Dear friends,
Daily I will post Basavannana Vachanagalu, Sarvagnana Vachanagalu, Akka Mahadevi Vachana
Allama Prabhudevara Vachanagalu.
೪೮೧.
ದಿಟ ಮಾಡಿ ಪೂಜಿಸಿದರೆ ಸಟೆ ಮಾಡಿ ಕಳೆವೆ.
ಸಟೆ ಮಾಡಿ ಪೂಜಿಸಿದರೆ ದಿಟ ಮಾಡಿ ಕಳೆವೆ.
ಏನೆಂಬೆನೆಂತೆಂಬೆ!
ಸುಖಕ್ಕೆ ತುಂಬಿದ ದೀವಿಗೆ ಮನೆಯೆಲ್ಲವ ಸುಟ್ಟಂತೆ
ಆನು ಮಾಡಿದ ಭಕ್ತಿ
ಎನಗಿಂತಾಯಿತ್ತು ಕೂಡಲಸಂಗಮದೇವ.
೪೮೨.
ಎಂಬತ್ತೆಂಟು ಪವಾಡವ ಮೆರೆದು
ಹಗರಣದ ಚೋಹದಂತಾಯಿತ್ತೆನ್ನ ಭಕ್ತಿ;
ತನುವಿನೊಳಗೆ ಮನ ಸಿಲುಕದೆ,
ಮನದೊಳಗೆ ತನು ಸಿಲುಕದೆ
ತನು ಅಲ್ಲಮನಲ್ಲಿ ಸಿಲುಕಿತ್ತು!
ಮನ ಚೆನ್ನಬಸವಣ್ಣನಲ್ಲಿ ಸಿಲುಕಿತ್ತು
ನಾನೇತರಲ್ಲಿ ನೆನೆವೆನಯ್ಯ
ಕೂಡಲಸಂಗಮದೇವ ? !
೪೮೩.
ಬಸವ ಬಾರಯ್ಯ,
ಮರ್ತ್ಯಲೋಕದೊಳಗೆ ಭಕ್ತರುಂಟೆ ಹೇಳಯ್ಯ ?
ಮತ್ತಾರು ಇಲ್ಲಯ್ಯ, ಮತ್ತಾರು ಇಲ್ಲಯ್ಯ !
ನಾನೊಬ್ಬನೇ ಭಕ್ತನು,
ಮರ್ತ್ಯಲೋಕದೊಳಗಣ ಭಕ್ತರೆಲ್ಲರೂ
ಜಂಗಮಲಿಂಗ ನೀನೇ ಅಯ್ಯ ಕೂಡಲಸಂಗಮದೇವ!!
೪೮೪.
ಭಕ್ತ, ಮಾಹೇಶ್ವರ, ಪ್ರಸಾದಿ,
ಪ್ರಾಣಲಿಂಗ, ಶರಣನೈಕ್ಯನು
ಮೆಲ್ಲಮೆಲ್ಲನೆ ಆದೆನೆಂಬನ್ನಬರ,
ನಾನು ವಜ್ರದೇಹಿಯೆ ?
ನಾನೇನು ಅಮೃತವ ಸೇವಿಸಿದೆನೆ ?
ನಾನು ಮರುಜೇವಣಿಯ ಕೊಂಡೆನೆ ?
ನುಡಿದ ನುಡಿಯೊಳಗೆ ಷಡುಸ್ಥಲ ಬಂದು
ನನ್ನ ಮನವನಿಂಬುಗೊಳದಿದ್ದರೆ
ಸುಡುವೆನೀ ತನುವ ಕೂಡಲಸಂಗಮದೇವ.
೪೮೫.
ತಾಪತ್ರಯವೆಂದರೆ ರೂಪ ಕಾಣುತ್ತ ಕನಲಿದ!
ಕೋಪದಲ್ಲಿ ಶಿವಕಳೆಯದ ಕರಡಿಗೆಯನೆ ಮುರಿದ!
ಧೂಪಗುಂಡಿಗೆಯನೊಡೆದ!
ದೀಪದಾರತಿಯ ನಂದಿಸಿದ!
