Dear friends,
Daily I will post Basavannana Vachanagalu, Sarvagnana Vachanagalu, Akka Mahadevi Vachana
Allama Prabhudevara Vachanagalu.
೩೫೧.
ತೊರೆಯ ಮೀವ ಅಣ್ಣಗಳಿರಾ,
ತೊರೆಯ ಮೀವ ಸ್ವಾಮಿಗಳಿರಾ,
ತೊರೆಯಿಂ ಭೋ, ತೊರೆಯಿಂ ಭೋ!
ಪರನಾರಿಯ ಸಂಗವ ತೊರೆಯಿಂ ಭೋ!
ಪರಧನದಾಮಿಷವ ತೊರೆಯಿಂ ಭೋ!
ಇವ ತೊರೆಯದೇ, ಹೋಗಿ ತೊರೆಯ ಮಿಂದರೆ
ಬರುದೊರೆ ಹೋಹುದು ಕೂಡಲಸಂಗಮದೇವ.
೩೫೨.
ಹುತ್ತವ ಕಂಡಲ್ಲಿ ಹಾವಾಗಿ,
ನೀರ ಕಂಡಲ್ಲಿ ಹೊಳೆಯಾದವನ ಮೆಚ್ಚುವನೆ ?
ಬಾರದ ಭವಕ್ಕೆ ಬರಿಸುವನಲ್ಲದೆ ಮೆಚ್ಚುವನೆ ?
ಅಘೋರ ನರಕವನುಣಿಸುವನಲ್ಲದೆ ಮೆಚ್ಚುವನೆ ?
ಅಟಮಟದ ಭಕ್ತರ ಕಂಡರೆ
ಕೋಟಲೆಗೊಳಿಸುವನು ಕೂಡಲಸಂಗಯ್ಯನು.
೩೫೩.
ಕುಳ್ಳಿದ್ದು ಲಿಂಗವ ಪೂಜಿಸಿ
ಅಲ್ಲದಾಟವನಾಡುವರಯ್ಯ;
ಬೆಳ್ಳೆತ್ತಿನ ಮರೆಯಲ್ಲಿದ್ದು
ಹುಲ್ಲೆಗೆ ಅಂಬ ತೊಡುವಂತೆ!
ಕಳ್ಳ-ಹಾದರಿಗರ ಕೈಯಲು ಪೂಜೆಯ ಕೊಳ್ಳ
ನಮ್ಮ ಕೂಡಲಸಂಗಮದೇವ.
೩೫೪.
ತನುಶುಚಿಯಿಲ್ಲದವನ ದೇಹಾರವೇಕೆ ?
ದೇವರು ಕೊಡನೆಂಬ ಭ್ರಾಂತೇಕೆ ?
ಮನಕ್ಕೆ ಮನವೇ ಸಾಕ್ಷಿ ಸಾಲದೆ ಲಿಂಗ ತಂದೆ ?!
ಹೇಂಗೆ ಮನ ಹಾಂಗೆ ಘನ!
ತಪ್ಪದು ಕೂಡಲಸಂಗಮದೇವ.
೩೫೫.
ನೂರನೋದಿ ನೂರ ಕೇಳಿದರೇನು ?
ಆಶೆ ಹರಿಯದು, ರೋಷ ಬಿಡದು!
ಮಜ್ಜನಕ್ಕೆರೆದು ಫಲವೇನು ?
ಮಾತಿನಂತೆ ಮನವಿಲ್ಲದ
ಜಾತಿ-ಡೊಂಬರ ನೋಡಿ ನಗುವನಯ್ಯ
ಕೂಡಲಸಂಗಮದೇವರು.
೩೫೬.
ಗುರೂಪದೇಶ ಮಂತ್ರವೈದ್ಯ!
ಜಂಗಮೋಪದೇಶ ಶಸ್ತ್ರವೈದ್ಯ ನೋಡಾ!
ಭವರೋಗವ ಕಳೆವ ಪರಿಯ ನೋಡಾ!
ಕೂಡಲಸಂಗನ ಶರಣರ ಅನುಭಾವ
ಮಡಿವಾಳನ ಕಾಯಕದಂತೆ!
೩೫೭.
ಶ್ವಪಚನಾದರೇನು ಲಿಂಗಭಕ್ತನೇ ಕುಲಜನು.
ನಂಬಿ ನಂಬದಿದ್ದರೆ, ಸಂದೇಹಿ ನೋಡಾ!
ಕಟ್ಟಿದರೇನು, ಮುಟ್ಟಿದರೇನು,
ಪೂಸಿದರೇನು ಮನಮುಟ್ಟದನ್ನಕ ?
ಭಾವಶುದ್ಧವಿಲ್ಲದವಂಗೆ ಭಕ್ತಿ ನೆಲೆಗೊಳ್ಳದು
ಕೂಡಲಸಂಗಮದೇವನೊಲಿದವಂಗಲ್ಲದೆ.
೩೫೮.
ಅರಗಿನ ಪುತ್ಧಳಿಗೆ ಉರಿಯ ನಾಲಗೆ ಹೊಯ್ದು
ಮಾತಾಡುವ ಸರಸ ಬೇಡ!
ಬೆಣ್ಣೆಯ ಬೆನಕಂಗೆ ಕೆಂಡದುಂಡಲಿಗೆಯ ಮಾಡಿ
ಚಲ್ಲವಾಡಿದರೆ ಹಲ್ಲು ಹೋಹುದು!
ಕೂಡಲಸಂಗನ ಶರಣರೊಡನೆ ಸರಸವಾಡಿದರೆ
ಅದು ವಿರಸ ಕಾಣಿರಣ್ಣ.
೩೫೯.
ಹಾವಿನ ಹೆಡೆಗಳ ಕೊಂಡು
ಕೆನ್ನೆಯ ತುರಿಸಿಕೊಂಬಂತೆ,
ಉರಿವ ಕೊಳ್ಳಿಯ ಕೊಂಡು
ಮಂಡೆಯ ಸಿಕ್ಕ ಬಿಡಿಸುವಂತೆ,
ಹುಲಿಯ ಮೀಸೆಯ ಹಿಡಿದುಕೊಂಡು
ಒಲೆದುಯ್ಯಲನಾಡುವಂತೆ,
ಕೂಡಲಸಂಗನ ಶರಣರೊಡನೆ ಮರೆದು ಸರಸವಾಡಿದರೆ
ಸುಣ್ಣಕಲ್ಲ ಮಡಿಲಲ್ಲಿ ಕಟ್ಟಿಕೊಂಡು ಮಡುವ ಬಿದ್ದಂತೆ!
೩೬೦.
ಉರಿವ ಕೊಳ್ಳಿಯ ಮಂಡೆಯಲಿಕ್ಕಿದಡೆ
ಉರಿವುದು ಮಾಣ್ಬುದೇ ?
ಕಲ್ಲ ಗುಗ್ಗುರಿಯ ಮೆಲಿದರೆ
ಹಲ್ಲು ಹೋಹುದು ಮಾಣ್ಬುದೇ ?
ಶರಣರೊಡನೆ ಸರಸವಾಡಿದರೆ
ನರಕ ತಪ್ಪದು ಕಾಣಾ ಕೂಡಲಸಂಗಮದೇವ.
Comments
Post a Comment