Dear friends,
Daily I will post Basavannana Vachanagalu, Sarvagnana Vachanagalu, Akka Mahadevi Vachana
Allama Prabhudevara Vachanagalu.
೩೪೧.
ಅರಸು-ವಿಚಾರ, ಸಿರಿಯು-ಶೃಂಗಾರ
ಸ್ಥಿರವಲ್ಲ ಮಾನವ!
ಕೆಟ್ಟಿತ್ತು ಕಲ್ಯಾಣ ಹಾಳಾಯಿತ್ತು ನೋಡಾ!
ಒಬ್ಬ ಜಂಗಮನಭಿಮಾನದಿಂದ
ಚಾಳುಕ್ಯರಾಯನಾಳ್ವಿಕೆ ತೆಗೆಯಿತ್ತು
ಸಂದಿತ್ತು, ಕೂಡಲಸಂಗಮದೇವ,
ನಿನ್ನ ಕವಳಿಗೆಗೆ.
೩೪೨.
ಬೇವಿನ ಬೀಜವ ಬಿತ್ತಿ,
ಬೆಲ್ಲದ ಕಟ್ಟೆಯ ಕಟ್ಟಿ,
ಆಕಳ ಹಾಲನೆರೆದು,
ಜೇನುತುಪ್ಪವ ಹೊಯ್ದರೆ
ಸಿಹಿಯಾಗಬಲ್ಲುದೆ ಕಹಿಯಹುದಲ್ಲದೆ ?
ಶಿವಭಕ್ತರಲ್ಲದವರ ಕೂಡೆ
ನುಡಿಯಲಾಗದು ಕೂಡಲಸಂಗಮದೇವ.
೩೪೩.
ಮಾರಿ ಮಸಣಿ ಎಂಬವು ಬೇರಿಲ್ಲ ಕಾಣಿರೋ!
ಮಾರಿ ಎಂಬುದೇನು ?
ಕಂಗಳು ತಪ್ಪಿ ನೋಡಿದರೆ ಮಾರಿ!
ನಾಲಿಗೆ ತಪ್ಪಿ ನುಡಿದರೆ ಮಾರಿ!
ನಮ್ಮ ಕೂಡಲಸಂಗಯ್ಯನ ನೆನಹ ಮರೆದರೆ ಮಾರಿ!
೩೪೪.
ಆಯುಧವಿಕ್ಕಿದವಂಗೆ ವೀರದ ಮಾತೇಕೆ ?
ಲಿಂಗವು ಅಂತರಿಸಿದವಂಗೆ ಒಳುನುಡಿಯೇಕೆ ?
ಐದೆಯರ ಪೋಚಿ ಇಲ್ಲದವಳಿಗೆ
ಸೌಭಾಗ್ಯದ ಹೂವಿನ ಬಟ್ಟೇಕೆ ?
ಸತ್ಯನಲ್ಲದವಂಗೆ ನಿತ್ಯನೇಮವೇಕೆ ?
ಕರ್ತಾರ, ನಿನ್ನ ಒಲವಿಲ್ಲದವಂಗೆ
ಶಂಭುವಿನ ಬಂಧುಗಳೇಕೆ ?
ಕೂಡಲಸಂಗಮದೇವಯ್ಯ
ನೀವಿಲ್ಲದವಂಗೆ ಶಿವಾಚಾರದ ಮಾತೇಕೆ ?
೩೪೫.
ಸಿಂಗದ ನಡು ಮುರಿಯಲಾ ಸಿಂಗವೇಬಾತೆ!
ಸೊಂಡಿಲು ಮುರಿದರೆ ಆ ಗಜವೇಬಾತೆ!
ಸಂಗ್ರಾಮದಲ್ಲಿ ಧೀರನುಳಿಯೆ ಆ ಧೀರತ್ವವೇಬಾತೆ!
ಸಿಂಗಾರದ ಮೂಗು ಹೋದರಾ ಶೃಂಗಾರವೇಬಾತೆ!
ನಿಜತುಂಬಿದ ಭಕ್ತಿ ತುಳುಕಾಡದವರ ಸಂಗವೇಬಾತೆ!
ಕೂಡಲಸಂಗಮದೇವ.
೩೪೬.