ಬಹು ಪರಿಣಾಮದೋಗರವ ತುಡುಕಿದ!
ಪಾಪಕರ್ಮ, ಕೂಡಲಸಂಗಮದೇವಾ,
ನಿಮ್ಮ ಶರಣ.
೪೮೬.
ಜಗವ ಸುತ್ತಿಪ್ಪುದು ನಿನ್ನ ಮಾಯೆಯಯ್ಯ,
ನಿನ್ನ ಸುತ್ತಿಪ್ಪುದು ಎನ್ನ ಮನ ನೋಡಯ್ಯ!
ನೀನು ಜಗಕ್ಕೆ ಬಲ್ಲಿದನು,
ನಾನು ನಿನಗೆ ಬಲ್ಲಿದನು ಕಂಡಯ್ಯ!
ಕರಿಯು ಕನ್ನಡಿಯೊಳಡಗಿದಂತಯ್ಯ -
ಎನ್ನೊಳಗೆ ನೀನಡಗಿದೆ ಕೂಡಲಸಂಗಮದೇವ.
೪೮೭.
ಎಲ್ಲರ ಗಂಡರು ಬೇಂಟೆಯ ಹೋದರು.
ನೀನೇಕೆ ಹೋಗೆ ಎಲೆ ಗಂಡನೆ ?
ಸತ್ತುದ ತಾರದಿರು; ಕೈ ಮುಟ್ಟಿ ಕೊಲ್ಲದಿರು!
ಅಡಗಿಲ್ಲದೆ ಮನೆಗೆ ಬಾರದಿರು!
ದೇವರ ಧರ್ಮದಲೊಂದು
ಬೇಂಟೆ ದೊರೆಕೊಂಡರೆ
ಕೂಡಲಸಂಗಮದೇವಂಗರ್ಪಿತ ಮಾಡುವೆ ಎಲೆ ಗಂಡನೆ,
೪೮೮.
ಗ್ರಹ ಬಂದು ಆವರಿಸಲೊಡನೆ ತನ್ನ ಮರೆಸುವುದು;
ಮತ್ತೊಂದಕಿಂಬುಗೊಡಲೀಯದಯ್ಯ!
ಕೂಡಲಸಂಗಮದೇವನ ಅರಿವು
ಅನುಪಮವಾಗಲೊಡನೆ,
ಬೆವಹಾರದೊಳಗಿರಲೀಯದಯ್ಯ!
೪೮೯.
ಮನೆಯ ಗಂಡನ ಮನೆವಾರ್ತೆಯನೇನ ಹೇಳುವೆನವ್ವ!
ಅಂಗವಿದ್ಯವನೊಲ್ಲ,
ಕಂಗಳೊಳಗಣ ಕಸವ ಕಳೆದಲ್ಲದೆ ನೋಡಲೀಯ!
ಕಯ್ಯ ತೊಳೆದಲ್ಲದೆ ಮುಟ್ಟಲೀಯ,
ಕಾಲ ತೊಳೆದಲ್ಲದೆ ಹೊದ್ದಲೀಯ.
ಇಂತೀ ಸರ್ವಾಂಗ ತಲೆದೊಳೆದ ಕಾರಣ
ಕೂಡಲಸಂಗಮದೇವನೆನ್ನ
ಕೂಡಿಕೊಂಡನವ್ವ.
೪೯೦.
ಅಯ್ಯ, ನೀ ಮಾಡಲಾದ ಜಗತ್ತು;
ಅಯ್ಯ, ನೀ ಮಾಡಲಾದ ಸಂಸಾರ;
ಅಯ್ಯ, ನೀ ಮಾಡಲಾದ ಮರವೆ;
ಅಯ್ಯ, ನೀ ಮಾಡಲಾದ ದುಃಖ!
ಅಯ್ಯ, ನೀ ಬಿಡಿಸಿದರೆ ಬಿಟ್ಟಿತ್ತು ತಾಮಸವಯ್ಯ!
ನಾನೀ ಮಾಯೆಯ ಗೆದ್ದೆನೆಂಬ ಹಮ್ಮಿದೇಕೆ,
ಕೂಡಲಸಂಗಮದೇವ ?
Comments
Post a Comment