿರನ ಮುಡಿದವನ ಕಂದನಂ ಬೇಡಿ ನೆನೆವುತ್ತ ಮುಂದೆ ಹೇಳುವೆನು ಸರ್ವಜ್ಞ ೨. ಮುನ್ನ ಕಾಲದಲಿ ಪನ್ನಗಧರನಾಳು ಎನ್ನೆಯ ಪೆಸರು, ಪುಷ್ಪದತ್ತನು ಎಂದು ಮನಿಪರು ದಯದಿ ಸರ್ವಜ್ಞ ೩. ಅಂದಿನ ಪುಷ್ಪದತ್ತ ಬಂದ ವರರುಚಿಯಾಗಿ ಮುದವ ಸಾರೆ, ಸರ್ವಜ್ಞನೆಂದೆನಿಸಿ ನಿಂದವನು ನಾನೆ ಸರ್ವಜ್ಞ ೪. ಸಣ್ಣನೆಯ ಮಳಲೊಳಗೆ ನುಣ್ಣನೆಯ ಶಿಲೆಯೊಳಗೆ ಬಣ್ಣೆಸಿಬರೆದ ಪಟದೊಳಗೆಯಿರುವಾತ ತಣ್ಣೊಳಗೆ ಇರನೇ ಸರ್ವಜ್ಞ ೫. ಹೊಲಸು ಮಾಂಸದ ಹುತ್ತ ಎಲುವಿನಾ ಹಂದರವು ಹೊಲೆಬಲಿದ ತನುವಿನೊಳಗಿರ್ದುಮದರೊಳಗೆ ಕುಲವನರಸುವರೆ ಸರ್ವಜ್ಞ ೬. ಎಲುವಿನೀ ಕಾಯಕ್ಕೆ ಸಲೆ ಚರ್ಮದ ಹೊದಿಕೆ ಮಲ ಮೂತ್ರ ಕ್ರಿಮಿಗಳೊಳಗಿರ್ದ ದೇಹಕ್ಕೆ ಕುಲವಾವುದಯ್ಯ ಸರ್ವಜ್ಞ ೭. ಸರ್ವಜ್ಞನೆಂಬುವನು ಗರ್ವದಿಂದಾದವನೆ ? ಸರ್ವರೊಳಗೊಂದು ನುಡಿಗಲಿತು ವಿದ್ಯೆಯ ಪರ್ವತವೇ ಆದ ಸರ್ವಜ್ಞ ೮. ಗುರುವಿನಾ ವಿಸ್ತರದ, ಪರಿಯನಾನೇನೆಂಬೆ ಮೆರೆವ ಬ್ರಹ್ಮಾಂಡದೊಳಹೊರಗೆ ಅವ ಬೆಳಗಿ ಪರಿಪೂರ್ಣನಿರ್ಪ ಸರ್ವಜ್ಞ ೯. ಊರಿಂಗೆ ದಾರಿಯನು ಆರು ತೋರಿದರೇನು? ಸಾರಾಯದಾ ನಿಜವ ತೋರುವ ಗುರುವು ತಾ ನಾರಾದರೇನು? ಸರ್ವಜ್ಞ ೧೦. ಪರತತ್ವ ತನ್ನೊಳಗೆ ಎರವಿಲ್ಲದಿರುತಿರ್ದು ಪರದೇಶಿಯಂತೆ ಇರುತಿರ್ಪಯೋಗಿಯನು ಪರಮಗುರುವೆಂಬೆ ಸರ್ವಜ್ಞ

ಅಕ್ಕನ ವಚನಗಳು - 301 ರಿಂದ 310 ರವರೆಗೆ

Dear friends, Daily I will post Basavannana Vachanagalu , Sarvagnana Vachanagalu , Akka Mahadevi Vachana Allama Prabhudevara Vachanagalu . Please follow my post and post your valuable comments.   ೩೦೧. ಕಾಮನ ತಲೆಯ ಕೊರೆದು, ಕಾಲನ ಕಣ್ಣ ಕಳೆದು ಸೋಮಸೂರ್ಯರ ಹರಿದು ಹುಡಿಮಾಡಿ ತಿಂಬವಳಿಂಗೆ ನಾಮವನಿಡಬಲ್ಲವರಾರು ಹೇಳಿರೆ! ನೀ ಮದುವಳಿಗನಾಗಿ ನಾ ಮದುವಳಿಗಿತಿಯಾಗಿ ಯವನ(=ಆನಲನ?) ಕೂಡುವ ಮರುತನಂತೆ (?) ನೋಡಾ, ಶ್ರೀಗಿರಿ ಚೆನ್ನಮಲ್ಲಿಕಾರ್ಜುನ ೩೦೨. ಬಸವನ ಭಕ್ತಿ ಕೊಟ್ಟಣದ ಮನೆ ಸಿರಿಯಾಳನ ಭಕ್ತಿ ಕಸಬಗೇರಿ ಸಿಂಧುಬಲ್ಲಾಳನ ಭಕ್ತಿ ಪರದಾರದ್ರೋಹ ಉಳಿದಾದ[+ಟ}ಮಟ ಉದಾಸೀನ ದಾಸೋಹ ಮಾಡುವವರ ದೈನ್ಯವೆಂಬ ಭೂತ ಸೋಂಕಿತು ಮಣ್ಣಿನ ಮನೆಯ ಕಟ್ಟಿ ಮಾಯಾಮೋಹಿನಿಯೆಂಬ ಮಹೇಂದ್ರಜಾಲದೊಳಗಾಗಿ ಮಾಡುವ ಮಾಟ ಭಕ್ತನಲ್ಲಿ ಉಂಡು ಉದ್ದಂಡ ವೃತ್ತಿಯಲ್ಲಿ ನಡೆದವರು ಶಿವನಲ್ಲ ಇವರು ದೇವಲೋಕ ಮರ್ತ್ಯಲೋಕಕ್ಕೆ ಹೊರಗು ಶ್ರೀಗಿರಿ ಚೆನ್ನಮಲ್ಲಿಕಾರ್ಜುನ, ನನ್ನ ಭಕ್ತಿ ನಿನ್ನೊಳಗೈಕ್ಯವಾಯಿತಾಗಿ ನಿರ್ವಯಲಾದೆ ಕಾಣಾ! ೩೦೩. ಅನ್ನವ ನೀಡುವವರಿಗೆ ಧಾನ್ಯವೆ [ಶಿವ]ಲೋಕ ಅರ್ಥವ ಕೊಡುವವರಿಂಗೆ ಪಾಷಾಣವೆ [ಶಿವ]ಲೋಕ ಹೆಣ್ಣು-ಹೊನ್ನು-ಮಣ್ಣು ಮೂರನೂ ಕಣ್ಣಿನಲ್ಲಿ ನೋಡಿ, ಕಿವಿಯಲಿ ಕೇಳಿ ಕೈ[ಯಲಿ] ಮುಟ್ಟಿ ಮಾಡುವ ಭಕ್ತಿ ಸಣ್ಣವರ ಸಮಾರಾಧನೆಯಾಯಿತು ತನ್ನನಿತ್ತು ತುಷ್ಟಿವಡೆವರನೆನಗೆ ತ...