ಗೀಜಗನ ಗೂಡು, ಕೋಡಗದಣಲ ಸಂಚ,
ಬಾದುಮನ ಮದುವೆ, ಬಾವಲನ ಬಿದ್ದಿನಂತೆ:
ಜೂಜುಗಾರನ ಮಾತು, ಬೀದಿಯ ಗುಂಡನ ಸೊಬಗು;
ಓಡಿನೊಳಗಗೆಯ ಹೊಯ್ದಂತೆ ಕಾಣಿರೇ;
ಶಿವನಾದಿಯಂತುವನರಿಯದವನ ಭಕ್ತಿ
ಸುಖಶೋಧನೆಗೆ ಮದ್ದ ಕೊಂಡಂತೆ
ಕೂಡಲಸಂಗಮದೇವ.
೩೪೭.
ತೊತ್ತಿನ ಕೊರಳಲ್ಲಿ
ಹೊಂಬಿತ್ತಾಳಿಯ ಸಿಂಗಾರವ ಮಾಡಿದಂತೆ!
ಕುಚಿತ್ತರ ಸಂಗ ಸುಸಂಗಿಗೆ ಸಂಗವಲ್ಲ.
ಗುರುಗುಂಜಿ ಮಾಣಿಕಕ್ಕೆ ಸರಿಯಪ್ಪುದೆ ?
ಕೂಡಲಸಂಗಮದೇವ.
೩೪೮.
ಆನೆಯನೇರಿಕೊಂಡು ಹೋದಿರಿ ನೀವು,
ಕುದುರೆಯನೇರಿಕೊಂಡು ಹೋದಿರಿ ನೀವು.
ಕುಂಕುಮ-ಕಸ್ತುರಿಯ ಪೂಸಿಕೊಂಡು ಹೋದಿರಿ ಅಣ್ಣಾ;
ಸತ್ಯದ ನಿಲುವನರಿಯದೆ ಹೋದಿರಲ್ಲಾ!
ಸದ್ಗುಣವೆಂಬ ಫಲವ ಬಿತ್ತದೆ ಬೆಳೆಯದೆ ಹೋದಿರಲ್ಲಾ
ಅಹಂಕಾರವೆಂಬ ಮದಗಜವನೇರಿ
ವಿಧಿಗೆ ಗುರಿಯಾಗಿ ನೀವು ಕೆಟ್ಟು ಹೋದಿರಲ್ಲಾ!
ನಮ್ಮ ಕೂಡಲಸಂಗಮದೇವನನರಿಯದೆ
ನರಕಕ್ಕೆ ಭಾಜನವಾದಿರಲ್ಲಾ!
೩೪೯.
ಇಂದ್ರಿಯನಿಗ್ರಹವ ಮಾಡಿದರೆ
ಹೊಂದುವವು ದೋಷಂಗಳು.
ಮುಂದೆ ಬಂದು ಕಾಡುವವು ಪಂಚೇಂದ್ರಿಯಂಗಳು.
ಸತಿಪತಿರತಿಸುಖವ ಬಿಟ್ಟರೇ ಸಿರಿಯಾಳ-ಚೆಂಗಳೆಯರು ?
ಸತಿಪತಿರತಿಸುಖ ಭೋಗೋಪಭೋಗವಿಳಾಸವ
ಬಿಟ್ಟರೇ ಸಿಂಧುಬಲ್ಲಾಳನವರು ?
ನಿಮ್ಮ ಮುಟ್ಟಿ, ಪರಧನ ಪರಸತಿಯರಿಗೆಳಸಿದರೆ
ನಿಮ್ಮ ಚರಣಕ್ಕೆ ದೂರ ಕೂಡಲಸಂಗಮದೇವ.
೩೫೦.
ನೋಡಲಾಗದು, ನುಡಿಸಲಾಗದು ಪರಸ್ತ್ರೀಯರ;
ಬೇಡ ಕಾಣಿರೋ!
ತಗರ ಬೆನ್ನಲಿ ಹರಿವ ಸೊಣಗನಂತೆ;
ಬೇಡ ಕಾಣಿರೋ!
ಒಂದಾಸೆಗೆ ಸಾಸಿರ ವರುಷ
ನರಕದಲದ್ದುವ ಕೂಡಲಸಂಗಮದೇವ.
Comments
Post a Comment